ರಾಯಚೂರು: ‘ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆದಿದೆ. ಅದು ಈಗ ಜಾತಿ ಸ್ವರೂಪ ಪಡೆದುಕೊಂಡಿದೆ’ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.
ಒಕ್ಕಲಿಗರು ಡಿಕೆಶಿವಕುಮಾರ ಪರ, ಹಿಂದುಳಿದವರು ಸಿದ್ದರಾಮಯ್ಯ ಪರ ಎಂದು ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಆಗಲು ಸ್ಪರ್ಧೆ ನಡೆದಿರುವುದು ಕಾಂಗ್ರೆಸ್ ಸಂಸ್ಕೃತಿಯೇ ಎಂದು ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟ ಮಾಡಿರುವುದು ಜಾತಿಯಿಂದ ಅಲ್ಲ. ಚುನಾವಣೆ ವೇಳೆ ಜಾತಿ ವಿಷ ಬೀಜ ಬಿತ್ತುತ್ತಾರೆ. ಮುಸಲ್ಮಾನರಂತೂ ಅವರ ಜೊತೆಗೆ ಇದ್ದಾರೆ. ಮುಖ್ಯಮಂತ್ರಿ ಸ್ಥಾನವೂ ಜಾತಿ ರೂಪವಾಗಿ ಬೆಳೆಯುತ್ತಿರುವುದು ನಾಚಿಕೆಗೇಡು ಸಂಗತಿಯಾಗಿದೆ ಎಂದು ಟೀಕಿಸಿದರು.
ಬಿಜೆಪಿಯಲ್ಲೂ ಗುಂಪುಗಾರಿಗೆ ಇದೆ. ಕುಟುಂಬ ರಾಜಕಾರಣ, ಹೊಂದಾಣಿಕೆ ರಾಜಕಾರಣ ಎಲ್ಲ ರಾಜಕೀಯ ಪಕ್ಷಗಳಲ್ಲೂ ಇದೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದರು.
ಮಠ-ಮಾನ್ಯಗಳಿಗೆ ಕಾಂಗ್ರೆಸ್ ಸರ್ಕಾರವೂ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಸದಾನಂದ ಗೌಡ ಮುಖ್ಯಮಂತ್ರಿಯಾದಾಗ ₹ 109 ಕೋಟಿ ಹಾಗೂ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದಾಗ ₹ 129 ಕೋಟಿ ಮಠಗಳಿಗೆ ಕೊಟ್ಟರು. ತಿಂಥಿಣಿ ಶ್ರೀಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿಸಿದರು.
ಕಾಂಗ್ರೆಸ್ಗೆ ಕುರುಬರ ಮತ ಬೇಕು. ಕುರುಬ ಸಮುದಾಯದ ಅಭಿವೃದ್ಧಿ ಬೇಡ. ಮಠಗಳ ಅಭಿವೃದ್ಧಿಯೂ ಬೇಡ ಎಂದು ವಾಗ್ದಾಳಿ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.