ಸಿಂಧನೂರು: ಅಕಾಲಿಕ ಆಲಿಕಲ್ಲು ಮಳೆ ಸುರಿದ ಪರಿಣಾಮ ತಾಲ್ಲೂಕಿನ ತುರ್ವಿಹಾಳ, ಶ್ರೀನಿವಾಸ ಕ್ಯಾಂಪ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭತ್ತದ ಬೆಳೆ ಹಾನಿಯಾಗಿರುವ ಪ್ರದೇಶಗಳಿಗೆ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿ, ರೈತರೊಂದಿಗೆ ಚರ್ಚಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುರುವಾರ ಸಂಜೆ ಸುರಿದ ಅಕಾಲಿಕ ಆಲಿಕಲ್ಲು ಮಳೆಯಿಂದಾಗಿ ಸಾವಿರಾರು ಎಕರೆಯಲ್ಲಿ ಬೆಳೆದು ನಿಂತಿದ್ದ ಭತ್ತದ ಬೆಳೆಯು ಹಾನಿಯಾಗಿದೆ. ಎಕರೆಗೆ ₹ 30 ಸಾವಿರ ಖರ್ಚು ಮಾಡಿದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದೆ‘ ಎಂದರು.
‘ಮಸ್ಕಿ ಉಪಚುನಾವಣೆ ಮುಗಿದ ಮರುದಿನವೇ ಅಧಿಕಾರಿಗಳು ನಷ್ಟಕ್ಕೀಡಾದ ರೈತರ ಎಲ್ಲ ಜಮೀನುಗಳ ಸರ್ವೆ ಕಾರ್ಯ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು’ ಎಂದರು.
‘2015-16 ರಲ್ಲಿ ಆಲಿಕಲ್ಲು ಮಳೆ ಸುರಿದು ಬೆಳೆಹಾನಿಯಾದ ಸಂದರ್ಭದಲ್ಲಿ ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪ್ರತಿ ಹೆಕ್ಟೇರ್ಗೆ ರೈತರಿಗೆ ₹ 25 ಸಾವಿರ ಪರಿಹಾರ ನೀಡಿತ್ತು. ಅದರಂತೆ ಪ್ರಸ್ತುತ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರವೂ ₹ 25 ಸಾವಿರ ಪರಿಹಾರ ನೀಡುವ ಮೂಲಕ ರೈತರ ನೆರವಿಗೆ ಧಾವಿಸಬೇಕು. ಯಾವುದೇ ಕಾರಣಕ್ಕೂ ರೈತರ ವಿಷಯದಲ್ಲಿ ನಿರ್ಲಕ್ಷ್ಯ ಮಾಡಬಾರದು’ ಎಂದು ಹೇಳಿದರು.
ಮಸ್ಕಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ, ಪಟ್ಟಣ ಪಂಚಾಯಿತಿ ಅಧ್ಯಕ್ಷ ರತ್ನಾಕುಮಾರಿ ಜಗನ್ನಾಥ, ಎಪಿಎಂಸಿ ಮಾಜಿ ಸದಸ್ಯ ಶ್ಯಾಮೀದ್ಸಾಬ, ಕಾಂಗ್ರೆಸ್ ಮುಖಂಡ ಮಲ್ಲನಗೌಡ ದೇವರಮನಿ, ಸಿರಾಜ್ಪಾಷಾ, ಬಾಪುಗೌಡ ದೇವರಮನಿ, ಮಹಾಂತೇಶ ಸಜ್ಜನ್, ಪರ್ವತರೆಡ್ಡಿ, ಶಂಕರಗೌಡ ಪೊ.ಪಾ, ಸುಬ್ಬಾರಾವ್ ಸೇರಿದಂತೆ ರೈತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.