ರಾಯಚೂರು: ‘ಜಿಲ್ಲೆಯಲ್ಲಿ ಈಚೆಗೆ ಸುರಿದ ಮಳೆಯಿಂದಾಗಿ ಹಾನಿಯಾದ ಬೆಳೆಗಳ ಸಮರ್ಪಕ ಸಮೀಕ್ಷೆ, ಪರಿಹಾರ ವಿತರಣೆ ಅಗತ್ಯ. ನಮ್ಮ ಜಮೀನಿಗೆ ಯಾರೂ ಬಂದಿಲ್ಲ. ಸಮೀಕ್ಷೆ ಮಾಡಿಲ್ಲ. ಬೆಳೆಹಾನಿಯಾದರೂ ನಮಗೆ ಇದುವರೆಗೆ ಪರಿಹಾರ ಸಿಕ್ಕಿಲ್ಲ ಎಂದು ಜಿಲ್ಲೆಯ ಯಾವುದೇ ಪ್ರದೇಶದ ರೈತರಿಂದ ದೂರುಗಳು ಕೇಳಿ ಬಂದಲ್ಲಿ ಅಧಿಕಾರಿಗಳನ್ನು ಹೊಣೆಯಾಗಿಸಿ ಕ್ರಮ ಜರುಗಿಸಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಎಚ್ಚರಿಕೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
‘ಬೆಳೆಹಾನಿ ಜಂಟಿ ಸಮೀಕ್ಷೆ ಅಚ್ಚುಕಟ್ಟಾಗಿ ನಡೆಯಬೇಕು. ಹಾನಿಗೊಳಗಾದ ಪ್ರತಿಯೊಂದು ಹೊಲಕ್ಕೂ ಹೋಗಿ ಸರ್ವೆ ಮಾಡಬೇಕು. ಹಾನಿಗೊಳಗಾದ ಪ್ರತಿಯೊಬ್ಬ ರೈತರಿಗೂ ಸಮರ್ಪಕ ಪರಿಹಾರಕ್ಕೆ ಕ್ರಮ ವಹಿಸಬೇಕು’ ಎಂದರು.
‘ಜನ ಜಾನುವಾರ ಜೀವಹಾನಿ, ಮನೆ ಹಾನಿ ಪ್ರಕರಣಗಳಿಗೆ ಸಹ ಕಾಲಮಿತಿಯೊಳಗೆ ಪರಿಹಾರ ನೀಡಲು ಕ್ರಮ ವಹಿಸಬೇಕು’ ಎಂದು ಸೂಚನೆ ನೀಡಿದರು.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಮಾತನಾಡಿ, ‘ಅಧಿಕಾರಿಗಳು ಕಚೇರಿಯಿಂದ ಹೊರಬಂದು ತಂಡವಾಗಿ ಸಮೀಕ್ಷಾ ಕಾರ್ಯದಲ್ಲಿ ಭಾಗಿಯಾಗಬೇಕು. ಪರಿಹಾರ ದಕ್ಕುತ್ತದೆ ಎಂದು ರೈತರಿಗೆ ವಿಶ್ವಾಸ ಬರುವ ಹಾಗೆ ಕಾಳಜಿ ವಹಿಸಿ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು.
‘ಕೆಲವು ಕಡೆಗೆ ವಿದ್ಯುತ್ ಪರಿವರ್ತಕಗಳು ಮುಳುಗಡೆಯಾಗಿವೆ. ಅವುಗಳನ್ನು ಸ್ಥಳಾಂತರಿಸಿ ಹೊಸದಾಗಿ ಅಳವಡಿಸಬೇಕು’ ಎಂದು ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
‘ವಿದ್ಯುತ್ ಪರಿವರ್ತಕಗಳು ಬೇಕು ಎಂದು ರೈತರು ಸಾಲುಗಟ್ಟಿ ನಿಲ್ಲುವಂತಾಗಿದೆ. ಎಲ್ಲಾ ತಾಲೂಕಿನಲ್ಲಿ ವಿದ್ಯುತ್ ಪರಿವರ್ತಕ ಖರೀದಿ ಆಗಬೇಕಿದೆ’ ಎಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಎಸ್.ಪಾಟೀಲ ಸಲಹೆ ಮಾಡಿದರು.
‘ದಾಳಿಂಬೆ ಸೇರಿದಂತೆ ಬೇರೆ ಬೇರೆ ತೋಟಗಾರಿಕಾ ಬೆಳೆಗಳಿಗೆ ಮಸ್ಕಿ ತಾಲೂಕಿನಲ್ಲಿ ಹಾನಿಯಾಗಿದೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಬೇಕು. ರಸ್ತೆಗಳ ದುರಸ್ತಿ ಮಾಡಬೇಕು’ ಎಂದು ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ ಅವರು ತೋಟಗಾರಿಕೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ನಿತೀಶ್ ಕೆ ಮಾತನಾಡಿ,‘ಜಿಲ್ಲೆಯಲ್ಲಿ ಕಳೆದ ಶನಿವಾರದಿಂದಲೇ ಜಂಟಿ ಸಮೀಕ್ಷೆ ಆರಂಭವಾಗಿದೆ. ತೀವ್ರ ಮಳೆಯಿಂದಾಗಿ ಈಗಾಗಲೇ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 25,000 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆಗೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಇದುವರೆಗೂ ಶೇ 18 ರಷ್ಟು ಸಮೀಕ್ಷೆ ಆಗಿದೆ. ಇನ್ನು ಮುಂದುವರಿದಿದೆ’ ಎಂದು ಸಭೆಗೆ ಮಾಹಿತಿ ನೀಡಿದರು.
ಶಾಸಕರಾದ ಹಂಪಯ್ಯ ನಾಯಕ, ಕರೆಮ್ಮ ಜಿ.ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ., ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಮತ್ತು ಇತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
‘ರಾಜ್ಯ ಸರ್ಕಾರದಿಂದ ರೈತರಿಗೆ ಸ್ಪಂದನೆ
’‘ಜಿಲ್ಲಾಧಿಕಾರಿ ಖಾತೆಯಲ್ಲಿ ₹26 ಕೋಟಿ ಹಣ ಇದೆ. ಪರಿಹಾರ ಕಾರ್ಯಕ್ಕೆ ಯಾವುದೇ ರೀತಿಯ ಹಣಕಾಸಿನ ಕೊರತೆಯಿಲ್ಲ. ನಮ್ಮ ಸರ್ಕಾರವು ರೈತರಿಗೆ ಸ್ಪಂದಿಸುತ್ತಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ‘ಮುಂಗಾರು ಹಂಗಾಮಿನ ಅವಧಿಯಲ್ಲಿ ಜೀವಹಾನಿಯ 7 ಪ್ರಕರಣಗಳಿಗೆ ತಲಾ ₹5 ಲಕ್ಷದಂತೆ ಒಟ್ಟು ₹35 ಲಕ್ಷ ಪರಿಹಾರವನ್ನು ಈಗಾಗಲೇ ನೀಡಲಾಗಿದೆ. 11 ಸಣ್ಣ ಮತ್ತು 4 ದೊಡ್ಡ ಜಾನುವಾರು ಜೀವಹಾನಿ ಪ್ರಕರಣಗಳಿಗೆ ಪರಿಹಾರ ಒದಗಿಸಲಾಗಿದೆ. ಜೀವಹಾನಿ ಮನೆ ಹಾನಿ ಪ್ರಕರಣಗಳಿಗೆ ಕಾಲಮಿತಿಯೊಳಗೆ ಪರಿಹಾರ ಒದಗಿಸಲು ಸೂಚಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.