ADVERTISEMENT

ಆದ್ಯತೆಯಿಂದ ಮೂಲಸೌಕರ್ಯ ಒದಗಿಸಿ

ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ನವೆಂಬರ್ 2020, 13:42 IST
Last Updated 4 ನವೆಂಬರ್ 2020, 13:42 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅವರು ಮಹಾತ್ವಕಾಂಕ್ಷಿ ಜಿಲ್ಲೆ ಕುರಿತ ಪ್ರಗತಿ ಪರಿಶೀಲನೆ ಸಭೆ ಬುಧವಾರ ನಡೆಸಿದರು
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅವರು ಮಹಾತ್ವಕಾಂಕ್ಷಿ ಜಿಲ್ಲೆ ಕುರಿತ ಪ್ರಗತಿ ಪರಿಶೀಲನೆ ಸಭೆ ಬುಧವಾರ ನಡೆಸಿದರು   

ರಾಯಚೂರು: ಮಹತ್ವಾಕಾಂಕ್ಷಿ ಜಿಲ್ಲೆಗಳ ಯೋಜನೆಯಡಿ ಆಯ್ಕೆಯಾದ ರಾಯಚೂರು ಜಿಲ್ಲೆಯಲ್ಲಿ ಆದ್ಯತೆಯಿಂದ ಮೂಲ ಸೌಕರ್ಯಗಳನ್ನು ಸಮಪರ್ಕವಾಗಿ ಒದಗಿಸಲು ಅಧಿಕಾರಿಗಳು ಶ್ರಮಿಸಬೇಕು. ಈ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಬೇಕು ಎಂದದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮಹಾತ್ವಕಾಂಕ್ಷಿ ಜಿಲ್ಲೆ ಕುರಿತ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ದೇಶದ 115 ಜಿಲ್ಲೆಗಳು ಅಭಿವೃದ್ಧಿಯಲ್ಲಿ ಅತಿ ಹಿಂದುಳಿದಿರುವುದನ್ನು ಗುರುತಿಸಿ ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ಜಿಲ್ಲೆ ಯೋಜನೆಯನ್ನು ರೂಪಿಸಿದೆ, ಈ ಜಿಲ್ಲೆಗಳಲ್ಲಿ ನೀತಿ ಆಯೋಗದಿಂದ ನಿಗದಿಪಡಿಸಲಾದ ವಿವಿಧ ಮಾನದಂಡಗಳನ್ನು ಏರಿಕೆ ಮಾಡುವ ಮೂಲಕ ಇಲ್ಲಿನ ಜೀವನ ಮಟ್ಟವನ್ನು ಮತ್ತಷ್ಟು ಅಭಿವೃದ್ದಿ ಪಡಿಸಬೇಕಿದ್ದು, ಆರೋಗ್ಯ, ಶಿಕ್ಷಣ, ಕೃಷಿ, ನೀರಾವರಿ, ಕೌಶಲ್ಯಾಭಿವೃದ್ದಿ ಸೇರಿದಂತೆ ವಿವಿಧ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು, ಆ ಮೂಲಕ ಜಿಲ್ಲೆಯನ್ನು ಮೊದಲ ರ‍್ಯಾಂಕ್‌ ತರಬೇಕು ಎಂದರು.

ADVERTISEMENT

ಈ ಸೌಲಭ್ಯಗಳನ್ನು ಸಮಪರ್ಕವಾಗಿ ಒದಗಿಸಬೇಕು, ಅದಕ್ಕಾಗಿ ₹10 ಕೋಟಿ ಅನುದಾನ ನೀಡಲಾಗುತ್ತಿದೆ, ವಿವಿಧ ಮಾನದಂಡಗಳ ಏರಿಕೆಯಲ್ಲಿನ ಕುರಿತು ಕೇಂದ್ರ ಸರ್ಕಾರವು ಪ್ರತಿ ತಿಂಗಳು ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಲಿದೆ. ಪ್ರಧಾನ ಮಂತ್ರಿಗಳು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ನೀತಿ ಆಯೋಗದಡಿ ಆಯ್ಕೆಯಾದ ಜಿಲ್ಲೆಗಳಲ್ಲಿ ಸಾಧಿಸಲಾದ ಪ್ರಗತಿಯ ಕುರಿತು ವರದಿ ಪಡೆಯಲಿದ್ದಾರೆ ಎಂದು ಹೇಳಿದರು.

ಈ ಯೋಜನೆಯಡಿ ನಿಗದಿ ಪಡಿಸಿದ ವಿವಿಧ ಮಾನದಂಡಗಳನ್ನು ಏರಿಕೆ ಮಾಡಲು ಅನುದಾನದ ಕೊರತೆಯಿಲ್ಲ. ಪಿಎಂವೈಜಿ
ಯೋಜನೆಯಡಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಕುರಿತು ಸೂಕ್ತ ಮಾಹಿತಿ ಒದಗಿಸುವಂತೆ ಜಿಲ್ಲಾ
ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಮಹೇಂದ್ರ ಕುಮಾರ್ ಅವರಿಗೆ ಸೂಚಿಸಿದರು.

ಫಲಾನುಭವಿಗಳ ಖಾತೆಗೆ ನೇರವಾಗಿ ಹಣವನ್ನು ಜಮೆ ಮಾಡುವ ಮುನ್ನ ಎಂಐಸಿನಲ್ಲಿ ಅಪಲೋಡ್ ಮಾಡಬೇಕು. ಮನೆಗಳನ್ನು ನಿರ್ಮಿಸಿ ಅಗತ್ಯ ಸೌಕರ್ಯ ಒದಗಿಸಬೇಕು. ಕೃಷಿ ಮತ್ತು ನೀರಾವರಿ ಇಲಾಖೆಯಿಂದ ರೈತರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ತಲುಪಿಸಬೇಕಾಗಿದೆ. ಗೊಬ್ಬರ, ಕ್ರಿಮಿನಾಶಕ, ಯಂತ್ರೋಪಕರಣಗಳು ವಿತರಿಸಬೇಕು ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಚ್. ದುರಗೇಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮಕೃಷ್ಣ, ಮಹಿಳಾ
ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ, ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರ್‌ ಸಂತೋಷ ರಾಣಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್. ಗೋನಾಳ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.