ADVERTISEMENT

ಭೂ ಮಾಲೀಕರ ಅಭಿಪ್ರಾಯ ಸಂಗ್ರಹ: ಡಿಸಿ

ವಾಡಿ-ಗದಗರೆಗೆ ರೈಲ್ವೆ ಲೈನ್ ಜೋಡಣೆಗೆ ಭೂ ಸ್ವಾಧೀನ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2020, 14:29 IST
Last Updated 6 ನವೆಂಬರ್ 2020, 14:29 IST

ರಾಯಚೂರು: ವಾಡಿಯಿಂದ ಗದಗಜಿಲ್ಲೆಯವರೆಗೆ ರೈಲ್ವೆ ಲೈನ್ ಜೋಡಣೆಗಾಗಿ ಭೂ ಸ್ವಾಧೀನ ಪಡಿಸಿಕೊಳ್ಳಲು ಭೂ ಮಾಲೀಕರ ಅಭಿಪ್ರಾಯ ಸಂಗ್ರಹಿಸಿ ದರ ನಿಗದಿಪಡಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಭೂ ಬೆಲೆ ನಿರ್ಧರಣಾ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಾಡಿಯಿಂದ ಗದಗ್ ಜಿಲ್ಲೆಯವರೆಗೆ ರೈಲ್ವೆ ಲೈನ್ ಜೋಡಣೆ ಮಾಡಲು ಜಿಲ್ಲೆಯ ಲಿಂಗಸೂಗೂರು ತಾಲ್ಲೂಕಿನ ಮುದಗಲ್ ಹೋಬಳಿ ವ್ಯಾಪ್ತಿಯಲ್ಲಿ ಬರುವ ಜಾಂತಾಪೂರ ಹಾಗೂ ಆರ್.ಎ.ಬೋಗಾಪೂರು ಗ್ರಾಮದಲ್ಲಿ 63 ಎಕರೆ 2 ಗುಂಟೆ ಜಮೀನು ಭೂ ಸ್ವಾಧೀನ ಪಡಿಸಿಕೊಳ್ಳಬೇಕಾಗಿದೆ. ಜಮೀನು ಮಾಲೀಕರ ಅಭಿಪ್ರಾಯ ಸಂಗ್ರಹಿಸಿ ದರ ನಿಗದಿಪಡಿಸಲಾಗುತ್ತದೆ. ಪ್ರತಿ ಎಕರೆಗೆ ಸರ್ಕಾರವು ₹4.69 ಲಕ್ಷ ದರ ನಿಗದಿಪಡಿಸಿದೆ. ಇದಕ್ಕೆ ಆಕ್ಷೇಪಣೆ ಇದ್ದಲ್ಲಿ ಅಭಿಪ್ರಾಯ ಸಲ್ಲಿಸಬಹುದು ಎಂದರು.

ADVERTISEMENT

ಜಾಂತಾಪೂರ ಗ್ರಾಮದಲ್ಲಿ 30 ಎಕರೆ 10 ಗುಂಟೆ ಹಾಗೂ ಆರ್.ಎ ಬೋಗಾಪೂರ ಗ್ರಾಮದಲ್ಲಿ 32 ಎಕರೆ 32 ಗುಂಟೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತದೆ. 2013ರ ಕಾಯ್ದೆ ಪ್ರಕಾರ ಬೆಲೆ ನಿಗದಿಪಡಿಸಬೇಕಾಗಿರುವುದರಿಂದ ಈಗ ಜಮೀನು ಮಾಲೀಕರ ಸಭೆ ಕರೆದು ಅಭಿಪ್ರಾಯ ಮತ್ತು ಸಲಹೆ ಸೂಚನೆ ಪಡೆದುಕೊಂಡು ದರ ನಿಗದಿಪಡಿಸಲಾಗುತ್ತದೆ ಎಂದು ತಿಳಿಸಿದರು.

ಲಿಂಗಸೂಗೂರು ತಾಲೂಕುನಲ್ಲಿ ತುಂಗಭದ್ರ ಎಡದಂಡೆ ಕಾಲುವೆ ಇರುವುದರಿಂದ ನೀರಾವರಿಗೆ ಒಳಪಡುವ ಜಮೀನುಗಳು ಲಭ್ಯವಾಗುತ್ತಿರುವುದರಿಂದ ಭೂ ಸ್ವಾಧೀನ ಪ್ರಕ್ರಿಯೆಗೆ ಕೊಂಚ ಹಿನ್ನಡೆಯಾಗಿದೆ. ಆ ಭಾಗದಲ್ಲಿ ಜಮೀನು ಮಾರಾಟಕ್ಕೆ ದರ ನಿಗದಿಪಡಿಸುವುದು ಸವಾಲಿನ ಕೆಲಸವಾಗಿದೆ. ವಾಡಿಯಿಂದ ಗದಗ ಜಿಲ್ಲೆಯವರೆಗೆ ರೈಲ್ವೆ ಜೋಡಣೆಯಿಂದಾಗಿ ಭೂ ಸ್ವಾಧೀನ ಪಡಿಸಿಕೊಂಡಿರುವ ಸಂತ್ರಸ್ತರಿಗೆ ರೈಲ್ವೆ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಮೀಸಲಾತಿಯಡಿ ಸರ್ಕಾರಿ ನೌಕರಿ ದೂರೆಯುವ ಸಾಧ್ಯತೆಗಳಿವೆ. ಈಗಾಗಲೇ ಕೇಂದ್ರ ಸರ್ಕಾರ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 (ಜೆ) ಕಲಂ ತಿದ್ದುಪಡಿಯಿಂದ ಈ ಭಾಗದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 80 ರಷ್ಟು ಮೀಸಲಾತಿ ಕಲ್ಪಿಸಲಾಗಿರುವುದರಿಂದ ಭೂ ಕಳೆದುಕೊಂಡ ಸಂತ್ರಸ್ತರ ಕುಟುಂಬ ಸದ್ಯಸರಿಗೆ ಖಾಲಿಯಿರುವ ಹುದ್ದೆಗಳ ಭರ್ತಿಯಲ್ಲಿ ಪ್ರಥಮ ಆದ್ಯತೆ ನೀಡಲಾಗುತ್ತದೆ. ಭೂ ಸ್ವಾಧೀನ ಪ್ರಕ್ರಿಯೆಗೆ ಮುನ್ನ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಕಂದಾಯ ಇಲಾಖೆಯ ಅಧಿಕಾರಿಗಳು ಸರ್ವೆ ಮಾಡಿ ವರದಿ ನೀಡಿದ ನಂತರ ದರ ನಿಗದಿಪಡಿಸಲಾಗುತ್ತದೆ ಎಂದು ಹೇಳಿದರು.

ವಿಶೇಷ ಭೂ ಸ್ವಾಧೀನ ಅಧಿಕಾರಿ ಡಾ.ಬಿ.ಶರಣಪ್ಪ ಮಾತನಾಡಿದರು. ಲಿಂಗಸೂಗೂರು ಉಪವಿಭಾಗಾಧಿಕಾರಿ ರಾಜಶೇಖರ್ ಡಂಬಳಿ, ತಹಶೀಲ್ದಾರ್‌ ಚಾಮರಸ ಪಾಟೀಲ, ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಮಹ್ಮದ್ ಇರ್ಫಾನ್, ಕೆಐಎಡಿಬಿ ಅಧಿಕಾರಿ ಪ್ರಕಾಶ ಹಾಗೂ ಭೂ ಮಾಲೀಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.