ರಾಯಚೂರು: ದೇಶದ ಅಭಿವೃದ್ಧಿ ಕುಶಲಕರ್ಮಿಗಳ ಮೇಲೆ ನಿಂತಿದೆ. ಕೌಶಲ್ಯಾಭಿವೃದ್ಧಿಗೆ ಬೇಕಾದ ಅಗತ್ಯ ನೆರವು ನೀಡಲು ಸದಾ ಸಿದ್ಧ ಎಂದು ಉಪ ಮುಖ್ಯಮಂತ್ರಿ ಸಚಿವ ಡಾ. ಅಶ್ವಥ್ ನಾರಾಯಣ ಸಿ.ಎನ್. ಹೇಳಿದರು.
ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ತರಬೇತಿದಾರರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾದರಿಯಾಗುವ ರೀತಿಯಲ್ಲಿ ತರಬೇತಿದಾರರು ಕೌಶಲ್ಯತೆಯನ್ನು ಹೆಚ್ಚಿಸಿಕೊಳ್ಳಬೇಕು. ಕೌಶಲ್ಯತೆಗೆ ಜಪಾನ್ ಮತ್ತು ಜರ್ಮನಿ ದೇಶಗಳ ಅನುಕರಣೆ ಮಾಡಿದಲ್ಲಿ ಭಾರತವು ಮುಂಚೂಣಿ ರಾಷ್ಟ್ರವಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಆಯುಕ್ತ ಕೆ.ಪಿ.ಮೋಹನರಾಜ್ ಮಾತನಾಡಿ, 1958ನೇ ವರ್ಷದಲ್ಲಿ ಪ್ರಾರಂಭವಾದ ರಾಯಚೂರು ಸಂಸ್ಥೆಯನ್ನು ಉನ್ನತೀಕರಣಗೊಳಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾ ಕೇಂದ್ರದಲ್ಲಿ ಕೆಜಿಟಿಟಿಐ ತರಬೇತಿ ಕೇಂದ್ರ ಪ್ರಾರಂಭಿಸಲು ಸಚಿವರೊಂದಿಗೆ ಚರ್ಚಿಸಲಾಗುವುದು. ಐ.ಟಿ.ಐ. ಮುಗಿದ ತರಬೇತಿದಾರರಿಗೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಶಿಶಿಕ್ಷು ತರಬೇತಿಗೆ ಅವಕಾಶ ಕಲ್ಪಿಸಲಾಗುವುದು. ಐಟಿಐ ಪಠ್ಯಕ್ರಮವನ್ನು ಕನ್ನಡಕ್ಕೆ ಭಾಷಾಂತರಿಸಲು ಕ್ರಮಕೈಗೊಳ್ಳಲು ಸಮಿತಿಯೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ, ಬಿಜೆಪಿ ಮುಖಂಡ ಶಶಿಲ್ ಜಿ. ನಮೋಶಿ, ರಾಯಚೂರು ವಾಣಿಜ್ಯೋದ್ಯಮಗಳ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಶಿ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಪ್ರಭಾರಿ ನಿರ್ದೇಶಕ ಪಿ.ಕೆ. ನಾಗರಾಜ, ಕಲಬುರ್ಗಿ ವಿಭಾಗೀಯ ಕಚೇರಿಯ ಜಂಟಿ ನಿರ್ದೇಶಕ ರವೀಂದ್ರನಾಥ ಎಸ್. ಬಾಳ್ಳಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ರಾಜೇಶ ಬಿ. ಬಾವಗಿ, ದೇವದುರ್ಗ ಸಂಸ್ಥೆಯ ಪ್ರಾಚಾರ್ಯ ಭೀಮಣ್ಣ, ಲಿಂಗಸೂಗುರ ಸಂಸ್ಥೆಯ ಪ್ರಾಚಾರ್ಯ ಅಬ್ದುಲ್ ಖಾದರ, ರಮೇಶ ಭದ್ರಗೊಂಡ, ನಲ್ಮ್ ವ್ಯವಸ್ಥಾಪಕ ರಸೂಲ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.