ADVERTISEMENT

ಕಳಪೆ ಆಹಾರ ನೀಡಿದ ವಾರ್ಡನ್‍ಗೆ ತರಾಟೆ 

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 12:49 IST
Last Updated 23 ಫೆಬ್ರುವರಿ 2020, 12:49 IST
ಸಿಂಧನೂರು ತಾಲ್ಲೂಕಿನ ಉಮಲೂಟಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಶನಿವಾರ ರಾತ್ರಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಊಟ ಮಾಡಿದರು
ಸಿಂಧನೂರು ತಾಲ್ಲೂಕಿನ ಉಮಲೂಟಿ ಮೊರಾರ್ಜಿ ದೇಸಾಯಿ ವಸತಿ ನಿಲಯಕ್ಕೆ ಶನಿವಾರ ರಾತ್ರಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಭೇಟಿ ನೀಡಿ ಊಟ ಮಾಡಿದರು   

ಸಿಂಧನೂರು: ತಾಲ್ಲೂಕಿನ ಉಮಲೂಟಿ ಗ್ರಾಮದ ಮೊರಾರ್ಜಿ ವಸತಿ ಶಾಲೆಗೆ ಉಪಮುಖ್ಯಮಂತ್ರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ಶನಿವಾರ ರಾತ್ರಿ ದಿಢೀರ್ ಭೇಟಿ ನೀಡಿ, ಅಲ್ಲಿ ಊಟ ಮಾಡಿ ಕಳಪೆ ಎಂದು ಕಂಡು ಬಂದ ಹಿನ್ನೆಲೆಯಲ್ಲಿ ಆಹಾರ ದಾಸ್ತಾನು ಪರಿಶೀಲಿಸಿ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕೆನ್ನುವುದು ಸರ್ಕಾರದ ಉದ್ದೇಶವಾಗಿದೆ. ಕೋಟ್ಯಾಂತರ ಬಂದರೂ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಮತ್ತು ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರುವುದು ಸರಿಯಲ್ಲ. ಊಟಕ್ಕೆ ಬಳಸಿರುವ ಆಹಾರ ಪದಾರ್ಥಗಳು ಕಳಪೆ ಗುಣಮಟ್ಟದಿಂದ ಕೂಡಿದ್ದು, ಊಟ ರುಚಿಯಾಗಿಲ್ಲ ಎಂದು ವಾರ್ಡನ್‌ ಹಾಗೂ ವಸತಿ ಶಾಲೆಯ ಪ್ರಾಂಶುಪಾಲರನ್ನು ತರಾಟೆಗೆ ತೆಗೆದುಕೊಂಡರು.

ತಕ್ಷಣವೇ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕುಮಾರ ನಾಯಕ್ ಅವರಿಗೆ ದೂರವಾಣಿ ಕರೆ ಮಾಡಿದ ಡಿಸಿಎಂ, ವಿದ್ಯಾರ್ಥಿ ನಿಲಯದ ಅವ್ಯವಸ್ಥೆಗೆ ಕಾರಣರಾಗಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ADVERTISEMENT

ರಾಜ್ಯದಲ್ಲಿ ಒಟ್ಟು 4 ಲಕ್ಷ ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಕಾರ್ಯದರ್ಶಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಜಿಲ್ಲೆ, ತಾಲ್ಲೂಕು, ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕಡ್ಡಾಯವಾಗಿ ವಿದ್ಯಾರ್ಥಿ ನಿಲಯಗಳಿಗೆ ಭೇಟಿ ನೀಡಿ ಊಟ ಮಾಡಿ ಊಟ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಬೇಕು. ಜೊತೆಗೆ ಉತ್ತಮ ಪರೀಕ್ಷಾ ಫಲಿತಾಂಶ ಬರುವಂತೆ ವಿಶೇಷ ತರಗತಿಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಿದರು.

ಕೊಪ್ಪಳ ಸಂಸದ ಸಂಗಣ್ಣ ಕರಡಿ, ಕನಕಗಿರಿ ಶಾಸಕ ಬಸವರಾಜ ದಢೇಸುಗೂರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.