ರಾಯಚೂರು: ಆಹಾರ ಧಾನ್ಯಗಳ ಮೇಲೆ ಶೇ 5ರಷ್ಟು ಜಿ.ಎಸ್.ಟಿ ವಿಧಿಸಿರುವುದನ್ನು ಹಿಂಪಡೆಯುವಂತೆ ಆಗ್ರಹಿಸಿ ಸಿಪಿಐಎಂ ತಾಲ್ಲೂಕು ಸಮಿತಿಯ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಬುಧವಾರ ಮನವಿ ಸಲ್ಲಿಸಿದರು.
ಜೀವನಾವಶ್ಯಕ ವಸ್ತುಗಳ ಮೇಲೆ ವಿಧಿಸಿರುವ ಜಿ.ಎಸ್.ಟಿಯನ್ನು ತಕ್ಷಣವೇ ಕೈಬಿಡಬೇಕು. ಈಚೆಗೆ ಕೇಂದ್ರ ಸರ್ಕಾರ ಜೂನ್ನಲ್ಲಿ ನಡೆದ ಜಿ.ಎಸ್.ಟಿ. ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಂಡಿದೆ. ಇದು ಜನಸಾಮಾನ್ಯರ ವಿರೋಧಿಯಾಗಿದೆ ಎಂದು ದೂರಿದರು.
ಅಕ್ಕಿ, ಜೋಳ, ರಾಗಿ, ಹಾಲು, ಮೊಸರು ಮುಂತಾದ ಆಹಾರ ಪದಾರ್ಥಗಳನ್ನು ಕಾರ್ಮಿಕರು, ಬಡವರು, ಮಧ್ಯಮ ವರ್ಗದವರು ದಿನನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಬಳಸುವ ಅವಶ್ಯಕ ಪದಾರ್ಥಗಳಾಗಿವೆ. ಇವುಗಳ ಮೇಲಿನ ತೆರಿಗೆಯಿಂದ ಜನ ಸಾಮಾನ್ಯರ ಜೀವನ ವೆಚ್ಚ ದುಬಾರಿಯಾಗುತ್ತದೆ. ಈಗಾಗಲೇ ಬೆಲೆ ಏರಿಕೆ, ಹಣ ದುಬ್ಬರಗಳಿಂದ ಜನ ತತ್ತರಿಸಿದ್ದಾರೆ. ಬೆಲೆ ಏರಿಕೆಗೆ ತಕ್ಕಂತೆ ಜನ ಸಾಮಾನ್ಯರ ಆದಾಯ ಹೆಚ್ಚಳವಾಗಿಲ್ಲ. ಇಂಥ ಸಂದರ್ಭದಲ್ಲಿ ತಿನ್ನುವ ಆಹಾರದ ಮೇಲೆ ತೆರಿಗೆ ವಿಧಿಸಿದ ಕೇಂದ್ರ ಸರ್ಕಾರದ ಕ್ರಮ ಖಂಡನೀಯ ಎಂದರು.
ಹಾಲು, ಮೊಸರಿಗೂ ಜಿ.ಎಸ್.ಟಿ. ಹೇರಿರುವ ಸರ್ಕಾರದ ಕ್ರಮದಿಂದ ರೈತರಿಗೆ ತೊಂದರೆಯಾಗಿದೆ. ಆಹಾರ ಪದಾರ್ಥಗಳ ವ್ಯಾಪಾರದಲ್ಲಿಯೂ ಕಾರ್ಪೋರೇಟ್ ಕಂಪನಿಗಳಿಗೆ ಅನುಕೂಲ ಮಾಡುವುದಕ್ಕಾಗಿ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಇದರಿಂದ ಜನರಿಗೆ ಸರ್ಕಾರ ದ್ರೋಹವೆಸಗುತ್ತಿದೆ.
ಕಾರ್ಪೋರೇಟ್ ಕಂಪನಿಗಳ ಮತ್ತು ಶ್ರೀಮಂತ ಉದ್ಯಮಿಗಳಿಗೆ ತೆರಿಗೆ ವಿನಾಯಿತಿ ನೀಡಿ ಅವರಿಗೆ ಅನುಕೂಲ ಮಾಡುವ ಸರ್ಕಾರ ಜನಸಾಮಾನ್ಯರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಸರ್ಕಾರದ ಈ ನಿರ್ಧಾರ ಅತ್ಯಂತ ಜನವಿರೋಧಿಯಾಗಿದೆ. ರಾಜ್ಯಗಳಿಗೆ ಕೊಡಬೇಕಾದ ನಷ್ಟ ಪರಿಹಾರವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸರ್ಕಾರ ಅಗತ್ಯ ವಸ್ತುಗಳ ಮೇಲಿನ ಜಿಎಸ್ಟಿ ಹಿಂಪಡೆಯಲಿ ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಕೆ.ಜಿ.ವೀರೇಶ, ಡಿ.ಎಸ್.ಶರಣಬಸವ, ಎಚ್.ಪದ್ಮಾ, ಬಂದೇನವಾಜ್, ಯಾಸಿನ್, ಯಂಕಪ್ಪ, ನರ್ಮದಾ, ಗಂಗಮ್ಮ, ಗೋಕರಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.