ADVERTISEMENT

ರಾಯಚೂರು: ಕಾರ್ಮಿಕ ವಿರೋಧಿ ಸಂಹಿತೆ ರದ್ದತಿಗೆ ಒತ್ತಾಯ, ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2025, 4:15 IST
Last Updated 10 ಜುಲೈ 2025, 4:15 IST
ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಕಾರ್ಮಿಕ ಸಂಘಗಳ ಜಂಟಿ ಸಮಿತಿಯ ಸದಸ್ಯರು ಧರಣಿ ನಡೆಸಿದರು
ರಾಯಚೂರಿನ ಅಂಬೇಡ್ಕರ್ ವೃತ್ತದಲ್ಲಿ ಬುಧವಾರ ಕಾರ್ಮಿಕ ಸಂಘಗಳ ಜಂಟಿ ಸಮಿತಿಯ ಸದಸ್ಯರು ಧರಣಿ ನಡೆಸಿದರು   

ರಾಯಚೂರು: ಕೇಂದ್ರ ಸರ್ಕಾರ ಬಂಡವಾಳದ ಪರ ರೂಪಿಸಿದ ನಾಲ್ಕು ಕಾರ್ಮಿಕರ ವಿರೋಧಿ ಸಂಹಿತೆಗಳನ್ನು ಕೂಡಲೇ ರದ್ದುಪಡಿಸಿ, ದುಡಿತದ ಅವಧಿ ಹೆಚ್ಚಳ ವಾಪಸಾತಿ, ಕನಿಷ್ಠ ವೇತನ, ಸಾರ್ವತ್ರಿಕ ಪಿಂಚಣಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ (ಜೆಸಿಟಿಯು) ಪದಾಧಿಕಾರಿಗಳು ಬುಧವಾರ ನಗರದ ಅಂಬೇಡ್ಕರ್ ವೃತ್ತದಲ್ಲಿ ಧರಣಿ ನಡೆಸಿದರು.

ಅಖಿಲ ಭಾರತ ಮುಷ್ಕರದ ಭಾಗವಾಗಿ ಕಾರ್ಮಿಕರ ಸಂಘಟನೆಗಳ ಜಂಟಿ ಸಮಿತಿಯಿಂದ ನಡೆದ ಪ್ರತಿಭಟನೆಯಲ್ಲಿ ಎಐಯುಟಿಯುಸಿ ರಾಜ್ಯ ಘಟಕದ ಉಪಾಧ್ಯಕ್ಷ ವೀರೇಶ ಮಾತನಾಡಿ, ‘ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ಪರ ಕೆಲಸ ಮಾಡುತ್ತಿದ್ದು, ಶೇ 70ರಷ್ಟು ಕಾರ್ಮಿಕರು ಈ ಕಾರ್ಮಿಕ ಸಂಹಿತೆಗಳ ವ್ಯಾಪ್ತಿಗೆ ಒಳಪಡುವುದಿಲ್ಲ. ಈ ಸಂಹಿತೆಗಳಿಂದ ಕಾರ್ಮಿಕರ ಜೀವಿಸುವ, ವೇತನ, ಮುಷ್ಕರ, ಹೋರಾಟ, ಸಾಮಾಜಿಕ ಭದ್ರತೆ, ಆರೋಗ್ಯ ಮತ್ತು ಸುರಕ್ಷತೆ ನಿಯಮಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿವೆ. ಹೀಗಿದ್ದಾಗ ಇಂತಹ ಕಾರ್ಮಿಕ ವಿರೋಧಿ ಸಂಹಿತೆಗಳ ಅವಶ್ಯಕತೆ ಕಾರ್ಮಿಕರಿಗಿಲ್ಲ’ ಎಂದರು.

‘ಕಾರ್ಮಿಕರಿಗೆ ರಾಜ್ಯದಲ್ಲಿ ದುಡಿತದ ಅವಧಿ ದಿನಕ್ಕೆ 12 ಗಂಟೆಗೆ ಹೆಚ್ಚಿಸಿದ ಆದೇಶ ಹಿಂಪಡೆಯಬೇಕು. ಜೀವನ ಯೋಗ್ಯ ಕನಿಷ್ಠ ವೇತನ ₹36 ಸಾವಿರ ನಿಗದಿ ಮಾಡಬೇಕು. ಸಾರ್ವತ್ರಿಕ ಪಿಂಚಣಿ ಜಾರಿಗೊಳಿಸಿ ಕನಿಷ್ಠ ₹9 ಸಾವಿರ ಪಿಂಚಣಿ ನೀಡಬೇಕು’ ಎಂದು ಆಗ್ರಹಿಸಿದರು.

ADVERTISEMENT

‘ಸಾರ್ವಜನಿಕ ಉದ್ದಿಮೆಗಳ ಖಾಸಗೀಕರಣ ಮತ್ತು ನಗದೀಕರಣ ನಿಲ್ಲಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ದಿನದ ಕೂಲಿ ₹600ಕ್ಕೆ ಹೆಚ್ಚಿಸಿ, ದುಡಿತದ ದಿನಗಳನ್ನು 200ಕ್ಕೆ ಏರಿಸಬೇಕು. ಅಸಂಘಟಿತ ವಲಯದ ಕಾರ್ಮಿಕರಿಗೆ ಸಮಗ್ರ ಸಾಮಾಜಿಕ ಭದ್ರತಾ ಸೌಲಭ್ಯ, ವಸತಿ ಒದಗಿಸಬೇಕು. ರೈತ ವಿರೋಧಿ ತಿದ್ದಪಡಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕು’ ಎಂದು ಒತ್ತಾಯಿಸಿದರು.

ಎಚ್. ಪದ್ಮಾ, ಶ್ರೀಶೈಲ ರೆಡ್ಡಿ, ಡಿ.ಎಸ್. ಶರಣಬಸವ, ತಿಮ್ಮಪ್ಪ ಸ್ವಾಮಿ, ಕಾಶಪ್ಪ, ವೀರನಗೌಡ, ಅಜೀಜ್ ಜಾಗೀರದಾರ್, ಮಹೇಶ ಚೀಕಲಪರ್ವಿ, ಎಂ.ರವಿ, ಸಲಾವುದ್ದೀನ್, ಅಣ್ಣಪ್ಪ, ನಾಗರಾಜ ಹಾಗೂ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.