ADVERTISEMENT

ಅರಣ್ಯಾಧಿಕಾರಿ ವರ್ಗಾವಣೆ ರದ್ದು ಮಾಡಲು ಆಗ್ರಹ

ಖಾಸಗಿ–ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ಮನವಿ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 5:05 IST
Last Updated 7 ಜುಲೈ 2022, 5:05 IST
ಮಾನ್ವಿಯಲ್ಲಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು
ಮಾನ್ವಿಯಲ್ಲಿ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು   

ಮಾನ್ವಿ: ‘ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾದ ವಲಯ ಅರಣ್ಯಾಧಿಕಾರಿ ರಾಜೇಶ್ ನಾಯಕ ಅವರ ವರ್ಗಾವಣೆಯನ್ನು ಸರ್ಕಾರ ರದ್ದುಗೊಳಿಸಬೇಕು’ ಎಂದು ಒತ್ತಾಯಿಸಿ ತಾಲ್ಲೂಕು ಖಾಸಗಿ–ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ ಹಾಗೂ ಖಾಸಗಿ–ಕಾಲೇಜುಗಳ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ತಹಶೀಲ್ದಾರ್ ಅಬ್ದುಲ್ ವಾಹಿದ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಖಾಸಗಿ ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟದ ಅಧ್ಯಕ್ಷ ಪಿ.ತಿಪ್ಪಣ್ಣ ಬಾಗಲವಾಡ ವಕೀಲ,‘ವಲಯ ಅರಣ್ಯಾಧಿಕಾರಿ ರಾಜೇಶ್ ನಾಯಕ ಅವರು ತಾಲ್ಲೂಕಿಗೆ ಬಂದ ನಂತರ ರಾಜ್ಯ ಹೆದ್ದಾರಿಯ ಅಕ್ಕ ಪಕ್ಕದಲ್ಲಿ, ಶಾಲಾ–ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಮರ ಗಿಡಗಳನ್ನು ಬೆಳೆಸಲು ಶ್ರಮಿಸಿದ್ದಾರೆ. ಅರಣ್ಯ ಇಲಾಖೆಯ ಯೋಜನೆಗಳು, ಸೌಲಭ್ಯಗಳ ಬಗ್ಗೆ ಜನಜಾಗೃತಿ ಮೂಡಿಸಿ ಎಲ್ಲೆಡೆ ಹಸಿರು ಪರಿಸರ ನಿರ್ಮಾಣಕ್ಕೆ ಪ್ರೋತ್ಸಾಹಿಸಿದ್ದಾರೆ’ ಎಂದರು.

ದಕ್ಷ ಅಧಿಕಾರಿಯನ್ನು ವರ್ಗಾಯಿಸಿರುವುದು ಸರಿಯಾದ ಕ್ರಮವಲ್ಲ. ಸರ್ಕಾರ ಕೂಡಲೇ ಅವರ ಸೇವೆಯನ್ನು ಮಾನ್ವಿ ತಾಲ್ಲೂಕಿನಲ್ಲಿ ಮುಂದುವರಿಸಬೇಕು’ ಎಂದು ಮನವಿ ಮಾಡಿದರು.

ADVERTISEMENT

ಒಕ್ಕೂಟದ ಇತರ ಪದಾಧಿಕಾರಿಗಳಾದ ತಿಪ್ಪಣ್ಣ ಎಂ.ಹೊಸಮನಿ, ಶರಣಬಸವ ನೀರಮಾನ್ವಿ ಹಾಗೂ ಎಚ್.ಮೌನೇಶ, ತಾಲ್ಲೂಕು ಖಾಸಗಿ ಕಾಲೇಜುಗಳ ಉಪನ್ಯಾಸಕರ ಸಂಘದ ಅಧ್ಯಕ್ಷ ಬಸವರಾಜ ಭೋಗಾವತಿ, ಗೌರವಾಧ್ಯಕ್ಷ ಈರಣ್ಣ ಮರ್ಲಟ್ಟಿ, ಪ್ರಧಾನ ಕಾರ್ಯದರ್ಶಿ ಆಂಜನೇಯ ನಾಯಕ ನಸಲಾಪುರ, ರವಿಕುಮಾರ ಹಾಗೂ ವೆಂಕಟೇಶ ಯಾದವ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.