ರಾಯಚೂರು: ತಾಲ್ಲೂಕಿನ ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ(ಆರ್ಟಿಪಿಎಸ್)ನ 600 ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಿದ್ದು, ಕೂಡಲೇ ಪುನರ್ ನೇಮಕ ಮಾಡಿಕೊಳ್ಳಬೇಕು ಎಂದು ಒತ್ತಾಯಿಸಿ ಜಯ ಕರ್ನಾಟಕ ಸಂಘಟನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಬುಧವಾರ ನಗರದ ಜಿಲ್ಲಾಡಳಿತ ಕಚೇರಿ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಕಳೆದ 20ರಿಂದ 25 ವರ್ಷಗಳಿಂದ 600ಕ್ಕೂ ಹೆಚ್ಚು ಗುತ್ತಿಗೆ ಕಾರ್ಮಿಕರ ಕೆಲಸ ಮಾಡುತ್ತಿದ್ದು, ಕಾರ್ಮಿಕರನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿದ್ದು ಸರಿಯಲ್ಲ. ಇದರಿಂದ ಕುಟುಂಬ ನಿರ್ವಹಣೆಗೆ ತೀವ್ರ ಸಮಸ್ಯೆಯಾಗಿದೆ. ಕೆಪಿಸಿ ವ್ಯವಸ್ಥಾಪಕ ನಿರ್ದೇಶಕ ಪೊನ್ನುರಾಜ್ ಅವರು ಶಕ್ತಿನಗರಲ್ಲಿರುವ ವಿದ್ಯುತ್ ಸ್ಥಾವರವನ್ನು ತಾಂತ್ರಿಕ ಕಾರಣ ನೀಡಿ ಬಂದ್ ಮಾಡಿದ್ದಾರೆ.
ಸರ್ಕಾರ ಸಾವಿರಾರು ಕೋಟಿ ವೆಚ್ಚ ಮಾಡಿ ನಿರ್ಮಾಣ ಮಾಡಿದ ಆರ್ಟಿಪಿಎಸ್ ಬಂದ್ ಮಾಡಿದ್ದಲ್ಲದೇ ಗುತ್ತಿಗೆ ಕಾರ್ಮಿಕರನ್ನು ಕೆಲಸದಿಂದ ವಜಾಗೊಳಿಸಲಾಗಿದ್ದು ಖಂಡನೀಯ ಎಂದು ದೂರಿದರು. ಸಂಘದ ಜಿಲ್ಲಾಧ್ಯಕ್ಷ ಎಸ್. ಶಿವಕುಮಾರ ಯಾದವ, ಎಂ.ಡಿ ರಫಿಕ್, ಕರುಣಾಕರ ಕಟ್ಟಿಮನಿ, ಮುರಳಿ ಕೃಷ್ಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.