ADVERTISEMENT

ಬೇಡಿಕೆಗಳ ಈಡೇರಿಕೆಗೆ ದೇವದಾಸಿಯರ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2019, 13:38 IST
Last Updated 24 ಡಿಸೆಂಬರ್ 2019, 13:38 IST
ಲಿಂಗಸುಗೂರಲ್ಲಿ ಸೋಮವಾರ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ಪದಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು
ಲಿಂಗಸುಗೂರಲ್ಲಿ ಸೋಮವಾರ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘದ ಪದಧಿಕಾರಿಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು   

ಲಿಂಗಸುಗೂರು: ದೇವದಾಸಿಯರಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ತಲುಪಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದೇವದಾಸಿ ಮಹಿಳಾ ವಿಮೋಚನಾ ಸಂಘ ನೇತೃತ್ವದಲ್ಲಿ ದೇವದಾಸಿಯರು ಪ್ರತಿಭಟನೆ ನಡೆಸಿದರು.

ಸೋಮವಾರ ಇಲ್ಲಿನ ಗುರುಭವನದಿಂದ ಉಪ ವಿಭಾಗಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಅವರು, ಸರ್ಕಾರಗಳು ನಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯ, ಅಪಮಾನದಂತ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿವೆ. ಇಂದಿಗೂ ಕೆಲವೆಡೆ ದೇವದಾಸಿ ಬಿಡುವ ಪದ್ಧತಿ ನಡೆಯುತ್ತಿದ್ದು ಸರ್ಕಾರ ಕಟ್ಟುನಿಟ್ಟಿನ ಕ್ರಮ
ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.

ವಿಮೋಚನೆ ಹೊಂದಿದ ದೇವದಾಸಿಯರಿಗೆ ತಲಾ 5 ಎಕರೆ ಜಮೀನು ಮಂಜೂರು ಮಾಡಬೇಕು. ಶೇ 75ರಷ್ಟು ರಿಯಾಯಿತಿ ಆಧರಿಸಿ ಸಾಲ ಸೌಲಭ್ಯ ನೀಡಬೇಕು. ಮಾಸಿಕ ಸಹಾಯಧನ ನೀಡುವಲ್ಲಿನ ವಯಸ್ಸಿನ ನಿರ್ಭಂದ ತೆಗೆದುಹಾಕಬೇಕು. ದೇವದಾಸಿಯರ ಮಕ್ಕಳಿಗೆ ಉನ್ನತ ವ್ಯಾಸಂಗವರೆಗೆ ಉಚಿತ ಶಿಕ್ಷಣ ಕೊಡಿಸಬೇಕು. ವಿದ್ಯಾವಂತ ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ಘೋಷಿಸಬೇಕು. ವಿವಿಧ ಯೋಜನೆಗಳಡಿ ಫಲಾನುಭವಿಗಳ ಆಯ್ಕೆಯಲ್ಲಿ ನಡೆಯುತ್ತಿರುವ ತಾರತಮ್ಯ ನಿವಾರಿಸಬೇಕು. ಮುದಗಲ್‌ ದೇವದಾಸಿ ಯರಿಗೆ ನೀಡಿದ ನಿವೇಶನದಲ್ಲಿ ಮನೆಗಳ ನಿರ್ಮಾಣ ಮಾಡಿಸಬೇಕು. ದೇವದಾಸಿಯರ ಪುನರ್‌ ಸರ್ವೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಹಶೀಲ್ದಾರ್‌ ಶಾಲಂಸಾಬ ಅವರಿಗೆ ಮನವಿ ಸಲ್ಲಿಸಿದರು.

ADVERTISEMENT

ಎಸ್‌ಎಫ್‌ಐ ಜಿಲ್ಲಾ ಘಟಕದ ಕಾರ್ಯದರ್ಶಿ ರಮೇಶ ವೀರಾಪುರ, ಸಂಘದ ಜಿಲ್ಲಾ ಘಟಕದ ಕಾರ್ಯದರ್ಶಿ ಹುಲಿಗೆಮ್ಮ ಮುದಗಲ್‌, ತಾಲ್ಲೂಕು ಘಟಕ ಅಧ್ಯಕ್ಷೆ ಮುತ್ತಮ್ಮ ಮುದಗಲ್‌, ರತ್ನ ಮಸ್ಕಿ, ಕೆ.ಜಿ.ವೀರೇಶ, ಬಸವಲಿಂಗ, ಬಸಮ್ಮ, ಹುಲಿಗೆಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.