ದೇವದುರ್ಗ: ‘ಶತಮಾನದ ಇತಿಹಾಸವಿರುವ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ ಭಾಷೆ, ನೆಲ, ಜಲ, ಶಿಕ್ಷಣ, ಸಂಸ್ಕೃತಿ ಬೆಳೆಸಲು ಅವಿರತವಾಗಿ ಶ್ರಮಿಸುತ್ತಾ ಬಂದಿರುವುದು ಶ್ಲಾಘನೀಯ’ ಎಂದು ಕಸಾಪ ಸಂಘಟನಾ ಕಾರ್ಯದರ್ಶಿ ವೇಣುಗೋಪಾಲಗೌಡ ಜಾಲಹಳ್ಳಿ ಹೇಳಿದರು.
ಪಟ್ಟಣದ ಬಸವ ಪದವಿ ಮಹಾವಿದ್ಯಾಲಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಘಟಕದಿಂದ ಸೋಮವಾರ ಹಮ್ಮಿಕೊಂಡಿದ್ದ ಕಸಾಪ 111ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾಡಿನ ಹಿರಿಯ ಸಾಹಿತಿಗಳು, ಕವಿಗಳು, ಲೇಖಕರು, ವಚನಕಾರರು ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ವಚನಗಳು ಸಾಹಿತ್ಯದಲ್ಲಿ ಶ್ರೇಷ್ಠವಾಗಿವೆ’ ಎಂದರು.
ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಶಿವರಾಜ ಮಾತನಾಡಿ, ‘ತಾಲ್ಲೂಕಿನಲ್ಲಿ ಮೂರು ತಾಲ್ಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನಗಳು, ಒಂದು ಜಿಲ್ಲಾ ಮಟ್ಟದ ಸಮ್ಮೇಳನ ಜರುಗಿದೆ. ಸಾಹಿತ್ಯಾಸಕ್ತರನ್ನು ಸಾಹಿತ್ಯ ಪರಿಷತ್ತು ಗುರುತಿಸುತ್ತಿದೆ. ಸರ್.ಎಂ.ವಿಶ್ವೇಶ್ವರಯ್ಯ, ಸರ್ ಮಿರ್ಜಾ ಇಸ್ಮಾಯಿಲ್, ನಾಲ್ವಡಿ ಕೃಷ್ಣರಾಜ ಒಡೆಯರು ಕನ್ನಡ ಸಾಹಿತ್ಯ ಪರಿಷತ್ತನ್ನು ಶ್ರೀಮಂತಗೊಳಿಸಿದ್ದಾರೆ. ಪರಿಷತ್ತನ್ನು ರಾಜ್ಯದ ಪ್ರತಿಯೊಬ್ಬ ಕನ್ನಡಿಗ ತನು ಮನು ಧನ ಸಹಾಯದಿಂದ ಕಟ್ಟಿ ಬೆಳೆಸಬೇಕಾದ ಅನಿವಾರ್ಯತೆ ಇದೆ’ ಎಂದು ಹೇಳಿದರು.
ಪ್ರಾಂಶುಪಾಲ ಶ್ಯಾಮ್ಸುಂದರ್, ಉಪನ್ಯಾಸಕ ನಿತೀಶಕುಮಾರ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಹ ಕಾರ್ಯದರ್ಶಿ ಶಿವರಾಜ ರುದ್ರಾಕ್ಷಿ, ಶಿವರಾಜ ಅಮರಾಪುರ ಮಹಾವಿದ್ಯಾಲಯದ ಸಿಬ್ಬಂದಿ ವಿದ್ಯಾರ್ಥಿಗಳು ಸಾಹಿತ್ಯ ಆಸಕ್ತರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.