ADVERTISEMENT

‘ಯುವಕರ ಕೈಯಲ್ಲಿ ದೇಶದ ಭವಿಷ್ಯ’

ಬಿಜೆಪಿ ಯುವ ಮೋರ್ಚಾದಿಂದ ಜಿಲ್ಲಾ ಕಾರ್ಯಕಾರಿಣಿ ಸಭೆ

​ಪ್ರಜಾವಾಣಿ ವಾರ್ತೆ
Published 24 ಮೇ 2022, 11:35 IST
Last Updated 24 ಮೇ 2022, 11:35 IST
ಸಿಂಧನೂರನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆದ ರಾಯಚೂರು ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಡಾ.ಸಂದೀಪಕುಮಾರ ಮಾತನಾಡಿದರು
ಸಿಂಧನೂರನಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆದ ರಾಯಚೂರು ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಡಾ.ಸಂದೀಪಕುಮಾರ ಮಾತನಾಡಿದರು   

ಸಿಂಧನೂರು: ‘ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯು ರಾಜ್ಯ ಮತ್ತು ದೇಶದ ಭವಿಷ್ಯದ ದೃಷ್ಠಿಯಿಂದ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಭಾರತ ದೇಶದ ಭವಿಷ್ಯ ಯುವಕರ ಕೈಯಲ್ಲಿ ಅಡಗಿದೆ’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಡಾ.ಸಂದೀಪಕುಮಾರ ಹೇಳಿದರು.

ತಾಲ್ಲೂಕಿನ ಶ್ರೀಪುರಂಜಂಕ್ಷನ್ ಬಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸೋಮವಾರ ನಡೆದ ರಾಯಚೂರು ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

‘ಕಾಂಗ್ರೆಸ್ ಪಕ್ಷ ದೇಶದಲ್ಲಿ ಅವನತಿಯತ್ತ ಸಾಗುತ್ತಿದೆ. ಕೇಂದ್ರದಲ್ಲಿ ನಾಯಕತ್ವ ಕೊರತೆ ಇದ್ದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಮುಸುಕಿನ ಗುದ್ದಾಟ ನಡೆಸಿದ್ದಾರೆ. ಇವರಿಗೆ ಪಕ್ಷಕ್ಕಿಂತ ಅಧಿಕಾರದ ದಾಹ ಹೆಚ್ಚಾಗಿದೆ. ಸಿದ್ದರಾಮಯ್ಯ ಮುಸ್ಲಿಮರ ಓಲೈಕೆಗಾಗಿ ಕೀಳು ಮಟ್ಟದ ರಾಜಕಾರಣ ಮಾಡುತ್ತಿರುವುದು ನಾಚಿಕೆಗೇಡಿನ ಸಂಗತಿ’ ಎಂದು ಟೀಕಿಸಿದರು.

ADVERTISEMENT

ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾತನಾಡಿ, ‘ವಾಜಪೇಯಿ, ಮೋದಿ ಅಧಿಕಾರದ ಅವಧಿಯಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿಯ ಬದಲಾವಣೆಗಳಾಗಿವೆ. ಯುವಸಮೂಹ ಭವ್ಯ ಭಾರತ ಭವಿಷ್ಯ, ಶಕ್ತಿ ಮತ್ತು ಹುಮ್ಮಸ್ಸು. ಸದೃಢ ದೇಶ ನಿರ್ಮಾಣ ಯುವಕರಿಂದ ಮಾತ್ರ ಸಾಧ್ಯವಿದೆ. ಕಾಂಗ್ರೆಸ್ ಪಕ್ಷಕ್ಕೆ ದೇಶ ಮತ್ತು ಜನರ ಬಗ್ಗೆ ಕಾಳಜಿ ಇಲ್ಲ. ಇದ್ದವರಂತೆ ನಾಟಕವಾಡುತ್ತಿದ್ದಾರೆ. ಆದ್ದರಿಂದ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರಲು ಯುವಕರು ಕಂಕಣಬದ್ಧರಾಗಬೇಕು’ ಎಂದರು.

ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ ಮಾತನಾಡಿದರು.

ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮಧ್ವರಾಜ್ ಆಚಾರ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ದೊಡ್ಡಬಸವರಾಜ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎನ್.ಶಿವನಗೌಡ ಗೊರೇಬಾಳ, ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅಮರೇಶ ರೈತನಗರ, ಕಿರಣ ಬೀದರ್, ಜಿಲ್ಲಾ ಘಟಕದ ಅಧ್ಯಕ್ಷ ಜಂಬಣ್ಣ ಮಂದಕಲ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನಿಂಗಯ್ಯ, ತಾಲ್ಲೂಕು ಗ್ರಾಮೀಣ ಘಟಕದ ಅಧ್ಯಕ್ಷ ಸಿದ್ದು ಹೂಗಾರ, ನಗರ ಘಟಕದ ಅಧ್ಯಕ್ಷ ರವಿಕುಮಾರ ಉಪ್ಪಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.