ADVERTISEMENT

ಹೈನುಗಾರಿಕೆ ಪ್ರಗತಿಗೆ ಯೋಜನೆ ಸಿದ್ಧತೆ

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ.ಕುಮಾರನಾಯಕ ಅಧ್ಯಕ್ಷತೆಯಲ್ಲಿ ಸಭೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2019, 13:55 IST
Last Updated 29 ನವೆಂಬರ್ 2019, 13:55 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಜಿ. ಕುಮಾರನಾಯಕ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ರಾಯಚೂರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ  ಜಿ. ಕುಮಾರನಾಯಕ ಅಧ್ಯಕ್ಷತೆಯಲ್ಲಿ ಶುಕ್ರವಾರ ಪ್ರಗತಿ ಪರಿಶೀಲನಾ ಸಭೆ ನಡೆಯಿತು   

ರಾಯಚೂರು: ಎರಡು ನದಿಗಳು ಹರಿಯುವ ರಾಯಚೂರು ಜಿಲ್ಲೆಯು ಕೃಷಿ ಹಾಗೂ ಕೃಷಿ ಪೂರಕ ಚಟುವಟಿಕೆಗಳಿಗೆ ಪ್ರಶಸ್ತ್ಯವಾವಾಗಿದ್ದು, ಹೈನುಗಾರಿಕೆಯಲ್ಲಿ ಸ್ವಾವಲಂಬನೆ ಸಾಧಿಸಲು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಯೋಜನೆ ಸಿದ್ಧಪಡಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಿ. ಕುಮಾರನಾಯಕ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿ ಹೈನುಗಾರಿಕೆ ಉತ್ತೇಜನಕ್ಕೆ ಅಪಾರ ಅವಕಾಶಗಳಿವೆ. ಕೃಷಿಗೆ ಪೂರಕವಾಗಿರುವ ಈ ಚಟುವಟಿಕೆಗಳಿಂದ ರೈತರು ಆರ್ಥಿಕವಾಗಿ ಸಬಲರಾಗುತ್ತಾರೆ. ಪ್ರೋತ್ಸಾಹ ನೀಡಬೇಕಿದ್ದು, ಈ ಭಾಗದಲ್ಲಿ ಹೆಚ್ಚಿನ ರೀತಿಯಲ್ಲಿ ಪಶುಪಾಲನೆ, ಸ್ವಸಹಾಯ ಗುಂಪುಗಳ ರಚನೆ, ಡೈರಿ ಉತ್ಪನ್ನಗಳ ಕುರಿತು ತರಬೇತಿ ಹಾಗೂ ಡೈರಿಗಳ ಸ್ಥಾಪನೆಯಾಗಬೇಕಿರುತ್ತದೆ ಎಂದರು.

ಈ ಕಾರ್ಯ ನಿಯಮಿತವಾಗಿ ಆಗಬೇಕಾದರೆ ಕೆಎಂಎಫ್, ಪಶುಸಂಗೋಪನೆ ಇಲಾಖೆ, ಜಿಲ್ಲಾ ಪಂಚಾಯಿತಿ, ಸಹಕಾರ ಇಲಾಖೆಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಆ ಮೂಲಕ ರೈತರ ಆದಾಯವನ್ನು ಹೆಚ್ಚಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ADVERTISEMENT

ರಾಯಚೂರು, ಬಳ್ಳಾರಿ ಹಾಗೂ ಕೊಪ್ಪಳ ಹಾಲು ಒಕ್ಕೂಟದ ಮ್ಯಾನೇಜರ್ ಸುನೀಲ್ ಮಾತನಾಡಿ, ಡೈರಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಜಿಲ್ಲೆಯಲ್ಲಿ ಉಪನಿರ್ದೇಶಕರ ಮಟ್ಟದ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಈಗಾಗಲೇ ಡೈರಿ ಚಟುವಟಿಕೆಗಳನ್ನು ಕೈಗೊಳ್ಳಬಹುದಾದ ಗ್ರಾಮಗಳನ್ನು ಗುರುತಿಸಿರುತ್ತಾರೆ. ಜಿಲ್ಲಾ ಪಂಚಾಯಿತಿ ಹಾಗೂ ಪಿಡಿಒಗಳು ಸಹಕಾರ ನೀಡುವುದಾಗಿ ತಿಳಿಸಿರುತ್ತಾರೆ. ಸ್ವ-ಸಹಾಯ ಸಂಘಗಳ ನೋಂದಣಿಯು ಆರಂಭಗೊಂಡಿದ್ದು, ಸಂಘದ ಸದಸ್ಯರಿಗೆ ಹೈನುಗಾರಿಕೆ ಬಗ್ಗೆ ತರಬೇತಿ ನೀಡಲಾಗಿದೆ. ಪ್ರತಿಯೊಂದು ಹಳ್ಳಿಯಲ್ಲಿ 40 ಪ್ರಗತಿಪರ ರೈತರನ್ನು ಗುರುತಿಸಿ ಅವರಿಗೆ ತರಬೇತಿ ನೀಡಲಾಗಿದೆ. ವಿದೇಶಗಳಿಗೂ ಅವರನ್ನು ಕರೆದೊಯ್ದು ಹೈನುಗಾರಿಕೆ ಕುರಿತು ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಮಾತನಾಡಿ, ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳುವ ಹೈನು ತಳಿಗಳನ್ನು ಖರೀದಿಸಲು ರೈತರಿಗೆ ತಿಳಿಸಬೇಕು. ಗೊತ್ತಿಲ್ಲದೆ ದೂರದಿಂದ ತರುವ ಹೈನು ತಳಿಗಳು ಸ್ಥಳೀಯ ವಾತಾವರಣಕ್ಕೆ ಹೊಂದಿಕೊಳ್ಳದೆ ನಷ್ಟ ಅನುಭವಿಸುವ ಸಾಧ್ಯತೆ ಇರುತ್ತದೆ ಎಂದು ಹೇಳಿದರು.

ಕಂದಾಯ, ಭೂ ದಾಖಲೆಗಳು ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಕುರಿತು ಚರ್ಚೆ ನಡೆಯಿತು.ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.