ರಾಯಚೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇರುವುದು ಗಮನಕ್ಕೆ ಬಂದಿದೆ. ಮೂರು ತಿಂಗಳಲ್ಲಿ ವೈದ್ಯರ ನೇಮಕಾತಿ ಮಾಡಲಾಗುವುದು. ಈ ಬಾರಿ ಕೆಪಿಎಸ್ಸಿ ಮೂಲಕ ನೇಮಕ ಮಾಡಿಕೊಳ್ಳುತ್ತಿಲ್ಲ, ನೇರವಾಗಿ ನೇಮಕ ಮಾಡುವ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಹೇಳಿದರು.
ನಗರದ ಜಿಲ್ಲಾ ಪೊಲೀಸ್ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಆಶಾ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸಲಾಗಿದೆ. ಅದೇ ರೀತಿ ಪ್ರೋತ್ಸಾಹಧನ ₹3 ಸಾವಿರ ನೀಡಲು ನಿರ್ಧರಿಸಲಾಗಿದೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಬಳ್ಳಾರಿ ರಕ್ತನಿಧಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಮುಂಬರುವ ದಿನಗಳಲ್ಲಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಟೆಲಿಮೆಡಿಷಿನ್ ಆರಂಭಿಸಲಾಗುವುದು ಎಂದು ತಿಳಿಸಿದರು.
ಎಂಆರ್ಐ, ಸಿಟಿ ಸ್ಕ್ಯಾನಿಂಗ್, ರಕ್ತ ಮತ್ತು ಮೂತ್ರ ಪರೀಕ್ಷೆಗಳನ್ನು ಉಚಿತಗೊಳಿಸಲು ಚಿಂತನೆ ನಡೆದಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಯ ಆರೋಗ್ಯ ಸೇವೆ ತಲುಪುವ ನಿಟ್ಟಿನಲ್ಲಿ ಜನಸ್ನೇಹಿಗೊಳಿಸಲಾಗುವುದು. ರೋಗಿ ಜೊತೆಗೆ ಬರುವ ಒಬ್ಬರು ವ್ಯಕ್ತಿಗೆ ಉಳಿದುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.
ತಾಯಿ ಹಾಗೂ ಮಕ್ಕಳ ಆರೋಗ್ಯ ವೃದ್ಧಿಸುವ ಸಲುವಾಗಿ ರಾಜ್ಯದಾದ್ಯಂತ 63 ಎಂಸಿಎಚ್ ಆಸ್ಪತ್ರೆಗಳನ್ನು ಆರಂಭಿಸಲಾಗುವುದು. ಆಸ್ಪತ್ರೆಗಳಲ್ಲಿ 24/7 ಕ್ಯಾಂಟಿನ್ ಸೇವೆ ಒದಗಿಸಲಾಗುವುದು. ಮಹಿಳೆಯರಲ್ಲಿ ಕಂಡುಬರುವ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ಪತ್ತೆಗಾಗಿ 10 ಕೋಟಿ ವೆಚ್ಚದಲ್ಲಿ 10 ಆಸ್ಪತ್ರೆಗಳಲ್ಲಿ ಡಿಜಿಟಲ್ ಮ್ಯಾಮೊಗ್ರಫಿ ಆರಂಬಿಸಲಾಗುವುದು ಎಂದು ಹೇಳಿದರು.
ವಿವಿಧ ಶಾಲಾ ಮಕ್ಕಳು ದೇಶಭಕ್ತಿ ಗೀತೆಗಳಿಗೆ ನೃತ್ಯ ಪ್ರದರ್ಶಿಸಿದರು. ವಿವಿಧ ಇಲಾಖೆಗಳಲ್ಲಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಅಧಿಕಾರಿಗಳನ್ನು ಗೌರವಿಸಲಾಯಿತು.
ಶಾಸಕ ಡಾ.ಶಿವರಾಜ ಪಾಟೀಲ, ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮೀಕಾಂತರೆಡ್ಡಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.