ADVERTISEMENT

ಮನೆಯಿಂದ ಅನಗತ್ಯ ಹೊರಗೆ ಬರಬೇಡಿ

ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಮನವಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 12:58 IST
Last Updated 22 ಏಪ್ರಿಲ್ 2021, 12:58 IST
ಆರ್‌.ವೆಂಕಟೇಶಕುಮಾರ್‌
ಆರ್‌.ವೆಂಕಟೇಶಕುಮಾರ್‌   

ರಾಯಚೂರು: ಜಿಲ್ಲೆಯಲ್ಲಿ ಗುರುವಾರ 500 ಕ್ಕೂ ಹೆಚ್ಚು ಕೋವಿಡ್‌ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಮೇ 4ರವರೆಗೆ ಅನಗತ್ಯವಾಗಿ ಮನೆಯಿಂದ ಹೊರಗೆ ಬರಬಾರದು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ಮನವಿ ಮಾಡಿದ್ದಾರೆ.

ಇದೇ ರೀತಿ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದರೆ ಎಲ್ಲರಿಗೂ ಸಂಕಷ್ಟ ಎದುರಾಗಲಿದೆ. ಮುಖ್ಯವಾಗಿ ವೈದ್ಯಕೀಯ ಸೌಕರ್ಯಗಳ ಕೊರತೆಯಾಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಪರಸ್ಪರ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮುಖ್ಯವಾಗಿ ಅನಗತ್ಯವಾಗಿ ಮನೆಯಿಂದ ಹೊರಗೆ ಬಾರದಂತೆ ಜಿಲ್ಲಾಡಳಿತದೊಂದಿಗೆ ಸಹಕರಿಸಿ, ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಕೈಜೋಡಿಸುವಂತೆ ಕೋರಿದ್ದಾರೆ.

ಪರೀಕ್ಷೆಯಿಂದ ಕೊರೊನಾ ಪಾಸಿಟಿವ್ ಬಂದಿದ್ದರೂ ನೇರವಾಗಿ ಆಸ್ಪತ್ರೆಗೆ ಬರುವ ಅವಶ್ಯಕತೆಯಿಲ್ಲ. ರೋಗದ ಲಕ್ಷಣಗಳು ಇಲ್ಲದಿದ್ದಲ್ಲೀ ಮನೆಯಲ್ಲಿಯೇ ಕ್ವಾರಂಟೈನ್ ಆಗಬಹುದು. ರೋಗದ ಲಕ್ಷಣಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿಗಳು ಕರೆ ಮಾಡಿ ಕೋವಿಡ್ ಕೇರ್ ಸೆಂಟರ್‌ಗಳಗೆ ದಾಖಲಾಗಲು ತಿಳಿಸುವರು. ಒಂದು ವೇಳೆ ತೀವ್ರ ಚಿಕಿತ್ಸೆ ಬೇಕಾದಲ್ಲೀ ಸಂಬಂಧಿಸಿದ ತಾಲ್ಲೂಕು ಆಸ್ಪತ್ರೆಗಳಿಗೆ ಹಾಗೂ ರಿಮ್ಸ್ ಆಸ್ಪತ್ರೆಗೆ ರೆಫರ್ ಮಾಡುತ್ತಾರೆ. ಈಗಾಗಲೇ ಖಾಸಗಿ ವೈದ್ಯರು ಹಾಗೂ ಭಾರತೀಯ ಮೆಡಿಕಲ್ ಅಸೋಸಿಯೇಷನ್‍ನೊಂದಿಗೆ ಸಭೆ ನಡೆಸಲಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳಿಗೆ ಗಂಭೀರತೆ ಎದುರಾದರೆ ಅವರನ್ನು ರಿಮ್ಸ್ ಅಥವಾ ಒಪೆಕ್‍ಗೆ ರೆಫರ್ ಮಾಡಲು ಸೂಚಿಸಲಾಗಿದೆ.

ADVERTISEMENT

ಕೋವಿಡ್ ಸೋಂಕಿಗೆ ಒಳಗಾದ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಿ, ಅವರನ್ನು ಗುಣಮುಖರನ್ನಾಗಿಸಲು ಜಿಲ್ಲಾಡಳಿತದಿಂದ ಎಲ್ಲಾ ರೀತಿಯ ಸಕಲ ಕ್ರಮ ವಹಿಸಲಾಗುತ್ತಿದೆ. ಜಿಲ್ಲೆಯ ಜನರು ಕೋವಿಡ್ ಪ್ರಕರಣಗಳಿಗೆ ಭಯ ಪಡಬೇಕಾದ ಅಗತ್ಯವಿಲ್ಲ. ಮುಖ್ಯವಾಗಿ ಅನಗತ್ಯ ಮನೆಯಿಂದ ಹೊರಗೆ ಬರಬಾರದು ಎಂದು ಮರಳಿ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.