ADVERTISEMENT

ಲೋಪದೋಷಗಳಿಗೆ ಆಸ್ಪದ ಬೇಡ: ಡಿಸಿ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2021, 15:31 IST
Last Updated 19 ಮಾರ್ಚ್ 2021, 15:31 IST
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಪಚುನಾವಣೆ ಸಂಬಂಧ ಶುಕ್ರವಾರ ಆಯೋಜಿಸಿದ್ದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಉದ್ಘಾಟಿಸಿದರು
ರಾಯಚೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಪಚುನಾವಣೆ ಸಂಬಂಧ ಶುಕ್ರವಾರ ಆಯೋಜಿಸಿದ್ದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಉದ್ಘಾಟಿಸಿದರು   

ರಾಯಚೂರು: ಜಿಲ್ಲೆಯ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಮುಂಬರುವ ಏಪ್ರಿಲ್ 17 ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದಂತೆ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಆರ್.ವೆಂಕಟೇಶಕುಮಾರ್ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಉಪಚುನಾವಣೆ ಶುಕ್ರವಾರ ಆಯೋಜಿಸಿದ್ದ ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಉಪಚುನಾವಣೆಯನ್ನು ಯಶಸ್ವಿಯಾಗಿ ನಿರ್ವಹಿಸಲು ವಿವಿಧ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಈಗಾಗಲೇ ಮಾರ್ಚ್‌ 16ರಿಂದಲ್ಲೇ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ವಿವಿಧ ರಾಜಕೀಯ ಪಕ್ಷಗಳು ನೀತಿ ಸಂಹಿತೆ ಉಲ್ಲಂಘಿಸಿದ್ದಲ್ಲಿ ಅಂತಹವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದರು.

ADVERTISEMENT

ಅಧಿಕಾರಿಗಳಿಗೆ ವಿವಿಧ ಚುನಾವಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಇದೆ. ಆದರೆ ಸಾರ್ವತ್ರಿಕ ಮತ್ತು ಉಪಚುನಾವಣೆ ಬೇರೆ-ಬೇರೆ ಇರುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಚುನಾವಣೆ ಆಯೋಗದ ನಿರ್ದೇಶನದಂತೆ ಚುನಾವಣೆಯನ್ನು ಪಾರದರ್ಶಕವಾಗಿ ನಡೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ರಾಜ್ಯದಲ್ಲಿ ಮಸ್ಕಿ, ಬಸವಕಲ್ಯಾಣ ಮತ್ತು ಬೆಳಗಾವಿ ಜಿಲ್ಲೆಗೆ ಮಾತ್ರ ಉಪಚುನಾವಣೆ ಘೋಷಣೆ ಆಗಿರುವುದರಿಂದ ಚುನಾವಣಾ ಆಯೋಗದ ಹದ್ದಿನ ಕಣ್ಣು ಈ ಉಪಚುನಾವಣೆಯ ಮೇಲಿರುತ್ತದೆ ಎಂದು ಹೇಳಿದರು.

ರಾಜಕೀಯ ಪಕ್ಷಗಳು ನೀತಿ ಸಂಹಿತೆ ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಮತದಾರರ ಸೆಳೆಯುವ ಪ್ರಯತ್ನ ನಡೆಸುತ್ತಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ದ ಪ್ರಕರಣ ದಾಖಲಿಸಬೇಕು. ಹಣ, ಮದ್ಯ ಸೇರಿದಂತೆ ಇನ್ನಿತರ ಯಾವುದೇ ಆಮಿಷಗಳನ್ನು ಒಡ್ಡಬಾರದು. ಬಹಿರಂಗ ಸಭೆ, ರ‍್ಯಾಲಿ, ರೋಡ್‍ಶೋಗಳಿಗೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಚೆಕ್‍ ಪೋಸ್ಟ್‌ಗಳ ಮೇಲೆ ಹೆಚ್ಚಿನ ನಿಗಾವಹಿಸಬೇಕು. ವಾಹನಗಳಲ್ಲಿ ಅಕ್ರಮ ಹಣ, ಮದ್ಯ ಸಾಗಾಣಿಕೆ ಕಂಡುಬಂದಲ್ಲಿ ಪರಿಶೀಲಿಸಿ ಕ್ರಮ ಜರುಗಿಸಬೇಕು ಮತ್ತು ಎಲ್ಲ ಕಡೆಗೂ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು ಎಂದು ನಿರ್ದೇಶನ ನೀಡಿದರು.

ದೇಶದಲ್ಲಿ ಕೋವಿಡ್ ಎರಡನೇ ಅಲೆ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರದ ಕೋವಿಡ್ ಮಾರ್ಗಸೂಚಿ ಪ್ರಕಾರ ಚುನಾವಣೆ ನಿರ್ವಹಿಸುವುದು ಸವಾಲಿನ ಕೆಲಸವಾಗಿದೆ. ಸಾಮಾಜಿಕ ಅಂತರ ಕಾಪಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ಧ ರಿಸಬೇಕು ಮತ್ತು ಸ್ಯಾನಿಟೈಜೇಷನ್ ಬಳಕೆ ಮಾಡಬೇಕು. ಈಗಾಗಲೇ ದೇಶದಲ್ಲಿ ಪ್ರತಿನಿತ್ಯ 35,000ಕ್ಕೂ ಅಧಿಕ ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವುದರಿಂದ ಎಚ್ಚರಿಕೆಯಿಂದ ಚುನಾವಣೆ ನಡೆಸಬೇಕು.

ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಆರ್. ದುರುಗೇಶ್, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀಹರಿಬಾಬು, ಲಿಂಗಸೂಗೂರು ಉಪವಿಭಾಗಾಧಿಕಾರಿ ರಾಜಶೇಖರ ಡಂಬಳ, ಎನ್‍ಐಸಿ ಅಧಿಕಾರಿ ರವಿಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.