
ರಾಯಚೂರು: ‘ಸಮಾಜದಲ್ಲಿನ ಎಲ್ಲ ಸಮುದಾಯಗಳ ಸಾಮಾಜಿಕ ಹಿತಾಸಕ್ತಿ ಕಾಪಾಡಲು ಪ್ರತ್ಯೇಕವಾಗಿ ಸಮುದಾಯ ಭವನಗಳನ್ನು ನಿರ್ಮಿಸಲಾಗುತ್ತಿದೆ. ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಸಹೋದರತ್ವದೊಂದಿಗೆ ಮುನ್ನಡೆಯುವುದು ನಮ್ಮ ಸರ್ಕಾರದ ಉದ್ದೇಶ’ ಎಂದು ಸಚಿವ ಎನ್. ಎಸ್. ಬೋಸರಾಜು ತಿಳಿಸಿದರು.
ನಗರದ ವಿವಿಧ ಬಡಾವಣೆಗಳಲ್ಲಿ ವಿವಿಧ ಸಮುದಾಯಗಳಾದ ಗೌಳಿ ಸಮುದಾಯ ಈಡಿಗ, ಪದ್ಮಶಾಲಿ ಜೋಗಿ ರಜಪೂತ, ವಿಶ್ವಕರ್ಮ, ಭಾವಸಾರ ಕ್ಷತ್ರೀಯ ಸಮುದಾಯದವರ ಪ್ರತ್ಯೇಕ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
‘ಸಣ್ಣಪುಟ್ಟ ಸಮುದಾಯಗಳಿಗೆ ಆರ್ಥಿಕ ಸಾಮಾಜಿಕ ಹಾಗೂ ರಾಜಕೀಯ ಸ್ಥಾನಮಾನಗಳನ್ನು ನೀಡುವ ಮೂಲಕ ಎಲ್ಲ ಸಮುದಾಯಗಳ ಏಳಿಗೆಗೆ ಪ್ರಯತ್ನಿಸಲಾಗುತ್ತಿದೆ, ಹಂತ- ಹಂತವಾಗಿ ಇನ್ನು ಉಳಿದ ಸಮುದಾಯಗಳಿಗೂ ಪ್ರತ್ಯೇಕ ಸಮುದಾಯ ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.
‘ಅಧಿಕಾರಿಗಳು ತ್ವರಿತ ಗತಿಯಲ್ಲಿ ಸಮುದಾಯ ಭವನ ಕಾಮಗಾರಿ ಆರಂಭಿಸಬೇಕು ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಾಮಗಾರಿ ನಿರ್ವಹಣೆಯಲ್ಲಿ ಲೋಪ ಕಂಡರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಮುಖಂಡರಾದ ಕೆ ಶಾಂತಪ್ಪ, ಜಯಣ್ಣ, ಮೊಹಮ್ಮದ್ ಶಾಲಾಂ, ಸಾಜಿದ್ ಸಮೀರ್, ಜಿ ಶಿವಮೂರ್ತಿ, ಜಯವಂತರಾವ್ ಪತಂಗೆ, ವಿಶ್ವಕರ್ಮ ಸಮುದಾಯದ ಮುಖಂಡ ಲಕ್ಷ್ಮೀಪತಿ, ಮಾರುತಿ ಬಡಿಗೇರ, ರಾಮು ಗಾಣದಳ, ಗಿರಿಬಾಬು ವೆಂಕಟೇಶ, ನೇಕಾರ ಸಮುದಾಯದ ಮುಖಂಡರಾದ ಉದಯಕುಮಾರ, ಸಂಜು ಕುಮಾರ, ರಘುರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.