ರಾಯಚೂರು: ನಗರದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್ಪಿ ಪಿ. ರವಿಶಂಕರ್ ನೇತೃತ್ವದ ತಂಡವು ಭಾನುವಾರ ತನಿಖೆ ಆರಂಭಿಸಿದೆ.
ನೇಣುಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದ ಮಾಣಿಕಪ್ರಭು ದೇವಸ್ಥಾನ ಹಿಂಭಾಗದ ಬೆಟ್ಟಕ್ಕೆ ಐದು ಪೊಲೀಸ್ ಅಧಿಕಾರಿಗಳಿದ್ದ ತಂಡವು ಭೇಟಿಕೊಟ್ಟು ಪರಿಶೀಲನೆ ನಡೆಸಿ ಸಮಗ್ರ ಮಾಹಿತಿ ಕಲೆಹಾಕಿದರು. ಸಿಐಡಿ ತಂಡವು ನಗರದಲ್ಲಿ ಬೀಡುಬಿಟ್ಟಿದ್ದು ತನಿಖೆ ಮುಂದುವರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಮಿತಿ ರಚನೆ:ಮೃತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಲು ಪ್ರಗತಿಪರ ವಿದ್ಯಾರ್ಥಿ ಸಂಘಟನೆಗಳು ಒಟ್ಟಾಗಿ ಹೋರಾಟ ಸಮಿತಿಯೊಂದನ್ನು ಭಾನುವಾರ ಅಸ್ತಿತ್ವಕ್ಕೆ ತಂದಿವೆ. ತನಿಖೆ ಚುರುಕುಗೊಳಿಸಿ ಆರೋಪಿಗಳನ್ನು ಪತ್ತೆ ಹಚ್ಚಬೇಕು ಎಂದು ಒತ್ತಾಯಿಸಿ ಏಪ್ರಿಲ್ 24 ರಂದು ಬೃಹತ್ ಹೋರಾಟ ನಡೆಸಲು ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.ಏಪ್ರಿಲ್ 25 ರಂದು ರಾಯಚೂರು ಸೇರಿದಂತೆ ರಾಜ್ಯದ ವಿವಿಧೆಡೆ ವಿಶ್ವಕರ್ಮ ಸಮಾಜದ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.
ಮೃತ ವಿದ್ಯಾರ್ಥಿಯ ಪಾಲಕರು ಬಳ್ಳಾರಿ ವಲಯದ ಐಜಿಪಿ ಎಂ. ನಂಜುಂಡಸ್ವಾಮಿ ಅವರನ್ನು ಭಾನುವಾರ ಭೇಟಿ ಮಾಡಿ, ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆ ಕೊಡಿಸುವ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ಇವನ್ನೂ ಓದಿ...
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.