ADVERTISEMENT

‘ಸರ್ಕಾರದ ಯೋಜನೆಗಳಿಂದ ಬದುಕು ಕಟ್ಟಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 11 ಜನವರಿ 2021, 14:03 IST
Last Updated 11 ಜನವರಿ 2021, 14:03 IST
ರಾಯಚೂರಿನ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸೋಮವಾರ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಮಾಡಲಾಯಿತು
ರಾಯಚೂರಿನ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸೋಮವಾರ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಮಾಡಲಾಯಿತು   

ರಾಯಚೂರು:ವಿಕಲಚೇತನರು ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗಲು ಸರ್ಕಾರ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ನೀಡಿದ್ದು ಫಲಾನುಭವಿಗಳು ಇದರ ಸರಿಯಾದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮಿ ಸಲಹೆ ನೀಡಿದರು.

ನಗರದ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ವಿಕಲಚೇತನರ ಕಲ್ಯಾಣಕ್ಕಾಗಿ ಶೇ 5 ರಷ್ಟು ಮೀಸಲು ಅನುದಾನದಡಿ ತೀವ್ರತರಹದ ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ವಿಕಲಚೇತನರು ವಾಹನ ಪಡೆದು ಇನ್ನೊಬ್ಬರಿಗೆ ಮಾರಿಕೊಳ್ಳದೇ ಸದ್ಭಳಕೆ ಮಾಡಿಕೊಳ್ಳಬೇಕು. ವಾಹನದ ಜತೆಗೆ ರೊಟ್ಟಿಯಂತ್ರ, ಟೀ ಪಾಯಿಂಟ್ ಕೊಡಲಾಗುತ್ತಿದೆ. ಸರ್ಕಾರದಿಂದ ಅನೇಕ ಯೋಜನೆಗಳ ಅನುಷ್ಠಾನವಾಗುತ್ತಿದ್ದು ಪಿಡಿಒ ಹಾಗೂ ಪಂಚಾಯಿತಿ ಸದಸ್ಯರು ಯೋಜನೆಗಳ ಸೌಲಭ್ಯ ಸಿಗುವಂತೆ ನೋಡಿಕೊಳ್ಳಬೇಕು ಎಂದರು.

ADVERTISEMENT

ಶಾಸಕ ಬಸನಗೌಡ ದದ್ದಲ ಮಾತನಾಡಿ, ವಿಕಲಚೇತನರು ಮುಖ್ಯವಾಹಿನಿಗೆ ಬರಲು ಸರ್ಕಾರ ವಿವಿಧ ಯೋಜನೆ ರೂಪಿಸಿ ಪ್ರತ್ಯೇಕ ಅನುದಾನ ಮೀಸಲಿಡುತ್ತಿದೆ. ವಿಕಲಚೇತನರು ನ್ಯೂನತೆಯ ಬಗ್ಗೆ ಮಾನಸಿಕವಾಗಿ ಕುಗ್ಗದೇ ಆತ್ಮಸ್ಥೈರ್ಯ ಬೆಳೆಸಿಕೊಳ್ಳಬೇಕು. ಗ್ರಾಮ ಪಂಚಾಯಿತಿಯ 14 ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ 2019–20 ನೇ ಸಾಲಿನಲ್ಲಿ ಯಂತ್ರಚಾಲಿತ ವಾಹನಗಳನ್ನು ವಿತರಿಸುತ್ತಿದೆ. ಸರಿಯಾದ ಉಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಆರ್ ಎಪಿಎಂಸಿ ಅಧ್ಯಕ್ಷ ಜಯವಂತರಾವ ಪತಂಗೆ, ಕೇಶವರೆಡ್ಡಿ, ತಹಸೀಲ್ದಾರ ಡಾ.ಹಂಪಣ್ಣ ಸಜ್ಜನ, ಜಿಲ್ಲಾ ಪಂಚಾಯಿತಿ ಸದಸ್ಯ ಹಂಪನಗೌಡ, ನರಸಿಂಹ ನಾಯಕ,ಶಿವಜ್ಯೋತಿ, ತಾಲ್ಲೂಕು ಪಂಚಾಯಿತಿ ಸದಸ್ಯ ಸಂಗಮೇಶ ಭಂಡಾರಿ, ರಾಜಪ್ಪ ಮುಖಂಡರಾದ ಹನುಮಯ್ಯ ಸಾಹುಕಾರ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ಪಾಟೀಲ, ಸತೀಶ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.