ಪ್ರಜಾವಾಣಿ ವಾರ್ತೆ
ಶಕ್ತಿನಗರ: ಸಗಮಕುಂಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜಿಲ್ಲಾಧಿಕಾರಿ ಎಲ್.ಚಂದ್ರಶೇಖರ ನಾಯಕ ಅವರು ಭೇಟಿ ನೀಡಿ, ಸ್ಥಳೀಯರಿಂದ ಅಲ್ಲಿನ ಸಮಸ್ಯೆಗಳನ್ನು ಆಲಿಸಿದರು.
ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಟ್ಟಡ ಇಲ್ಲದ ಕಾರಣ ಪ್ರಾಥಮಿಕ ಶಾಲೆಯ ಕೋಣೆಗಳಲ್ಲಿ ಕುಳಿತು ಪಾಠ ಕೇಳುವ ಸ್ಥಿತಿ ಮಕ್ಕಳದ್ದಾಗಿದೆ. ಈ ಶಾಲೆಯಲ್ಲಿ ಒಟ್ಟು 1215 ಮಕ್ಕಳು ಶಿಕ್ಷಣ ಪಡೆಯುತ್ತಿದ್ದಾರೆ.
ಬಿಸಿಯೂಟ ಮಾಡುವ ಮಕ್ಕಳಿಗೆ ಕುಳಿತು ಕೊಳ್ಳಲು ಜಾಗ ಇಲ್ಲ. ಶಾಲಾ ಆವರಣದಲ್ಲಿ ಕುಳಿತು ಊಟ ಮಾಡುತ್ತಿದ್ದಾರೆ. ಆಯಾ ತಪ್ಪಿದರೆ ಮಕ್ಕಳು ಊಟ ಮಾಡುವ ತಟ್ಟೆ ಮಣ್ಣು ಪಾಲು ಆಗುತ್ತದೆ. ದೂಳು ಸೇರುತ್ತದೆ ಎಂಬುದು ಪಾಲಕರು ಆತಂಕ ವ್ಯಕ್ತಪಡಿಸಿದರು.
2029 -20ನೇ ಸಾಲಿನ ಆರ್ಎಂಎಸ್ ಯೋಜನೆ ಅಡಿಯಲ್ಲಿ ಪ್ರೌಢಶಾಲೆ ಮಂಜುರಾತಿ ಆಗಿದೆ. ಗ್ರಾಮದ ಸರ್ಕಾರಿ ಜಮೀನಿನ ಸರ್ವೇ ನಂಬರ್ 15ರಲ್ಲಿ 4 ಎಕರೆ 5ಗುಂಟೆ ಜಮೀನಿನಲ್ಲಿ ಪ್ರೌಢಶಾಲಾ ಕಟ್ಟಡ ನಿರ್ಮಿಸಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದರು.
ಸಮಸ್ಯೆಗಳನ್ನು ಆಲಿಸಿ ನಂತರ ಮಾತನಾಡಿದ ಜಿಲ್ಲಾಧಿಕಾರಿ ಚಂದ್ರಶೇಖರ ನಾಯಕ ಅವರು, ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗದಂತೆ ಪ್ರೌಢಶಾಲೆಯ ಕಟ್ಟಡ ನಿರ್ಮಾಣಕ್ಕೆ ಟೆಂಡರ್ ಕರೆದು, ಕಾಮಗಾರಿ ಕೈಗೊಳ್ಳುವ ಕುರಿತು ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್ ಮಾತನಾಡಿ, ಪ್ರೌಢಶಾಲಾ ಕಟ್ಟಡ ನಿರ್ಮಾಣದ ಕುರಿತು ನಿವೇಶನವನ್ನು ಪರಿಶೀಲಿಸಲಾಯಿತು. ಕಟ್ಟಡ ಕಟ್ಟಲು ಅನುದಾನ ಮಂಜೂರಾತಿ ಆಗಿರುವ ಬಗ್ಗೆ ಚರ್ಚೆ ನಡೆದಿಲ್ಲ. ಜೊತೆಗೆ ಶಾಲೆಗೆ ತೆರಳುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಬಸ್ ಕೊರತೆ ಇದೆ ಎಂಬುದು ಮಾಹಿತಿ ತಿಳಿದುಬಂತು.
ಈ ಕುರಿತು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಆ ಗ್ರಾಮದಲ್ಲಿ ಬಸ್ ವ್ಯವಸ್ಥೆ ಒದಗಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡುವಂತೆ ಸೂಚನೆ ನೀಡಲಾಗಿದೆ. ಗ್ರಾಮಕ್ಕೆ ಸಾರಿಗೆ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಸಾರ್ವಜನಿಕರಿಂದ ಮಾಹಿತಿ ಪಡೆದು ಬಸ್ ಸೌಕರ್ಯ ಮಾಡುವ ಕುರಿತು ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಸಗಮಕುಂಟ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಒ, ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಶಿಕ್ಷಕರು, ಕಂದಾಯ ಮತ್ತು ಗ್ರಾಮಲೆಕ್ಕಾಧಿಕಾರಿಗಳು, ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.