ADVERTISEMENT

ಭೂ ಸ್ವಾಧೀನ ಕಾಯ್ದೆ ಜಾರಿ ವಿರೋಧಿಸಿ ಹೆದ್ದಾರಿ ತಡೆ

ಹೆದ್ದಾರಿ ಸಂಚಾರ ಸ್ಥಗಿತಗೊಳಿಸಿ ರೈತ ಸಂಘಟನೆಯಿಂದ ಪ್ರಭಟನೆ

​ಪ್ರಜಾವಾಣಿ ವಾರ್ತೆ
Published 10 ಜೂನ್ 2019, 13:08 IST
Last Updated 10 ಜೂನ್ 2019, 13:08 IST
ರಾಯಚೂರು ನಗರ ಹೊರವಲಯದ ವಡ್ಲೂರು ಕ್ರಾಸ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಕೋಡಿಹಳ್ಳಿ ಬಣ) ಸದಸ್ಯರು ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಿ ಸೋಮವಾರ ಪ್ರತಿಭಟನೆ ನಡೆಸಿದರು
ರಾಯಚೂರು ನಗರ ಹೊರವಲಯದ ವಡ್ಲೂರು ಕ್ರಾಸ್‌ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಕೋಡಿಹಳ್ಳಿ ಬಣ) ಸದಸ್ಯರು ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಿ ಸೋಮವಾರ ಪ್ರತಿಭಟನೆ ನಡೆಸಿದರು   

ರಾಯಚೂರು: ರಾಜ್ಯದಲ್ಲಿ ಭೂ ಸ್ವಾಧೀನ ಕಾಯ್ದೆ ಜಾರಿಗೊಳಿಸುವುದನ್ನು ವಿರೋಧಿಸಿ ತಾಲ್ಲೂಕಿನ ವಡ್ಲೂರು ಕ್ರಾಸ್‌ನಲ್ಲಿ ಹೆದ್ದಾರಿ ಸಂಚಾರವನ್ನು ಸ್ಥಗಿತಗೊಳಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ(ಕೋಡಿಹಳ್ಳಿ ಬಣ) ಸದಸ್ಯರು ಸಂಘದ ಜಿಲ್ಲಾ ಘಟಕದ ಅಧ್ಯಕ್ಷವಾಸುದೇವಮೇಟಿ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ವಿವಿಧ ಕೈಗಾರಿಕೆಗಳ ಸ್ಥಾಪನೆಗಾಗಿ ರೈತರು ಜಮೀನುಗಳನ್ನು ಬಿಟ್ಟುಕೊಟ್ಟಿದ್ದಾರೆ. ಆದರೆ, ಸೂಕ್ತ ಪರಿಹಾರವನ್ನು ಒದಗಿಸಿಲ್ಲ. ಸಂತ್ರಸ್ತರಿಗೆ ಉದ್ಯೋಗ ನೀಡದೆ ವಂಚಿಸಲಾಗುತ್ತಿದೆ. ಈ ಹಿಂದೆ ಕೇಂದ್ರ ಸರ್ಕಾರವು ಇದೇ ರೀತಿ ಭೂಸ್ವಾಧೀನ ಕಾಯ್ದೆ ಜಾರಿಗೊಳಿಸಲು ಮುಂದಾದಾಗ ಕೆಲವು ರಾಜ್ಯಗಳು ವಿರೋಧಿಸಿದ್ದವು. ಈ ವಿಚಾರದಲ್ಲಿ ನಿರ್ಣಯ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾಗಳಿಗೆ ನೀಡಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡಿರುವ ಸಮ್ಮಿಶ್ರ ಸರ್ಕಾರ ಸದನದಲ್ಲಿ ಚರ್ಚಿಸದೇ ಏಕಪಕ್ಷೀಯವಾಗಿ ಭೂ ಸ್ವಾಧೀನ ಮಸೂದೆ ಅಂಗೀಕರಿಸಿದೆ. ಅದರಲ್ಲಿ ರೈತರಿಗೆ ಸಮಸ್ಯೆಯಾಗುವಂತಹ ಸಾಕಷ್ಟು ಅಂಶಗಳಿವೆ. ರೈತರು ತಮ್ಮ ಹಕ್ಕು ಕಳೆದುಕೊಳ್ಳುವರು. ಯಾವುದೇ ಕಾರಣಕ್ಕೂ ಮಸೂದೆ ಜಾರಿಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿದರು.

ADVERTISEMENT

ರಾಯಚೂರು–ಹೈದರಾಬಾದ್‌ ಹೆದ್ದಾರಿಯಲ್ಲಿ ವಾಹನಗಳ ಸಂಚಾರ ಸ್ಥಗಿತಗೊಳಿಸಿದ್ದರಿಂದ 10 ಕಿಲೋ ಮೀಟರ್‌ ಸುತ್ತುವರಿದು ವಾಹನಗಳು ಸಂಚರಿಸಬೇಕಾಯಿತು. ಪ್ರತಿಭಟನೆಯ ಮುನ್ಸೂಚನೆ ಇಲ್ಲದೆ ಬರುವ ಬೈಕ್‌ ಸವಾರರು ಮತ್ತು ಇತರೆ ವಾಹನ ಸವಾರರು ಪರದಾಡಿಕೊಂಡು ವಾಪಸಾಗುತ್ತಿದ್ದ ದೃಶ್ಯ ಕಂಡುಬಂತು.

ಕಾರು ಮತ್ತು ಬೈಕ್‌ಗಳಿಗೆ ಮಾತ್ರ ಪರ್ಯಾಯ ರಸ್ತೆ ಮಾರ್ಗ ಕಲ್ಪಿಸಲಾಗಿತ್ತು. ಲಾರಿಗಳು ಮತ್ತು ಬಸ್‌ ಸಂಚಾರ ಸಾಧ್ಯವಾಗಲಿಲ್ಲ. ಬೈಪಾಸ್‌ ಮಾರ್ಗದುದ್ದಕ್ಕೂ ಲಾರಿಗಳು ಸಾಲುಗಟ್ಟಿ ನಿಂತಿದ್ದವು.

ಉಪವಿಭಾಗಾಧಿಕಾರಿ ಶಿಲ್ಪಾ ಶರ್ಮಾ ಅವರು ರೈತರ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಬಂದು ಚರ್ಚೆ ನಡೆಸಿದರು. ರೈತರ ಸಮಸ್ಯೆಗಳನ್ನು ಆಲಿಸಲು ಜಿಲ್ಲಾಧಿಕಾರಿಗಳು ಪ್ರತ್ಯೇಕ ಸಭೆ ಏರ್ಪಡಿಸಬೇಕು ಎನ್ನುವ ಬೇಡಿಕೆಯನ್ನು ಪ್ರತಿಭಟನಾಕಾರರು ಮುಂದಿಟ್ಟರು. ಈ ಬಗ್ಗೆ ಅಗತ್ಯ ಕ್ರಮಕ್ಕೆ ಕೋರಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ರೈತರು ಪ್ರತಿಭಟನೆ ಹಿಂಪಡೆದು ವಾಹನಗಳ ಸಂಚಾರಕ್ಕೆ ಅನುಕೂಲ ಮಾಡಿದರು.

ರೈತ ಮುಖಂಡರಾದ ಮಲ್ಲಿಕಾರ್ಜುನ ರೆಡ್ಡಿ, ಉಮಾದೇವಿ, ಕೃಷ್ಣ, ಬಸವರಾಜ, ಹನುಮೇಶ, ನರಸಿಂಹಲು ಬಾಪೂರು, ಸಂಘದ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರಾದ ಮಲ್ಲಿಕಾರ್ಜುನ ರೆಡ್ಡಿ, ಕೆ.ವೈ. ಬಸವರಾಜರೆಡ್ಡಿ, ಶರಣಪ್ಪ ಮಳ್ಳಿ, ಬಸನಗೌಡ ಪಾಟೀಲ, ತಾಯಪ್ಪ, ನಾಗರಾಜ ಕಾಜಿನಗೌಡರ ಅವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.