ADVERTISEMENT

ರಾಯಚೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಜಾರಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2022, 14:40 IST
Last Updated 26 ಏಪ್ರಿಲ್ 2022, 14:40 IST
ರಾಯಚೂರಿನ ಟಿ‍ಪ್ಪುಸುಲ್ತಾನ್ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.
ರಾಯಚೂರಿನ ಟಿ‍ಪ್ಪುಸುಲ್ತಾನ್ ಉದ್ಯಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.   

ರಾಯಚೂರು: ಭತ್ತ, ರಾಗಿ, ಜೋಳ ಹಾಗೂ ಮುಸುಕಿನ ಜೋಳ ಸೇರಿ ಇತರೆ ದವಸ ಧಾನ್ಯಗಳನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಪೂರ್ಣ ಉತ್ಪನ್ನಗಳನ್ನು ಖರೀದಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದ ಟಿಪ್ಪುಸುಲ್ತಾನದ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ರಾಜ್ಯದಲ್ಲಿ ಭತ್ತ, ರಾಗಿ, ಜೋಳ, ಮುಸುಕಿನ ಜೋಳ ಇತ್ಯಾದಿ ದವಸ ಧಾನ್ಯಗಳನ್ನು ಕನಿಷ್ಟ ಬೆಲೆಗಿಂತಲೂ ಕಡಿಮೆ ಬೆಲೆಗೆ ಖರೀದಿ ಮಾಡಿಕೊಳ್ಳಲಾಗುತ್ತಿದೆ. ಸರ್ಕಾರ ಖರೀದಿ ಕೇಂದ್ರಗಳ ಮೂಲಕ ರಾಗಿ, ಭತ್ತವನ್ನು ಸಂಪೂರ್ಣವಾಗಿ ಖರೀದಿಸದೇ ಮೋಸ ಮಾಡುತ್ತಿದ್ದಾರೆ ಎಂದು ದೂರಿದರು.

ಭಾಗ್ಯಜ್ಯೋತಿ, ಕುಟೀರ ಜ್ಯೋತಿ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡುವುದನ್ನು ತಕ್ಷಣವೇ ನಿಲ್ಲಿಸಬೇಕು ಹಾಗೂ ಅ ಕುಟುಂಬದವರಿಗೆ ವಿಧಿಸಿರುವ ವಿದ್ಯುತ್ ಬಿಲ್ಲನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ರೈತರು ಜಮೀನು ಖಾತೆಗಳ ಪೋಡಿ ಮತ್ತು ಹದ್ದುಬಸ್ತ ಮಾಡಲು ಶುಲ್ಕ ಕಡಿತಗೊಳಿಸಬೇಕು. ಪಂಪ್ ಸೆಟ್ ಗಳಿಗೆ 10 ತಾಸು ವಿದ್ಯುತ್ ಪೂರೈಸಬೇಕು. ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಗೊಳಿಸಬೇಕು. ರಸಗೊಬ್ಬರ ಬೆಲೆ ಇಳಿಸಬೇಕು. ನರೇಗಾ ಯೋಜನೆಯನ್ನು ಕೃಷಿ ಕ್ಷೇತ್ರಕ್ಕೂ ವಿಸ್ತರಿಸಿ ರೈತ ಕುಟುಂಬಗಳಿಗೆ ಗೌರವಧನ ನೀಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ, ಜಿಲ್ಲಾಧ್ಯ ಪ್ರಭಾಕರ ಪಾಟೀಲ ಇಂಗಳದಾಳ, ಪದಾಧಿಕಾರಿ ಬಸನಗೌಡ ಬಲ್ಲಟಗಿ, ಬಸನಗೌಡ ಮಲ್ಲಿನಮಡಗು, ದೇವರಾಜ ನಾಯಕ, ರಮೇಶ, ಮಲ್ಲಿಕಾರ್ಜುನ ದಿನ್ನಿ, ಮಲ್ಲಪ್ಪಗೌಡ, ಶರಣಪ್ಪಗೌಡ ಕುರಕುಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.