ಮಸ್ಕಿ: ನಾರಾಯಣಪುರ ಬಲದಂಡೆ 5 (ಎ) ಕಾಲುವೆ ನಿರ್ಮಾಣ ಯೋಜನೆಗೆ ಸರ್ಕಾರ ಬಜೆಟ್ನಲ್ಲಿ ₹500 ಕೋಟಿ ಮೀಸಲಿಡಬೇಕು ಎಂದು ಒತ್ತಾಯಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಪಟ್ಟಣದಲ್ಲಿ ಶನಿವಾರ ಬೈಕ್ ರ್ಯಾಲಿ ನಡೆಸಿದರು.
ಯೋಜನೆ ಜಾರಿಗೆ ಒತ್ತಾಯಿಸಿ ತಾಲ್ಲೂಕಿನ ಪಾಮನಕೆಲ್ಲೂರು ಗ್ರಾಮದಲ್ಲಿ ನಡೆಯುತ್ತಿರುವ ಧರಣಿ ಶನಿವಾರ 100ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಸತ್ಯಾಗ್ರಹ ಸ್ಥಳದಿಂದ ಪಟ್ಟಣದ ಬಸವೇಶ್ವರ ವೃತ್ತದವರೆಗೆ ರ್ಯಾಲಿ ನಡೆಸಲಾಯಿತು.
‘12 ವರ್ಷಗಳಿಂದ 5 (ಎ) ಕಾಲುವೆ ನಿರ್ಮಾಣ ಯೋಜನೆ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಗುತ್ತಿದೆ. ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷದ ಸ್ಥಾನದಲ್ಲಿದ್ದಾಗ ಹೋರಾಟ ಸಮಿತಿ ಮನವಿಗೆ ಸ್ಪಂದಿಸಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದರು. ಈಗ ಮುಖ್ಯಮಂತ್ರಿಯಾಗಿದ್ದಾರೆ. ಕೂಡಲೇ ಬೇಡಿಕೆ ಈಡೇರಿಸಬೇಕು’ ಎಂದು ಹೋರಾಟ ಸಮಿತಿ ಅಧ್ಯಕ್ಷ ಬಸವರಾಜಪ್ಪಗೌಡ ಹರ್ವಾಪೂರ ಒತ್ತಾಯಿಸಿದರು.
ಬಸವೇಶ್ವರ ನಗರದ ತಹಶೀಲ್ದಾರ್ ಕಚೇರಿ ಎದುರು ರೈತರು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮುಖಂಡ ಎಚ್.ಬಿ.ಮುರಾರಿ, ಕಾರ್ಯದರ್ಶಿ ನಾಗಿರೆಡ್ಡಿ ದೇವರಮನಿ ಹಾಗೂ ರೈತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.