ರಾಯಚೂರು:ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರ(ಆರ್ ಟಿಟಿಪಿಎಸ್) ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ವಹಿಸಿಕೊಡಬಾರದು ಎಂದುಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.
ಶಾಖೋತ್ಪನ್ನ ಕೇಂದ್ರಕ್ಕೆ ಭೂಮಿ ನೀಡಿದ ಸಂತ್ರಸ್ತರಿಗೆ ಇದುವರೆಗೆ ಉದ್ಯೋಗ ನೀಡಿಲ್ಲ. ಖಾಸಗಿಯವರಿಗೆ ನೀಡಿದರೆ, ಭೂ ಸಂತ್ರಸ್ತ ರೈತರ ಕುಟುಂಬದವರು ಉದ್ಯೋಗದಿಂದ ವಂಚಿತರಾಗುತ್ತಾರೆ ಎಂದು ದೂರಿದರು.
ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕು. ದೇಶದಲ್ಲಿ ಶೇ 80ರಷ್ಟು ಜನರು ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಆದರೆ, ನೀರಾವರಿ ಸಂಬಂಧಿಸಿದಂತೆ ನದಿ ನೀರು ಹಂಚಿಕೆಯಲ್ಲಿ ಸರ್ಕಾರ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿದೆ. ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಜಾರಿಗೊಳಿಸುವ ಮೂಲಕ ರೈತರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಲು ಹೊರಟಿದೆ ಎಂದು ಆರೋಪಿಸಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ನರಸಿಂಹ ನಾಯಕ, ಪದಾಧಿಕಾರಿ ಈರಣ್ಣ, ಶಿವಶರಣಪ್ಪ, ಸಂಗಮೇಶ ನಾಯಕ, ಹನುಮೇಶ, ಶಿವಪ್ಪ, ನರಸಿಂಹಲು ಬಾಪೂರ, ಯದ್ಲಾಪುರ ನರಸಿಂಹಲು, ನಾಗೇಂದ್ರ ಕುರತಿಪ್ಲಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.