
ಸಿಂಧನೂರು: ‘ನಗರ ಪ್ರದೇಶದಲ್ಲಿ ಜನಪದ ಕಲೆಗಳು ಕಾಣದಾಗಿವೆ. ಗ್ರಾಮೀಣ ಪ್ರದೇಶದಲ್ಲಿ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿ ಜೀವಂತವಾಗಿ ಉಳಿದಿದೆ’ ಎಂದು ಶಾಸಕ ಹಾಗೂ ಖಾದಿ ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿಕ ಇಲಾಖೆ ವತಿಯಿಂದ ತುರ್ವಿಹಾಳ ಪಟ್ಟಣದಲ್ಲಿ ನಡೆದ ‘ಸಾಂಸ್ಕೃತಿಕ ಸೌರಭ-2025’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
‘ಹಳ್ಳಿಗಳ ಜೀವನ ಶೈಲಿ, ಸಂಪ್ರದಾಯ ಮತ್ತು ಜನಪದ ಪರಂಪರೆಗಳು ನಮ್ಮ ನಾಡಿನ ನಿಜವಾದ ಸಾಂಸ್ಕೃತಿಕ ಕುರುಹುಗಳಾಗಿವೆ. ಈ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪಸರಿಸುವುದು ನಾಗರಿಕರ ಜವಾಬ್ದಾರಿಯಾಗಿದೆ’ ಎಂದರು.
‘ನಗರೀಕರಣದ ಅಲೆಯಲ್ಲಿ ನಮ್ಮ ಮೂಲ ಸಂಸ್ಕೃತಿ ಮರೆಯಾಗದಂತೆ ನೋಡಿಕೊಳ್ಳಬೇಕು. ಜಾನಪದ ಕಲೆಗಳು ಕೇವಲ ಮನರಂಜನೆಗೆ ಸೀಮಿತವಲ್ಲ. ಸಾಮಾಜಿಕ ಬದುಕಿನ ಪ್ರತಿಬಿಂಬವೂ ಆಗಿವೆ. ಸರ್ಕಾರ ಇಂಥ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕಲಾವಿದರಿಗೆ ವೇದಿಕೆ ಒದಗಿಸುತ್ತಿದೆ’ ಎಂದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಬಾಪುಗೌಡ ದೇವರಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಉತ್ತರದೇವಿ ಮಠಪತಿ, ತಹಶೀಲ್ದಾರ್ ಮಂಜುನಾಥ ಬೋಗಾವತಿ, ಪುರಸಭೆ ಸದಸ್ಯರು, ಕಲಾವಿದರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿವಿಧ ಜಾನಪದ ಕಲಾ ತಂಡಗಳು ಭಾಗವಹಿಸಿ ಸಂಸ್ಕೃತಿಯ ವೈವಿಧ್ಯತೆಯನ್ನು ಪ್ರದರ್ಶಿಸಿದವು. ಜಾನಪದ ಕಲಾವಿದರು ಹಳ್ಳಿಯ ಜೀವನ ಸೊಗಡನ್ನು ವೇದಿಕೆಗೆ ತಂದು ಪ್ರೇಕ್ಷಕರ ಮನಗೆದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.