ADVERTISEMENT

ನಕಲಿ ಸಹಿ ಮಾಡಿ ಕ್ರಿಯಾ ಯೋಜನೆ ಸಲ್ಲಿಕೆ ಆರೋಪ

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 3:49 IST
Last Updated 25 ಅಕ್ಟೋಬರ್ 2021, 3:49 IST

ರಾಯಚೂರು: ‘ದೇವದುರ್ಗ ತಾಲ್ಲೂಕಿನ ಮಲ್ಲೆದೇವರಗುಡ್ಡ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಧ್ಯಕ್ಷರ ನಕಲಿ ಸಹಿ ಮಾಡಿ ಉದ್ಯೋಗ ಖಾತ್ರಿ ಯೋಜನೆಯ ಹೆಚ್ಚುವರಿ ಕ್ರಿಯಾ ಯೋಜನೆ ಸಲ್ಲಿಸಿದ್ದು, ಕೂಡಲೇ ಅದನ್ನು ರದ್ದುಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು’ ಎಂದು ಗ್ರಾಮ ಪಂಚಾಯಿತಿ ಸದಸ್ಯ ಅಮರೇಶ ಚೌವಾಣ್‌ ಒತ್ತಾಯಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರ ಗಮನಕ್ಕಿಲ್ಲದೆ ಸಿಬ್ಬಂದಿ 2021-22ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಯಡಿ ₹69 ಲಕ್ಷ ಕ್ರಿಯಾ ಯೋಜನೆ ಸಲ್ಲಿಸಿದ್ದಾರೆ. ಸಾಮಾನ್ಯ ಸಭೆಯ ಕ್ರಿಯಾ ಯೋಜನೆ ಕೈಬಿಡಲಾಗಿದೆ’ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ದೇವದುರ್ಗ ತಾಲ್ಲೂಕು ಪಂಚಾಯಿತಿ ಇಒ ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗೆ ಲಿಖಿತ ದೂರು ನೀಡಲಾಗಿದೆ. ಆದರೂ ಕ್ರಮಕೈಗೊಂಡಿಲ್ಲ ಎಂದು ಹೇಳಿದರು.

ಪಿಡಿಒ, ಕಾರ್ಯದರ್ಶಿ ಹಾಗೂ ಕಂಪ್ಯೂಟರ್ ಆಪರೇಟರ್ ಅಧ್ಯಕ್ಷರ ನಕಲಿ ಸಹಿ ಮಾಡುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ADVERTISEMENT

ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ, ಸದಸ್ಯ ಗೋವಿಂದ, ಬಾಲಮ್ಮ ಹಾಗೂ ಬಸವರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.