
ಕವಿತಾಳ: ಎಸ್ಸಿಪಿ, ಟಿಎಸ್ಪಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಸಿಂಧೂ ಅವರು ಸಮೀಪದ ಬಾಗಲವಾಡ ಗ್ರಾಮಕ್ಕೆ ಬುಧವಾರ ಭೇಟಿ ನೀಡಿ ರಸ್ತೆ ಕಾಮಗಾರಿ ಪರಿಶೀಲಿಸಿದರು.
ಬಾಗಲವಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಡುಗಡ್ಡೆ ಕ್ಯಾಂಪ್ನಲ್ಲಿ 2023-24ನೇ ಸಾಲಿನ ಅಂದಾಜು ₹15 ಲಕ್ಷ ಎಸ್ಸಿಪಿ, ಟಿಎಸ್ಪಿ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯದವರು ವಾಸಿಸದ ಕಡೆ, ಖಾಸಗಿ ವ್ಯಕ್ತಿಯ ಜಮೀನಿಗೆ ಸಂಪರ್ಕಿಸುವ ಕಡೆ ಕಾಂಕ್ರೀಟ್ ರಸ್ತೆ ನಿರ್ಮಿಸಿ ಅನುದಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ (ಭೀಮವಾದ) ಪದಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ದೂರು ನೀಡಿದ್ದರು.
ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ಸ್ಥಳಕ್ಕೆ ಭೇಟಿ ನೀಡಿದ ಉಪನಿರ್ದೇಶಕಿ ಕಾಮಗಾರಿ ಪರಿಶೀಲಿಸಿ ದೂರುದಾರರು ಮತ್ತು ಸ್ಥಳೀಯರಿಂದ ಮಾಹಿತಿ ಪಡೆದರು.
ಈ ಕುರಿತು ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದು ಎಂದು ಉಪನಿರ್ದೇಶಕಿ ಸಿಂಧೂ ತಿಳಿಸಿದರು.
ಸಂಘಟನೆ ಮುಖಂಡರಾದ ಗಂಗಾಧರ ಬಾಗಲವಾಡ, ನಾಗರಾಜ ಹಿಂದಿನಮನಿ, ಮೌನೇಶ ಕೋರಿ, ಜಗದೀಶ ಸಾಲಮನಿ ಮತ್ತು ನಾಗರಾಜ ಭೋವಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.