ADVERTISEMENT

ಸ್ಥಳೀಯ ಚುನಾವಣೆ ಗೆಲ್ಲಲು ಸಿದ್ಧರಾಗಿ: ಮಾಜಿ ಶಾಸಕ ಪ್ರತಾಪಗೌಡ ಪಾಟೀಲ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 11:05 IST
Last Updated 8 ಜುಲೈ 2021, 11:05 IST
ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ವಿವಿಧ ಮೊರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿದರು  
ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ವಿವಿಧ ಮೊರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿದರು     

ಮಸ್ಕಿ: ‘ವಿಧಾನಸಭೆಯ ಉಪ ಚುನಾವಣೆಯಲ್ಲಿನ ಸೋಲಿನ ಕಹಿ ಮರೆತು ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸಲು ಪಕ್ಷದ ಎಲ್ಲಾ ಪದಾಧಿಕಾರಿಗಳು ಶ್ರಮಿಸಬೇಕು‘ ಎಂದು ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆಯಲಾಗಿದ್ದ ಪಕ್ಷದ ವಿವಿಧ ಮೊರ್ಚಾಗಳ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಉಪ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾದ ನಂತರ ಸಭೆ ಕರೆಯಬೇಕಾಗಿತ್ತು. ಆದರೆ, ಕೊವಿಡ್ ಲಾಕ್‌ಡೌನ್ ಕಾರಣ ಹೆಚ್ಚಿನ ಜನರನ್ನು ಸೇರಿಸಬಾರದು ಎಂಬ ಸರ್ಕಾರದ ನಿಯಮ ಇದ್ದ ಕಾರಣ ಸಭೆ ಕರೆಲಾಗಲಿಲ್ಲ‘ ಎಂದರು.

‘ಕ್ಷೇತ್ರದಲ್ಲಿ ಮೂರು ಬಾರಿ ಶಾಸಕನಾಗಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಸಹ ಮತದಾರರು ಉಪ ಚುನಾವಣೆಯಲ್ಲಿ ನನಗೆ ಬೆಂಬಲಿಸಲಿಲ್ಲ. ಮೂರು ಬಾರಿ ಶಾಸಕನಾಗಿದ್ದರಿಂದ ಸಹಜವಾಗಿಯೇ ವಿರೋಧ ಇದ್ದೇ ಇರುತ್ತದೆ. ಮತದಾರರು ನೀಡಿದ ತೀರ್ಪಿಗೆ ನಾವು ಬದ್ಧರಾಗೋಣ‘ ಎಂದರು.

ADVERTISEMENT

‘ಕೇಂದ್ರ ಹಾಗೂ ರಾಜ್ಯದಲ್ಲಿ ನಮ್ಮದೇ ಸರ್ಕಾರ ಇದೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿ ತೋರಿಸೋಣ, ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬಾರದು. ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಹಾಗೂ ಮಸ್ಕಿ ಪುರಸಭೆ ಹಾಗೂ ಬಳಗಾನೂರು, ತುರ್ವಿಹಾಳ ಪಟ್ಟಣ ಪಂಚಾಯಿತಿಗಳ ಚುನಾವಣೆಯಲ್ಲಿ ಅಧಿಕಾರವನ್ನು ಹಿಡಿಯುವ ಮೂಲಕ ಶಕ್ತಿ ತೋರಿಸೋಣ‘ ಎಂದರು.

ಪಕ್ಷದ ಮುಖಂಡ ಮಹಾದೇವಪ್ಪಗೌಡ ಪೊಲೀಸ್ ಪಾಟೀಲ್. ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಪಕ್ಷದ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ, ಎಸ್ಸಿ ಮೊರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಶರಣಬಸವರಾಜ ವಕೀಲ, ಶರಣಯ್ಯ ಸೊಪ್ಪಿಮಠ, ಮಲ್ಲು ಯಾದವ್, ಅಭಿಜಿತ್ ಪಾಟೀಲ ಸೇರಿದಂತೆ ಇತರರು ಇದ್ದರು.

ವಿವಿಧ ಮೊರ್ಚಾಗಳ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.