ADVERTISEMENT

ಉಸ್ತುವಾರಿ ವಿರುದ್ಧ ‘ಗೋ ಬ್ಯಾಕ್’ ಘೋಷಣೆ

ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳಿಂದ ಪ್ರತಿಭಟನೆ: ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 3:44 IST
Last Updated 8 ಆಗಸ್ಟ್ 2021, 3:44 IST
ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಶನಿವಾರ ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು
ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಶನಿವಾರ ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ರಾಯಚೂರಿನ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು   

ರಾಯಚೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದನೂತನ ಸಚಿವ ಸಂಪುಟದಲ್ಲಿ ಜಿಲ್ಲೆಗೆ ಸಚಿವ ಸ್ಥಾನ ನೀಡದೇ ಹೊರಗಿನವರಿಗೆ ಉಸ್ತುವಾರಿ ನೀಡಿರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಜಿಲ್ಲೆಗೆ ಆಗಮಿಸಿದ ಉಸ್ತುವಾರಿ ಸಚಿವ ವಿ. ಸೋಮಣ್ಣ ಅವರ ವಿರುದ್ಧ ‘ಗೋ ಬ್ಯಾಕ್ ಉಸ್ತುವಾರಿ’ ಎಂದು ಘೋಷಣೆ ಕೂಗಿ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

ನಂಜುಂಡಪ್ಪ ವರದಿ ಪ್ರಕಾರ ಈ ಭಾಗಕ್ಕೆ 8 ಸಚಿವ ಸ್ಥಾನ ನೀಡಬೇಕು. ಆದರೆ ನೂತನ ಸಚಿವ ಸಂಪುಟದಲ್ಲಿ ಕೇವಲ 2 ಸಚಿವ ಸ್ಥಾನ ನೀಡಿ ಮಲತಾಯಿ ಧೋರಣೆ ಅನುಸರಿಸಲಾಗಿದೆ. ಕೊಪ್ಪಳ ಜಿಲ್ಲೆಗೆ ಸಚಿವ ಸ್ಥಾನ ನೀಡಿ ಹಾಲಪ್ಪ ಆಚಾರ್‌ಗೆ ಉಸ್ತುವಾರಿ ನೀಡಿ ಬೀದರ್‌ಗೆ ಪ್ರಭು ಚವ್ಹಾಣ್ ಅವರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ನೀಡಿದ್ದು ಸರಿಯಲ್ಲ.

ಅಖಂಡ ಕರ್ನಾಟಕಬಯಸುವುದಾದರೆ ಕೊಪ್ಪಳ ಹಾಲಪ್ಪ ಆಚಾರರನ್ನು ಮೈಸೂರು ಜಿಲ್ಲೆಗೆ ಉಸ್ತುವಾರಿಯನ್ನಾಗಿ ಮಾಡಿ, ಬೀದರ್‌ಜಿಲ್ಲೆಯ ಪ್ರಭು ಚವ್ಹಾಣ್ ಅವರನ್ನು ಹುಬ್ಬಳ್ಳಿ- ಧಾರವಾಡದ ಉಸ್ತುವಾರಿಯನ್ನಾಗಿ ಮಾಡಬೇಕಿತ್ತು. ಎರಡನೇ ಹಂತದ ಸಚಿವ ಸಂಪುಟ ರಚನೆಯಲ್ಲಿ ಜಿಲ್ಲೆಗೆ ಸಚಿವ ಸ್ಥಾನ ನೀಡಿ ಪ್ರಾದೇಶಿಕ ಅಸಮಾನತೆ ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿದರು.

ADVERTISEMENT

ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಯ ಮುಖಂಡ ಆಶೋಕ ಕುಮಾರ ಜೈನ್, ಶಿವಕುಮಾರ ಯಾದವ, ಖಲೀಲ್ ಪಾಶಾ, ವೀರೇಶ ಹೀರಾ, ಸಾದಿಕ್ ಖಾನ್, ಎಂ.ಡಿ.ರಫೀಕ್, ವೀರೇಶ ಹಾಗೂ ರಾಮು ಇದ್ದರು.

ತರಕಾರಿ ಮಾರುಕಟ್ಟೆ ಸಂಘದಿಂದ ಪ್ರತಿಭಟನೆ: ಹಿಂದುಳಿದ ಜಿಲ್ಲೆಗೆ ಸಚಿವ ಸ್ಥಾನ ನೀಡದೇ ಅನ್ಯ ಜಿಲ್ಲೆಯ ವಿ. ಸೋಮಣ್ಣ ಅವರನ್ನು ಉಸ್ತುವಾರಿ ಸಚಿವರನ್ನಾಗಿ ಮಾಡಿರುವುದನ್ನು ಖಂಡಿಸಿ ರಾಯಚೂರು ನಗರದ ಉಸ್ಮಾನಿಯಾ ತರಕಾರಿ ಮಾರಾಟಗಾರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಪ್ರತ್ಯೇಕವಾಗಿ ಗೋ ಬ್ಯಾಕ್ ಚಳವಳಿ ನಡೆಸಿ ಮನವಿ ಸಲ್ಲಿಸಿದರು.

ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಹಿಂದುಳಿದ ರಾಯಚೂರು ಜಿಲ್ಲೆಯಲ್ಲಿ ಇಬ್ಬರು ಬಿಜೆಪಿ ಶಾಸಕರಿದ್ದರೂ ಸಚಿವ ಸ್ಥಾನ ನೀಡದೇ ಸ್ಥಳೀಯರಿಗೆ ಅನ್ಯಾಯ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅನ್ಯಾಯ ಸರಿಪಡಿಸದಿದ್ದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ಸಂಘದ ಅಧ್ಯಕ್ಷ ಎನ್. ಮಹಾವೀರ, ಕಾರ್ಯದರ್ಶಿ ಪ್ರಭುನಾಯಕ, ಖಾಜಪ್ಪ, ರಮೇಶ ಬಳ್ಳಾರಿ, ತಿಮ್ಮಾರೆಡ್ಡಿ ಬಿ. ಯಂಕಣ್ಣ ಹಾಗೂ ಉದಯಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.