ADVERTISEMENT

ಕೆಲಸದ ಹಕ್ಕು ಕಸಿದ ಸರ್ಕಾರ: ಎಐಯುಟಿಯುಸಿ ರಾಜ್ಯ ಘಟಕ ಉಪಾಧ್ಯಕ್ಷ ಸೋಮಶೇಖರ

ಕಾರ್ಮಿಕರ ಜಿಲ್ಲಾಮಟ್ಟದ ಸಮಾವೇಶ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2018, 14:05 IST
Last Updated 10 ಡಿಸೆಂಬರ್ 2018, 14:05 IST
ರಾಯಚೂರಿನಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಮಿಕರ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಎಐಯುಟಿಯುಸಿ ರಾಜ್ಯ ಘಟಕ ಉಪಾಧ್ಯಕ್ಷ ಸೋಮಶೇಖರ ಮಾತನಾಡಿದರು
ರಾಯಚೂರಿನಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಮಿಕರ ಜಿಲ್ಲಾ ಮಟ್ಟದ ಸಮಾವೇಶದಲ್ಲಿ ಎಐಯುಟಿಯುಸಿ ರಾಜ್ಯ ಘಟಕ ಉಪಾಧ್ಯಕ್ಷ ಸೋಮಶೇಖರ ಮಾತನಾಡಿದರು   

ರಾಯಚೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳಿಂದಾಗಿ ದೇಶದ ಕಾರ್ಮಿಕರು ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಕಾರ್ಮಿಕರ ಕಾನೂನುಗಳ ತಿದ್ದುಪಡಿ ಮೂಲಕ ಕೆಲಸದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಎಐಯುಟಿಯುಸಿ ರಾಜ್ಯ ಘಟಕ ಉಪಾಧ್ಯಕ್ಷ ಸೋಮಶೇಖರ್ ಹೇಳಿದರು.

ನಗರದ ಜೆ.ಸಿ. ಭವನದಲ್ಲಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಮಿಕರ ಜಿಲ್ಲಾ ಮಟ್ಟದ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ನಾಲ್ಕು ವರ್ಷ ಅಧಿಕಾರ ಪೂರೈಸಿದ ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ನೀತಿಗಳನ್ನು ತೀವ್ರಗತಿಯಲ್ಲಿ ಜಾರಿ ಮಾಡುತ್ತಿದೆ. ಬಂಡವಾಳ ಶಾಹಿಗಳ ಪರವಾಗಿ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡುವ ಮೂಲಕ ಕಾರ್ಮಿಕ ವರ್ಗದ ಬದುಕು ಹಾಗೂ ದೇಶದ ಆರ್ಥಿಕತೆ ನಾಶ ಮಾಡಲು ಹೊರಟಿದೆ ಎಂದು ದೂರಿದರು.

ADVERTISEMENT

ಐಎನ್‌ಟಿಯುಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚಿದಾನಂದ ಮಾತನಾಡಿ, ಕೇಂದ್ರ ಸರ್ಕಾರದ ಬೆಲೆ ಏರಿಕೆಯಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಜನವಿರೊಧಿ ನೀತಿಯನ್ನು ಅನುಸರಿಸುವುದರಿಂದ ಕಾರ್ಮಿಕರ ಹಾಗೂ ಜನಸಾಮಾನ್ಯರ ಬದುಕು ಸಂಕಷ್ಟಮಯವಾಗಿದೆ ಎಂದು ಆರೋಪಿಸಿದರು.

ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಶೇಕ್ಷಾಖಾದ್ರಿ ಮಾತನಾಡಿ, ನರೇಂದ್ರ ಮೋದಿ ನೀಡಿರುವ ಆಶ್ವಾಸನೆಗಳೆಲ್ಲ ಸುಳ್ಳಾಗಿವೆ. ನೋಟು ಅಮಾನ್ಯೀಕರಣ, ಜಿಎಸ್‌ಟಿ, ತೈಲ ಬೆಲೆ ಏರಿಕೆ ದೇಶದ ಜನರ ಬದುಕು ಹೈರಾಣಿಗಿಸಿದೆ ಎಂದು ಹೇಳಿದರು.

ದೇಶದ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿದ್ದ ನೂರಾರು ಸಾರ್ವಜನಿಕ ಉದ್ದಿಮೆಗಳನ್ನು ನಷ್ಟದ ನೆಪದಲ್ಲಿ ಖಾಸಗಿಕರಣಗೊಳಿಸಿ ಬಂಡವಾಳಗಾರರಿಗೆ ಲಾಭ ಮಾಡಿಕೊಡಲಾಗುತ್ತಿದೆ. ಜಿಡಿಪಿಗೆ ಕೊಡುಗೆ ನೀಡುತ್ತಿರುವ ಅಸಂಘಟಿತ ವಲಯವನ್ನು ಸಂಪೂರ್ಣ ಕಡೆಗಣನೆ ಮಾಡಲಾಗಿದೆ. ಸಾಮಾಜಿಕ ಭದ್ರತೆ ಇಲ್ಲಂದಾಗಿದೆ ಎಂದರು.

ಎಐಟಿಯುಸಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಾಷುಮಿಯ ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ವೀರೇಶ ಪ್ರಾಸ್ತಾವಿಕ ಮಾತನಾಡಿದರು.

ವಿಮಾ ನೌಕರರ ಸಂಘದ ವಿಭಾಗೀಯ ಕಾರ್ಯದರ್ಶಿ ಎಂ.ರವಿ, ಬಿಎಸ್‌ಎನ್‌ಎಲ್‌ ನೌಕರರ ಸಂಘದ ಕಾರ್ಯದರ್ಶಿ ವಿ.ಎಂ.ಉಕ್ಕಲಿ, ಲಾಲಪ್ಪ, ತಿಮ್ಮಪ್ಪ ಸ್ವಾಮಿ ಮಲಿಯಬಾದ, ಸಿಐಟಿಯು ಜಿಲ್ಲಾಧ್ಯಕ್ಷೆ ಎಚ್.ಪದ್ಮಾ, ಬಸವರಾಜ ಗಾರಲದಿನ್ನಿ, ಶ್ರೀನಿವಾಸ, ಡಿ.ಎಚ್.ಕಂಬಳಿ, ಹರೀಶ್ ಇದ್ದರು. ಡಿ.ಎಸ್.ಶರಣಬಸವ ನಿರೂಪಿಸಿದರು. ಮಹೇಶ್ ಚೀಕಲಪರ್ವಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.