ಸಿಂಧನೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಂಧನೂರು ತಾಲ್ಲೂಕು ಗ್ರಾಮ ಪಂಚಾಯಿತಿಗಳ ಸದಸ್ಯರ ಒಕ್ಕೂಟ ಈಚೆಗೆ ಇಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಮುಂದೆ ಪ್ರತಿಭಟಿಸಿತು.
ತಾಲ್ಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು, ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ಒಳಗೊಂಡು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ಕುಂದು-ಕೊರತೆಗಳ ಬಗ್ಗೆ ಚರ್ಚೆ ಮಾಡಲು ದಿನಾಂಕ ನಿಗದಿಪಡಿಸಬೇಕು. 15ನೇ ಹಣಕಾಸಿನ ಕ್ರಿಯಾ ಯೋಜನೆ ಅನುಮೋದನೆಗೆ ಶೀಘ್ರ ಚಾಲನೆ ನೀಡಬೇಕು.
ಗ್ರಾಮ ಪಂಚಾಯಿತಿ ಅಡಿಯಲ್ಲಿ ನರೇಗಾ ಕಾಮಗಾರಿಗಳ ಕ್ರಿಯಾ ಯೋಜನೆ ತಯಾರಿಸಿ ಅನುಮೋದಿಸಿ ಕೆಲಸಗಳನ್ನು ಪ್ರಾರಂಭಿಸಬೇಕು. ಗ್ರಾಮ ಪಂಚಾಯಿತಿ ಅಧ್ಯಕ್ಷರ, ಉಪಾಧ್ಯಕ್ಷರ ಮತ್ತು ಸದಸ್ಯರ ಗೌರವಧನ ಬಿಡುಗಡೆ ಮಾಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಮಹಾಂತೇಶ ಹಿರೇಗೌಡರ್ ಒತ್ತಾಯಿಸಿದರು.
ಈಗಿರುವ ಗೌರವಧನವನ್ನು ಹೆಚ್ಚಿಸಬೇಕು. ಪ್ರತಿತಿಂಗಳು ಕಾಯ್ದೆ ಪ್ರಕಾರ ಸಕಾಲದಲ್ಲಿ ಸಾಮಾನ್ಯ ಸಭೆ ನಡೆಸಬೇಕು. ತಾಲ್ಲೂಕಿನ ಗ್ರಾಮ ಪಂಚಾಯಿತಿ 14ನೇ ಹಣಕಾಸಿನಲ್ಲಿ ಬಾಕಿ ಇರುವ ಪಂಚಾಯತಿಗಳ ಹಣ ಮತ್ತು 15ನೇ ಹಣಕಾಸಿನ ಹಣವನ್ನು ಬಿಡುಗಡೆಗೊಳಿಸಬೇಕು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸದೆ ಇರುವುದರ ಬಗ್ಗೆ ಕ್ರಮವಹಿಸಬೇಕು. ನರೇಗಾ ಯೋಜನೆಯಡಿ ಕೆಲಸ ಮಾಡುವವರಿಗೆ ತಾರತಮ್ಯ ಮಾಡಬಾರದು ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪವನಕುಮಾರ ಮನವಿ ಪತ್ರ ಸ್ವೀಕರಿಸಿದರು. ಪ್ರಧಾನ ಕಾರ್ಯದರ್ಶಿ ರವಿ ಮಲ್ಲದಗುಡ್ಡ ಸೇರಿದಂತೆ ಒಕ್ಕೂಟದ ಎಲ್ಲ ಸದಸ್ಯರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.