ADVERTISEMENT

ಮುಂದಿನ ವರ್ಷ ರಾಯಚೂರಿನಲ್ಲಿಯೇ ಐಐಐಟಿ

ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ್‌ ಅಧ್ಯಕ್ಷತೆಯಲ್ಲಿ ನಡೆದ ಸಭೆ

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 18:00 IST
Last Updated 8 ನವೆಂಬರ್ 2019, 18:00 IST
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅಧ್ಯಕ್ಷತೆಯಲ್ಲಿ ಐಐಐಟಿಗೆ ಸಂಬಂಧಿಸಿದಂತೆ ಶುಕ್ರವಾರ ಸಭೆ ನಡೆಯಿತು
ರಾಯಚೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ಆರ್‌.ವೆಂಕಟೇಶಕುಮಾರ್‌ ಅಧ್ಯಕ್ಷತೆಯಲ್ಲಿ ಐಐಐಟಿಗೆ ಸಂಬಂಧಿಸಿದಂತೆ ಶುಕ್ರವಾರ ಸಭೆ ನಡೆಯಿತು   

ರಾಯಚೂರು: ಜಿಲ್ಲೆಯಲ್ಲಿ ಐಐಐಟಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಅದು ಪ್ರಾರಂಭವಾಗುವವರೆಗೂ ಮುಂದಿನ ಶೈಕ್ಷಣಿಕ ವರ್ಷದಿಂದ ತಾತ್ಕಾಲಿಕವಾಗಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಾರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಐಐಐಟಿ ಹೈದರಾಬಾದ್‌ ಅಧಿಕಾರಿಗಳ ತಂಡದೊಂದಿಗೆ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದರು.

ಐಐಐಟಿಗೆ ಸಂಬಂಧಿಸಿದಂತೆ ಕಟ್ಟಡ ಕಾಮಗಾರಿಯು ನಿರ್ಮಾಣದ ಹಂತದಲ್ಲಿದ್ದು, ಮುಖ್ಯವಾಗಿ ರಸ್ತೆಯ ನಿರ್ಮಾಣಕ್ಕೆ ಮೊದಲ ಆದ್ಯತೆ ನೀಡಬೇಕು. ಆನಂತರ ಕಾಂಪೌಂಡ್, ವಿದ್ಯುತ್, ನೀರು ಸರಬರಾಜು ಕಾರ್ಯಗಳು ತ್ವರಿತಗತಿಯಲ್ಲಿ ಆಗಬೇಕು ಎಂದರು.

ADVERTISEMENT

ಐಐಐಟಿ ಮೊದಲನೇ ವರ್ಷದ ತಂಡದಲ್ಲಿ ಈಗಾಗಲೇ 32 ವಿದ್ಯಾರ್ಥಿಗಳು ಹೈದರಾಬಾದ್‌ ಅಭ್ಯಾಸ ಮಾಡುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ತಾತ್ಕಾಲಿಕವಾಗಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಐಐಐಟಿ ಪ್ರಾರಂಭಿಸಲು ನಿರ್ಧಾರಿಸಲಾಗಿದೆ. ಐಐಐಟಿ ಪ್ರಾರಂಭಕ್ಕೆ ಅಗತ್ಯ ಸೌಲಭ್ಯಗಳು ಒದಗಿಸಲು ಹೆಚ್ಚುವರಿ ಅನುದಾನ ಪಡೆಯಲು ಕೆಕೆಆರ್‌ಡಿಬಿಗೆ ಪ್ರಸ್ತಾವನೆ ಸಲ್ಲಿಸಲು ವರದಿ ಸಿದ್ದಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯಕ್ಕಾಗಿ 32 ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯಗಳನ್ನು ಒಳಗೊಂಡ ಎರಡು ವಸತಿ ನಿಲಯಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಒಂದು ವಸತಿ ನಿಲಯ ನಿರ್ಮಾಣಕ್ಕೆ ₹1.5 ಕೋಟಿ ವೆಚ್ಚವಾಗುತ್ತಿದ್ದು, ಮುಂದಿನ ವರ್ಷದಲ್ಲಿ ವಸತಿ ನಿಲಯ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಈಗಾಗಲೇ ಪ್ರಥಮ ಮತ್ತು ದ್ವಿತೀಯ ಬ್ಲಾಕ್‌ ಉಪಯೋಗಿಸಲಾಗಿದೆ ಇನ್ನೂ ಸಣ್ಣ ಸಣ್ಣ ಸಿವಿಲ್ ಕೆಲಸಗಳು ಮಾತ್ರ ಬಾಕಿ ಇದ್ದು, ಅತಿ ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಎಂಜಿನಿಯರ್‌ ತಿಳಿಸಿದರು.

ಉಪವಿಭಾಗಾಧಿಕಾರಿ ಆಯುಕ್ತ ಸಂತೋಷ ಕುಮಾರ, ಸರ್ಕಾರಿ ಎಂಜಿನಿಯರ್ ಕಾಲೇಜಿನ ಪ್ರಾಧ್ಯಾಪಕ ಕೆ.ಆರ್. ದಿನೇಶ್, ಕರ್ನಾಟಕ ನೀರಾವರಿ ನಿಗಮ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ವಿದ್ಯಾಸಾಗರ್, ಬಸವರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರನಗೌಡ, ಐಐಟಿ ತಂಡದವರಾದ ಡಾ.ಪ್ರೇಮಪಾಲ್, ಸಾರಂಗದರ,ವಿಜಯಕುಮಾರ, ಸಿ.ಎಚ್. ಸುಬ್ರಮಣ್ಯಂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.