ADVERTISEMENT

‘ಮದ್ಯ ಅಕ್ರಮ ಮಾರಾಟಕ್ಕೆ ಕಡಿವಾಣ ಹಾಕಿ’

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 6:35 IST
Last Updated 1 ಮಾರ್ಚ್ 2026, 6:35 IST
ಸಿಂಧನೂರು ತಾಲ್ಲೂಕಿನ ಮಾಡಶಿರವಾರ ಗ್ರಾಮದ ಮಹಿಳೆಯರು ಕೆಆರ್‌ಎಸ್‌ ಪಕ್ಷ, ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರರ ಸಂಘದ ನೇತೃತ್ವದಲ್ಲಿ ತಹಶೀಲ್ದಾರ್ ಅರುಣ್ ಎಚ್.ದೇಸಾಯಿಗೆ ಮನವಿ ಪತ್ರ ಸಲ್ಲಿಸಿದರು
ಸಿಂಧನೂರು ತಾಲ್ಲೂಕಿನ ಮಾಡಶಿರವಾರ ಗ್ರಾಮದ ಮಹಿಳೆಯರು ಕೆಆರ್‌ಎಸ್‌ ಪಕ್ಷ, ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರರ ಸಂಘದ ನೇತೃತ್ವದಲ್ಲಿ ತಹಶೀಲ್ದಾರ್ ಅರುಣ್ ಎಚ್.ದೇಸಾಯಿಗೆ ಮನವಿ ಪತ್ರ ಸಲ್ಲಿಸಿದರು   

ಸಿಂಧನೂರು: ‘ತಾಲ್ಲೂಕಿನ ಮಾಡಶಿರವಾರ ಗ್ರಾಮದಲ್ಲಿ ನಡೆಯುತ್ತಿರುವ ಮದ್ಯ ಅಕ್ರಮ ಮಾರಾಟದ ವಿರುದ್ಧ ಕಠಿಣ ಕ್ರಮ ಜರುಗಿಸುವ ಮೂಲಕ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಪಕ್ಷ, ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರರ ಸಂಘದ ನೇತೃತ್ವದಲ್ಲಿ ನೂರಾರು ಮಹಿಳೆಯರು ಸ್ಥಳೀಯ ಮಿನಿವಿಧಾನಸೌಧ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದರು.

ಮಾಡಶಿರವಾರ ಗ್ರಾಮದಲ್ಲಿ ಕೆಲ ವ್ಯಕ್ತಿಗಳು ಯಾವುದೇ ಪರವಾನಗಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ, ವಸತಿ ಪ್ರದೇಶಗಳ ಸಮೀಪ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ. ಗ್ರಾಮದ ಯುವಕರು, ಕಾರ್ಮಿಕರು, ರೈತರು ವ್ಯಸನಿಗಳಾಗುತ್ತಿದ್ದಾರೆ. ಕುಟುಂಬ ಕಲಹ, ಅಶಾಂತಿ, ಕಾನೂನು ಸುವ್ಯವಸ್ಥೆಗೆ  ಭಂಗ ಉಂಟಾಗುತ್ತಿದೆ’ ಎಂದು ಕೆಆರ್‌ಎಸ್ ಮುಖಂಡ ನಿರುಪಾದಿ ಕೆ.ಗೋಮರ್ಸಿ ಆಕ್ರೋಶ ವ್ಯಕ್ತಪಡಿಸಿದರು.‌

ಸಾಮಾಜಿಕ ಹೋರಾಟಗಾರ್ತಿ ವಿರುಪಮ್ಮ ಮಾತನಾಡಿ, ‘ತಾಲ್ಲೂಕಿನ ಬಹುತೇಕ ಗ್ರಾಮಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ರಾಜಾರೋಷವಾಗಿ ನಡೆಯುತ್ತಿದೆ. ಇದು ಅಬಕಾರಿ ಮತ್ತು ಪೊಲೀಸ್ ಇಲಾಖೆಗಳ ಗಮನದಲ್ಲಿದ್ದರೂ ಯಾವುದೇ ಕ್ರಮ ಜರುಗಿಸದೆ ಮೌನವಹಿಸಿವೆ’ ಎಂದರು.

ADVERTISEMENT

ತಹಶೀಲ್ದಾರ್ ಅರುಣ್ ಎಚ್.ದೇಸಾಯಿ, ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ಮೌನೇಶ ರಾಠೋಡ್ ಹಾಗೂ ಅಬಕಾರಿ ನಿರೀಕ್ಷಕರಿಗೆ ಮನವಿ ಪತ್ರ ಸಲ್ಲಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಬಸವರಾಜ ಗೋಡಿಹಾಳ, ಮದ್ಯ ನಿಷೇಧ ಆಂದೋಲನದ ಸಂಚಾಲಕಿ ಮೋಕ್ಷಮ್ಮ, ಮರಿಯಮ್ಮ, ಇಂದಿರಮ್ಮ, ಶಿವಮ್ಮ, ಈರಮ್ಮ, ವಿಜಯಲಕ್ಷ್ಮಿ, ಯಂಕಮ್ಮ, ಅಂಬಮ್ಮ, ಸಾವಿತ್ರಮ್ಮ, ಯಮನಮ್ಮ, ಗ್ರಾಮದ ಮುಖಂಡರಾದ ವೀರೇಶ, ಜಗದೀಶ, ಶಿವರಾಜ, ನಾಗರಾಜ, ಬಾಳಪ್ಪ, ರಾಮಣ್ಣ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.