
ಜಾಲಹಳ್ಳಿ: ಸಮೀಪದ ಮುದಗೋಟ ಗ್ರಾಮದ ಬಳಿಯ ಕೃಷ್ಣಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳು ಸಂಗ್ರಹ ಮಾಡುತ್ತಿದ್ದ ಎರಡು ಹಿಟಾಚಿ ಯಂತ್ರಗಳನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನದಿ ಪಾತ್ರದ ಮೂಲಕ ದೇವದುರ್ಗ ತಾಲ್ಲೂಕಿನ ಮುದಗೋಟ ಗ್ರಾಮದ ಸೀಮಾಂತರವನ್ನು ಅಕ್ರಮವಾಗಿ ಪ್ರವೇಶಿಸಿ ಅನಧಿಕೃತವಾಗಿ ಗಣಿಗಾರಿಕೆ ನಡೆಸಲಾಗುತ್ತಿತ್ತು ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಗೋಪಿಕೃಷ್ಣ ತಿಳಿಸಿದ್ದಾರೆ.
ದೇವದುರ್ಗ ತಾಲ್ಲೂಕಿನ ತಿಂಥಣಿ ಬ್ರಿಜ್ನಿಂದ ಗಬ್ಬೂರು ಸಮೀಪದ ಹನುಮಪುರದವರೆಗೆ ಸುಮಾರು 77 ಕಿ.ಮೀ ಕೃಷ್ಣಾ ನದಿ ಪಾತ್ರದ ವ್ಯಾಪ್ತಿಯಲ್ಲಿ ಹಲವು ದಿನಗಳಿಂದ ಮರಳು ದಂಧೆ ಸ್ಥಗಿತಗೊಂಡಿದೆ. ಆದರೆ, ಪಕ್ಕದ ಸುರಪುರ, ಶಹಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮಗಳಲ್ಲಿ ಮರಳು ದಂಧೆ ನಡೆಯುತ್ತಿದೆ. ಅದು ದೇವದುರ್ಗ ತಾಲ್ಲೂಕಿಗೂ ವಿಸ್ತರಿಸಿಕೊಳ್ಳುತ್ತಿದೆ. ಈ ರೀತಿಯ ದಂಧೆ ಕಂಡುಬಂದರೆ ಗ್ರಾಮಸ್ಥರು ತಕ್ಷಣ ಮಾಹಿತಿ ನೀಡಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಹಿಟಾಚಿ ಯಂತ್ರಗಳ ಮಾಲೀಕರ ಮೇಲೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.