ADVERTISEMENT

ಒಳಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ ಆಗ್ರಹ: ಮಾದಿಗ ಪದವೀಧರ ವೇದಿಕೆಯಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 6:00 IST
Last Updated 3 ಮಾರ್ಚ್ 2026, 6:00 IST
ರಾಜ್ಯದಲ್ಲಿ ಒಳ ಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ರಾಯಚೂರಿನಲ್ಲಿ ರಾಜ್ಯ ಮಾದಿಗ ಪದವೀಧರ ವೇದಿಕೆ ನೇತೃತ್ವದಲ್ಲಿ ಸೋಮವಾರ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು
ರಾಜ್ಯದಲ್ಲಿ ಒಳ ಮೀಸಲಾತಿ ಸಮರ್ಪಕ ಅನುಷ್ಠಾನಕ್ಕೆ ಒತ್ತಾಯಿಸಿ ರಾಯಚೂರಿನಲ್ಲಿ ರಾಜ್ಯ ಮಾದಿಗ ಪದವೀಧರ ವೇದಿಕೆ ನೇತೃತ್ವದಲ್ಲಿ ಸೋಮವಾರ ಮಾದಿಗ ಸಮುದಾಯದವರು ಪ್ರತಿಭಟನೆ ನಡೆಸಿದರು   

ರಾಯಚೂರು: ಒಳ ಮೀಸಲಾತಿಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿ ರಾಜ್ಯ ಮಾದಿಗ ಪದವೀಧರ ವೇದಿಕೆಯ ನೇತೃತ್ವದಲ್ಲಿ ಸಮುದಾಯದವರು ನಗರದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಬಾಬು ಜಗಜೀವನರಾಂ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿ ಘೋಷಣೆಗಳನ್ನು ಕೂಗುತ್ತ ಡಾ.ಬಿ.ಆರ್.ಅಂಬೇಡ್ಕರ್‌ ವೃತ್ತಕ್ಕೆ ಆಗಮಿಸಿ ಕೆಲ ಹೊತ್ತು ಧರಣಿ ನಡೆಸಿದರು. ನಂತರ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ಕೆ.ಎಚ್‌.ಮುನಿಯಪ್ಪ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

‘ಭಾರತದ ಹಲವಾರು ರಾಜ್ಯಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಸಂವಿಧಾನಬದ್ಧವಾಗಿ ಮಿಸಲಾತಿ ಪ್ರಮಾಣ ಹೆಚ್ಚಿಸಿ ಅನುಷ್ಠಾನ ಗೊಳಿಸಲಾಗುತ್ತಿದೆ. ಆದರೆ, ಕರ್ನಾಟಕದಲ್ಲಿ ಮಾತ್ರ ದಶಕಗಳಿಂದ ಜನಸಂಖ್ಯೆಗೆ ಅನುಗುಣವಾಗಿ ನ್ಯಾಯದ ಪಾಲು ನೀಡದೆ ಮೋಸ ಮಾಡಲಾಗಿದೆ’ ಎಂದು ಆರೋಪಿಸಿದರು.

ADVERTISEMENT

‘ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಾಯ್ದೆ ರೂಪಿಸಿ ರಾಜ್ಯಪಾಲರಿಂದ ಅಂಕಿತ ಪಡೆದಿದೆ. ಮಾದಿಗ ಸಮುದಾಯದ 35 ವರ್ಷಗಳ ಹೋರಾಟಕ್ಕೆ ದೊರೆತ ಐತಿಹಾಸಿಕ ನ್ಯಾಯವಾಗಿದೆ’ ಎಂದು ಹೇಳಿದರು.

‘ಎಸ್‌ಸಿ, ಎಸ್‌ಟಿ ಸಮುದಾಯಗಳ ಮತ್ತು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ ಹೊರಡಿಸಿರುವ ಸರ್ಕಾರದ ಆದೇಶವನ್ನು ತಕ್ಷಣ ಹಿಂಪಡೆಯಬೇಕು’ ಎಂದು ಒತ್ತಾಯಿಸಿದರು.

‘ಎಸ್‌ಸಿ, ಎಸ್‌ಟಿ ಸಮುದಾಯದ ಹಿತ ಕಾಪಾಡಲು ಅಸಮರ್ಥರಾದ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಅವರ ರಾಜೀನಾಮೆ ಪಡೆಯಬೇಕು’ ಎಂದು ಕೆಪಿಸಿಸಿ ಅಧ್ಯಕ್ಷರನ್ನು ಒತ್ತಾಯಿಸಿದರು.

‘ಸರ್ಕಾರ ತಕ್ಷಣ ಸಚಿವ ಸಂಪುಟದ ವಿಶೇಷ ಸಭೆ ಕರೆದು ಒಳಮಿಸಲಾತಿ ಬೇಡುತ್ತಿರುವ ಮಾದಿಗ ಸಂಬಂಧಿ ಜಾತಿಗಳಿಗೆ ಸುಪ್ರೀಂ ಕೋರ್ಟ್ ತೀರ್ಪಿನ ಆಧಾರದ ಮೇಲೆ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯ ಅಥವಾ ನ್ಯಾಯಮೂರ್ತಿ ನಾಗಮೋಹನ ದಾಸ್ ಆಯೋಗದ ಶಿಫಾರಸಿನ ಅನ್ವಯ ಮೀಸಲಾತಿ ಒದಗಿಸಬೇಕು’ ಎಂದು ಆಗ್ರಹಿಸಿದರು.

‘ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಎಲ್ಲ ಕ್ಷೇತ್ರಗಳಲ್ಲಿ ಒಳ ಮೀಸಲಾತಿ ಅನುಷ್ಠಾನಗೊಳಿಸಬೇಕು. ಶಿಕ್ಷಣ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿಯ ಮಕ್ಕಳಿಗೆ ವರ್ಗೀಕರಣದ ಅನುಪಾತದಲ್ಲಿ ಒಳ ಮೀಸಲಾತಿ ಸೌಲಭ್ಯ ನೀಡಬೇಕು’ ಎಂದು ಮನವಿ ಮಾಡಿದರು.

‘ಸಂವಿಧಾನದ ಅನುಚ್ಛೇದ 16(4) ರಂತೆ ಉದ್ಯೋಗ ಮೀಸಲಾತಿ ಎಂದರೆ ನೇರ ನೇಮಕಾತಿ, ಬಡ್ತಿ, ನೇಮಕಾತಿ ಮತ್ತು ಮುಂಬಡ್ತಿ, ಬ್ಯಾಕ್‍ಲಾಗ್ ನೇಮಕಾತಿಗಳನ್ನು ಒಳಗೊಂಡಿದೆ. ಆದ್ದರಿಂದ ಎಲ್ಲ ಬಗೆಯ ನೇಮಕಾತಿಗಳನ್ನು ಆದಷ್ಟು ಬೇಗ ಮಾಡಬೇಕು’ ಎಂದು ಒತ್ತಾಯಿಸಿದರು.

‘ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯಗಳಲ್ಲಿ ಈಗ ಚಾಲ್ತಿಯಲ್ಲಿರುವ ಪದ್ಧತಿಯನ್ನೇ ಮುಂದುವರಿಸಿಕೊಂಡು ಹೋಗಬೇಕು. 2001ರಿಂದ ಭರ್ತಿ ಆಗದೆ ಉಳಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗಾಗಿ ವಿಶೇಷ ನಿಯಮ ಇಲ್ಲದ ಕಾರಣ ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ದಲಿತರಿಗೆ ಅನ್ಯಾಯವಾಗಿದೆ. ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಗೆ ವಿಶೇಷ ನಿಯಮ ರೂಪಿಸಬೇಕು’ ಎಂದು ಮನವಿ ಮಾಡಿದರು.

‘ದಲಿತರ ಹಕ್ಕೊತ್ತಾಯಕ್ಕೆ ಸರ್ಕಾರ ತಕ್ಷಣ ಸ್ಪಂದಿಸದಿದ್ದಲ್ಲಿ, ಮಾದಿಗ ಸಮುದಾಯವು ಸಾಮಾಜಿಕ ನ್ಯಾಯಕ್ಕಾಗಿ ರಾಜ್ಯದಾದ್ಯಂತ ರಸ್ತೆಗಿಳಿದು ಪ್ರತಿಭಟನೆ ನಡೆಸಲಿದೆ’ ಎಂದು ಎಚ್ಚರಿಸಿದರು.

ರಾಜ್ಯ ಮಾದಿಗ ಪದವೀಧರ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಶರಣು ತುಗ್ಗಲದಿನ್ನಿ, ರಾಜು ಮನಸಲಾಪುರ, ರವಿಕುಮಾರ ಗೋನಾಳ, ಮಲ್ಲಿಕಾರ್ಜುನ ಶಾಖವಾದಿ, ಗೋವಿಂದ ಬಾಪೂರ, ಸುರೇಶ ಬೋರಡ್ಡಿ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.