
ವಿಧಾನಸೌಧ
ರಾಯಚೂರು: ‘ನೀರಾವರಿ ಸೌಲಭ್ಯ ಒದಗಿಸಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 6ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ತೀರ್ಮಾನಿಸಲಾಗಿದ್ದು, ಜಿಲ್ಲೆಯಿಂದ 300 ಜನ ರೈತರು ಭಾಗವಹಿಸುವರು’ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ನರಸಿಂಹ ನಾಯಕ ಕಮಲಾಪುರು ಹೇಳಿದರು.
‘ರಾಜಲಬಂಡಾ ಅಣೆಕಟ್ಟೆಯಿಂದ ತುಂಗಭದ್ರಾ ಕಾಲುವೆಯ ಕೊನೆಯ ಭಾಗದ ರೈತರಿಗೆ ನೀರೊದಗಿಸ ಲು ಏತ ನೀರಾವರಿ ಯೋಜನೆ ಮಂಜೂರು ಮಾಡಬೇಕು. ಡಿ.ರಾಂಪೂರು ಗ್ರಾಮದಿಂದ ವಡ್ಡೆಪಲ್ಲಿ ಗ್ರಾಮದ ಜಮೀನುಗಳಿಗೆ ನೀರೊದಗಿಸಲು ಏತನೀರಾವರಿ ಯೋಜನೆಯನ್ನು ಮಂಜೂರು ಮಾಡಬೇಕು’ ಎಂದು ಸೋಮವಾರ ಮಾಧ್ಯಮ ಗೋಷ್ಠಿಯಲ್ಲಿ ಒತ್ತಾಯಿಸಿದರು.
‘ಜಿಲ್ಲೆಯಲ್ಲಿ ರೈತರ ಜಮೀನು ಅಕ್ರಮ ವರ್ಗಾವಣೆ ಮಾಡುವವರ ಮೇಲೆ ಕ್ರಮ ಜರುಗಿಸಬೇಕು. ಯರಮರಸ್ ಸರ್ಕಾರಿ ನೂಲಿನ ಗಿರಿಣಿಯನ್ನು ಅಭಿವೃದ್ಧಿ ಪಡಿಸಬೇಕು’ ಎಂದು ಆಗ್ರಹಿಸಿದರು.
‘ಹತ್ತಿ ಮತ್ತು ಮೆಣಸಿನಕಾಯಿ ಬೆಳೆಗಳ ಅಭಿವೃದ್ಧಿ ಮಂಡಳಿಗಳನ್ನು ಸ್ಥಾಪಿಸಬೇಕು. ಬೇಸಿಗೆ ಬೆಳೆಗೆ ನೀರು ಬಿಡದ ಕಾರಣ ರೈತರು ಮತ್ತು ಕೂಲಿಕಾರರಿಗೆ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಒದಗಿಸಬೇಕು’ ಎಂದು ಒತ್ತಾಯಿಸಿದರು.
‘ಜಿಲ್ಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ಶಿಕ್ಷಣ ಕುಂಠಿತಗೊಂಡಿದೆ. 10,000 ಶಿಕ್ಷಕರ ನೇಮಕಾತಿ ಮಾಡಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ 2025-26ನೇ ಸಾಲಿನಲ್ಲಿ ಯೋಜನೆಯಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಒಂದು ಎಕರೆಗೆ ₹1 ಲಕ್ಷ ಸಾಲ ಮಂಜೂರು ಮಾಡಬೇಕು. ಗ್ರಾಮ ಪಂಚಾಯಿತಿ ಚುನಾವಣೆಯನ್ನು ತಕ್ಷಣ ಮಾಡಬೇಕು’ ಎಂದು ಆಗ್ರಹಿಸಿದರು.
ಮಲ್ಲನಗೌಡ, ಧರ್ಮರೆಡ್ಡಿ, ಶಿವಶರಣ ಸಾಹುಕಾರ, ನರಸಿಂಹ ರೆಡ್ಡಿ ಗಾಜರಾಳ, ಗೋವಿಂದ ನಾಯಕ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.