ರಾಯಚೂರು:2020-21ನೇ ಸಾಲಿನ ವೃತ್ತಿಪರ ಕೋರ್ಸಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಗಳು ಇದೇ ಜುಲೈ 30 ಮತ್ತು 31ರಂದು ಜಿಲ್ಲೆಯ 14 ಕೇಂದ್ರಗಳಲ್ಲಿ ನಡೆಯಲಿದ್ದು, ಆ ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆಯಲು ಅಗತ್ಯವಿರುವ ಸಕಲ ಏರ್ಪಾಡುಗಳನ್ನು ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ ಅವರು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಸಿಇಟಿ ಪರೀಕ್ಷೆ ಕುರಿತು ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮೊದಲು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಬೇಕು. ನಂತರವೇ ಪರೀಕ್ಷಾ ಕೊಠಡಿಗೆ ಅವರನ್ನು ಬಿಡಬೇಕು. ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸ್ಯಾನಿಟೈಜರ್ ನೀಡಬೇಕು ಮತ್ತು ಪರಸ್ಪರ ಮೂರು ಅಡಿಗಳ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಕೇಂದ್ರದಲ್ಲಿ ಶೌಚಾಲಯ ಸ್ವಚ್ಛವಿರಬೇಕು, ಕಾಯಿಸಿದ ನೀರನ್ನು ಬಾಟಲಿಯಲ್ಲಿ ತರಬೇಕು, ಪರೀಕ್ಷಾ ಕೇಂದ್ರದೊಳಗೆ ಕೈ ಗಡಿಯಾರ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಕೊಠಡಿಯ ಗೋಡೆ ಮೇಲೆ ಗಡಿಯಾರ ಹಾಕಬೇಕು.ಪ್ರತಿ ಕೊಠಡಿಯಲ್ಲಿ 24 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಿಠೋಪಕರಣ ವ್ಯವಸ್ಥೆ ಮಾಡಿಕೊಳ್ಳಬೇಕು. ಅದಕ್ಕೂ ಮುನ್ನ ಪರೀಕ್ಷಾ ಕೇಂದ್ರಗಳಿಗೆ ಸೋಂಕು ನಿವಾರಕ ದ್ರಾವಣವನ್ನು ಸಿಂಪಡಿಸಬೇಕು ಎಂದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಮಾತನಾಡಿ, ಕೋವಿಡ್ ಸಂದರ್ಭದಲ್ಲಿ ಸಿಇಟಿ ಕೋರ್ಸ್ಗಳ ಪ್ರವೇಶಾತಿ ಪರೀಕ್ಷೆಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಪೊಲೀಸ್ ಇಲಾಖೆಯಿಂದ ಸಂಪೂರ್ಣ ಭದ್ರತೆ ಹಾಗೂ ಸಹಕಾರ ನೀಡಲಾಗುವುದು ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸದಾಶಿವಪ್ಪ, ತಹಶೀಲ್ದಾರ್ ಮಂಜುನಾಥ, ವಿವಿಧ ಕಾಲೇಜಿನ ಪ್ರಾಚಾರ್ಯರ ಪ್ರಕಾಶ ಕುಲಕರ್ಣಿ, ಗೋಪಾಲ ನಾಯಕ, ಬಸಪ್ಪ ಗದ್ದಿ, ಡಾ.ಶಿವರಾಜ, ಶಂಕರಗೌಡ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.