ಮಾನ್ವಿ: ತಾಲ್ಲೂಕಿನ ಚೀಕಲಪರ್ವಿ ಸಮೀಪದ ತುಂಗಭದ್ರಾ ನದಿ ದಡದಲ್ಲಿರುವ ಆಂಧ್ರಪ್ರದೇಶದ ನದಿಚಾಗಿ ಗ್ರಾಮದಲ್ಲಿ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆ ಆರಂಭವಾಗಿ ಶತಮಾನ ಪೂರೈಸಿದ್ದರೆ, ಕನ್ನಡ ಮಾಧ್ಯಮ ಉನ್ನತ ಪ್ರೌಢಶಾಲೆ ಐವತ್ತು ವರ್ಷಗಳನ್ನು ಪೂರೈಸಿರುವುದು ಅಲ್ಲಿನ ಜನರಿಗೆ ಕನ್ನಡ ನಾಡು, ನುಡಿಯ ಬಗ್ಗೆ ಇರುವ ಅಭಿಮಾನಕ್ಕೆ ಸಾಕ್ಷಿಯಾಗಿದೆ.
ರಾಜ್ಯದಲ್ಲಿ ಅನೇಕ ಕಡೆ ವಿದ್ಯಾರ್ಥಿಗಳ ಕೊರತೆಯಿಂದ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತ ತಲುಪಿದ್ದರೆ, ಆಂಧ್ರ ಪ್ರದೇಶದ ಗಡಿಭಾಗದ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯುವ ಮೂಲಕ ಕನ್ನಡ ಭಾಷಾ ಪ್ರೇಮ ಮೆರೆಯುತ್ತಿದ್ದಾರೆ.
1913ರಲ್ಲಿ ಬ್ರಿಟಿಷ್ ಅಧಿಕಾರಿಗಳು ಬಳ್ಳಾರಿ ಶಿಕ್ಷಣಾಧಿಕಾರಿಗಳಿಂದ ಮಂಜೂರು ಮಾಡಿಸಿದ್ದ ನದಿಚಾಗಿಯ ಕನ್ನಡ ಮಾಧ್ಯಮ ಪ್ರಾಥಮಿಕ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1 ರಿಂದ 5ನೇ ತರಗತಿವರೆಗೆ 227 ವಿದ್ಯಾರ್ಥಿಗಳು ದಾಖಲಾತಿ ಪಡೆದಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ಗುರುರಾಜ ಶೆಟ್ಟಿ ತಿಳಿಸಿದರು.
ಐವತ್ತು ವರ್ಷಗಳನ್ನು ಪೂರೈಸಿರುವ ನದಿಚಾಗಿಯ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ 6 ರಿಂದ 10ನೇ ತರಗತಿವರೆಗೆ 263 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ ಎಂದು ಶಾಲೆಯ ಮುಖ್ಯಶಿಕ್ಷಕ ಎಸ್.ಲಕ್ಷ್ಮಿ ನಾರಾಯಣ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.