ADVERTISEMENT

ಕಾರ್ಗಿಲ್ ವಿಜಯೋತ್ಸವ: ‘ಹುತಾತ್ಮ ಯೋಧರ ಸ್ಮರಣೆ ಪ್ರತಿಯೊಬ್ಬರ ಕರ್ತವ್ಯ’

ಸಂಸದ ಕುಮಾರ ನಾಯಕ ಅಭಿಮತ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 4:39 IST
Last Updated 27 ಜುಲೈ 2025, 4:39 IST
ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವದ 26ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಂಸದ ಜಿ.ಕುಮಾರ ನಾಯಕ ಎನ್‌ಸಿಸಿ ಮತ್ತು ಎನ್ಎಸ್ಎಸ್ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು
ರಾಯಚೂರಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ನಡೆದ ಕಾರ್ಗಿಲ್ ವಿಜಯೋತ್ಸವದ 26ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಸಂಸದ ಜಿ.ಕುಮಾರ ನಾಯಕ ಎನ್‌ಸಿಸಿ ಮತ್ತು ಎನ್ಎಸ್ಎಸ್ ವಿದ್ಯಾರ್ಥಿಗಳೊಂದಿಗೆ ಪಾಲ್ಗೊಂಡಿದ್ದರು   

ರಾಯಚೂರು: ‘ಸ್ವಾತಂತ್ರ್ಯ ನಂತರ ದೇಶ ಕಂಡ ಐದು ಯುದ್ದಗಳಲ್ಲಿ ಕಾರ್ಗಿಲ್ ಯುದ್ದ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಈ ಯುದ್ಧದಲ್ಲಿ ಅನೇಕ ಸೈನಿಕರು ಪ್ರಾಣ ತ್ಯಾಗ ಮಾಡಿದ್ದಾರೆ. ಯೋಧರ ತ್ಯಾಗವನ್ನು ಸ್ಮರಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ’  ಎಂದು ಸಂಸದ ಜಿ.ಕುಮಾರ ನಾಯಕ ಹೇಳಿದರು.

ಇಲ್ಲಿನ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಹಾಗೂ ಎನ್.ಎಸ್.ಬೋಸರಾಜು ಫೌಂಡೇಶನ್‌ನ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯೋತ್ಸವದ 26ನೇ ವರ್ಷಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಪ್ರತಿ ವರ್ಷ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವ ಆಚರಣೆ ಮಾಡುತ್ತೇವೆ. ಈ ವಿಜಯೋತ್ಸವದ ಹಿಂದೆ ಅನೇಕ ಭಾರತೀಯರ ತ್ಯಾಗ–ಬಲಿದಾನವಿದೆ. ದೇಶ ಸೇವೆಗೆ ತಮ್ಮ ಪ್ರಾಣವನ್ನು ಮುಡಿಪಾಗಿಟ್ಟ ಯೋಧರಿಗೆ ಗೌರವಿಸಬೇಕಾಗಿರುವುದು ನಮ್ಮೆಲ್ಲರ ಹೊಣೆಯಾಗಿದೆ’ ಎಂದು ತಿಳಿಸಿದರು.

ಕಾಂಗ್ರೆಸ್ ಮುಖಂಡ ರವಿ ಬೋಸರಾಜು ಮಾತನಾಡಿದರು.

ರಾಜಶೇಖರ ನಾಯಕ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಾರೆಡ್ಡಿ, ಮಾಜಿ ಸೈನಿಕ ಗೋಪಾಲ ನಾಯಕ, ಎನ್‌ಸಿಸಿ, ಎನ್ಎಸ್ಎಸ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಬೈಕ್‌ ರ‍್ಯಾಲಿ ನಡೆಯಿತು. ಎಲ್‌ವಿಡಿ ಕಾಲೇಜ್‌ನಿಂದ ಆರಂಭವಾದ ಬೈಕ್ ರ್‍ಯಾಲಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಟಿಪ್ಪು ಸುಲ್ತಾನ್ ಉದ್ಯಾನಕ್ಕೆ ಬಂದು ತಲುಪಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.