ಮಾನ್ವಿ: ತುಂಗಭದ್ರಾ ಜಲಾಶಯದಿಂದ ಮಂಗಳವಾರ 1.30ಲಕ್ಷ ಕ್ಯುಸೆಕ್ ನೀರು ನದಿಗೆ ಹರಿಬಿಟ್ಟಿರುವ ಕಾರಣ ತಾಲ್ಲೂಕಿನ ನದಿಪಾತ್ರದ ಗ್ರಾಮಗಳಲ್ಲಿ ಪ್ರವಾಹ ಭೀತಿ ಉಂಟಾಗಿದೆ.
ಚೀಕಲಪರ್ವಿ ಗ್ರಾಮದಲ್ಲಿ ನದಿ ದಡದಲ್ಲಿರುವ ವಿಜಯದಾಸರ ಕಟ್ಟೆಯವರೆಗೆ ನೀರು ತಲುಪಿದೆ. ಸಂಭವನೀಯ ಪ್ರವಾಹ ಪರಿಸ್ಥಿತಿ ಎದುರಿಸಲು ತಾಲ್ಲೂಕು ಆಡಳಿತ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ತಹಶೀಲ್ದಾರ್ ಸಂತೋಷರಾಣಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ನದಿಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮಸ್ಥರಿಗೆ ಸೂಚನೆ ನೀಡಿ, ನದಿದಂಡೆಯ ಸ್ಥಳಕ್ಕೆ ತೆರಳದಂತೆ ಗ್ರಾಮಸ್ಥರಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ತಾಲ್ಲೂಕಿನ ದೇವಿಪುರ ಯಡಿವಾಳ, ಜಾಗೀರಪನ್ನೂರು, ಚೀಕಲಪರ್ವಿ, ದದ್ದಲ, ಉಮಳಿಪನ್ನೂರು, ಜೂಕೂರು ಗ್ರಾಮಗಳು ನದಿಪಾತ್ರದಲ್ಲಿದ್ದು ಗ್ರಾಮಸ್ಥರು ಪ್ರವಾಹ ಪರಿಸ್ಥಿತಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
2009ರಲ್ಲಿ ಭೀಕರ ನೆರೆಹಾವಳಿ ಸಂಭವಿಸಿದ್ದಾಗ ನದಿಪಾತ್ರದ ಗ್ರಾಮಗಳ ಶಾಶ್ವತ ಸ್ಥಳಾಂತರಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿತ್ತು. ಖರಾಬದಿನ್ನಿ, ದೇವಿಪುರ, ಯಡಿವಾಳ, ಚೀಕಲಪರ್ವಿ, ಕಾತರಕಿ, ದದ್ದಲ, ಉಮಳಿಪನ್ನೂರು, ಜೂಕೂರು ಗ್ರಾಮಗಳ ಹೊರವಲಯದ ಜಮೀನುಗಳಲ್ಲಿ ಖಾಸಗಿ ಸಂಘ ಸಂಶ್ಥೆಗಳ ಸಹಭಾಗಿತ್ವದಲ್ಲಿ ಸುಸಜ್ಜಿತ ಆಸರೆ ಮನೆಗಳನ್ನು ನಿರ್ಮಿಸಲಾಗಿತ್ತು. ಆದರೆ ದೇವಿಪುರ, ಚೀಕಲಪರ್ವಿ ಹಾಗೂ ಜೂಕೂರು ಗ್ರಾಮಗಳಲ್ಲಿ ದಶಕ ಕಳೆದರೂ ಆಸರೆ ಮನೆಗಳು ಗ್ರಾಮಸ್ಥರಿಗೆ ಹಂಚಿಕೆಯಾಗಿಲ್ಲ. ಈ ಕುರಿತು ಹಲವು ಬಾರಿ ತಾಲ್ಲೂಕು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ನಿರಾಸಕ್ತಿವಹಿಸಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.