ADVERTISEMENT

ರಾಯಚೂರು: ತಹಶೀಲ್ದಾರ್‌ ಹತ್ಯೆ ಖಂಡಿಸಿ ಮೌನ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಜುಲೈ 2020, 11:29 IST
Last Updated 10 ಜುಲೈ 2020, 11:29 IST
ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ‌ ಮೌನ ಪ್ರತಿಭಟನೆ ನಡೆಸಿದರು
ಬಂಗಾರಪೇಟೆ ತಹಶೀಲ್ದಾರ್‌ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ರಾಯಚೂರಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ  ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ‌ ಮೌನ ಪ್ರತಿಭಟನೆ ನಡೆಸಿದರು   

ರಾಯಚೂರು: ಬಂಗಾರಪೇಟೆ ತಹಶೀಲ್ದಾರ್ ಬಿ.ಕೆ.ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾಗೂ ಕರ್ನಾಟಕ ರಾಜ್ಯ ಹಾಗೂ ಗ್ರಾಮ ಲೆಕ್ಕಧಿಕಾರಿಗಳ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತ್ಯೇಕವಾಗಿ ಜಿಲ್ಲಾಧಿಕಾರಿ ಕಚೇರಿ ಎದುರು ಕೈಗೆ ಕಪ್ಪು ಪಟ್ಟಿ ಧರಿಸಿ ಶುಕ್ರವಾರ‌ ಮೌನ ಪ್ರತಿಭಟನೆ ನಡೆಸಿದರು.

ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಜಮೀನಿನ ವ್ಯಾಜ್ಯ ಪರಿಶೀಲಿಸುವಾಗ ವೆಂಕಟಪತಿ ಅವರು ಪೊಲೀಸರ ಸಮ್ಮುಖದಲ್ಲಿ ಏಕಾಏಕಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದು ಘೋರ ಅಪರಾಧವಾಗಿದೆ ಎಂದು ಖಂಡಿಸಿದರು.

ಅಕ್ರಮ ಮರಳು ಸಾಗಣೆ ತಡೆಯುವ ಕರ್ತವ್ಯದಲ್ಲಿದ್ದ ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಗ್ರಾಮಲೆಕ್ಕಾಧಿಕಾರಿ ಸಾಹೆಬ್ ಪಟೇಲ್ ಅವರ ಮೇಲೆ ಲಾರಿ ಹತ್ತಿಸಿ ಕೊಲೆ ಮಾಡಲಾಗಿತ್ತು. ಸರ್ಕಾರಿ ಅಧಿಕಾರಿಗಳು, ನೌಕರರು ಕರ್ತವ್ಯ ನಿರ್ವಹಿಸುವ ಸಮಯದಲ್ಲಿಯೇ ಘಟನೆ ನಡೆಯುತ್ತಿದ್ದು ರಕ್ಷಣೆ ಇಲ್ಲದಂತಾಗಿದೆ. ಇಂತಹ ಅಪರಾಧಗಳು ರಾಜ್ಯದಾದ್ಯಂತ ಹೆಚ್ಚಾಗುತ್ತಿದ್ದು, ಭಯದ ವಾತಾವರಣ ನಿರ್ಮಾಣವಾಗಿದೆ ಎಂದು ದೂರಿದರು.

ADVERTISEMENT

ಕೂಡಲೇ ಮೃತರ ಕುಟುಂಬಕ್ಕೆ ₹ 1 ಕೋಟಿ‌ ಪರಿಹಾರ ನೀಡಿ ಅನುಕಂಪದ ಆಧಾರದಲ್ಲಿ ಕುಟುಂಬ ಸದಸ್ಯರಿಗೆ ನೇಮಕಾತಿ ನೀಡಬೇಕು. ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಇಂತಹ ಘಟನೆ ಮರುಕಳಿಸದಂತೆ ಕಠಿಣ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಹೆಬೂಬ್ ಪಾಷಾ ಮೂಲಿಮನಿ, ಗ್ರಾಮ ಲೆಕ್ಕಾಧಿಕಾರಿಗಳ ಸಂಘದ ಜಿಲ್ಲಾಧ್ಯಕ್ಷ ಸುರೇಶ ಪದಾಧಿಕಾರಿಗಳಾದ ಹನುಮೇಶ ಹೂಗಾರ, ಸುರೇಂದ್ರ ಕುಮಾರ್ ಪಾಟೀಲ್, ಮಂಜೂರ್ ಉಲ್ ಹಸನ್, ವಿಜಯೇಂದ್ರ, ರಾಮು, ಮಲ್ಲೇಶ ರಾಂಪೂರು, ಜಾವೀದ್, ಆಲಂ ಪಾಷಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.