
ಕವಿತಾಳ: ‘ಸಾಮೂಹಿಕ ವಿವಾಹಗಳಿಂದ ಬಡವರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗುತ್ತಿದೆ’ ಎಂದು ಶಾಸಕ ಆರ್.ಬಸನಗೌಡ ತುರ್ವಿಹಾಳ ಹೇಳಿದರು.
ಸಮೀಪದ ತುಪ್ಪದೂರು ಗ್ರಾಮದಲ್ಲಿ ಚನ್ನಯ್ಯತಾತನವರ 33ನೇ ಜಾತ್ರಾ ಮಹೋತ್ಸವದ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿ, ‘ಪುಣ್ಯ ಕ್ಷೇತ್ರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಧು–ವರರು ಪರಸ್ಪರ ಹೊಂದಾಣಿಕೆಯಿಂದ ಜೀವನ ನಡೆಸಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು’ ಎಂದರು.
ಬೀರಲಿಂಗೇಶ್ವರ ತಾತನವರು ಮಾತನಾಡಿ, ‘ಸಾಮೂಹಿಕ ವಿವಾಹ ಸಮಾರಂಭ ಏರ್ಪಡಿಸಲು ವಿವಿಧ ಇಲಾಖೆಗಳಿಂದ ಅನುಮತಿ ಪಡೆಯುವಲ್ಲಿ ಸಮಸ್ಯೆಯಾಗುತ್ತಿದೆ. 33 ವರ್ಷಗಳಿಂದ ನಡೆದುಕೊಂಡ ಬಂದ ಸಂಪ್ರದಾಯ ಮುಂದುವರಿಸುವ ನಿಟ್ಟಿನಲ್ಲಿ ಮಠದ ಆಸಕ್ತಿಗೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.
6 ಜೋಡಿಗಳು ಹೊಸ ದಾಂಪತ್ಯ ಜೀವನಕ್ಕೆ ಕಾಲಿರಿಸಿದವು. ಚನ್ನಯ್ಯ ತಾತನವರ ಕತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ, ಮಹಾಮಂಗಳಾರತಿ ಸೇರಿದಂತೆ ವಿವಿಧ ಪೂಜೆ ನೆರವೇರಿಸಲಾಯಿತು. ಮಲ್ಲಿಕಾರ್ಜುನಯ್ಯ ತಾತ, ವೆಂಕಯ್ಯ ಸ್ವಾಮಿ ಅಮರಾವತಿ ಅವರು ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.
ಶಿವಾನಂದ ಈಶ್ವರ ಶಾಸ್ತ್ರೀ, ಮುಖಂಡರಾದ ಮಲ್ಲಿಕಾರ್ಜುನ ಪಾಟೀಲ ಯದ್ದಲದಿನ್ನಿ, ಪ್ರಸನ್ನ ಪಾಟೀಲ, ಸಂತೋಷ ರಾಜಗುರು, ತ್ರಿಲೋಕರಡ್ಡಿ, ಭೀಮೇಶ ನಾಯಕ, ಚನ್ನಬಸವ ಕಡ್ಡೋಣಿ, ಲಕ್ಷ್ಮಣ ನಾಯಕ, ಮೇಲ್ವಿಚಾರಕಿ ಮಹಾಂತಮ್ಮ ಮತ್ತು ನಿಂಗಮ್ಮ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.