ರಾಯಚೂರು: ಎಸ್ಸಿ, ಎಸ್ಟಿ ಅಟ್ರಾಸಿಟಿ ಕಾಯ್ದೆ ದುರ್ಬಲಗೊಳಿಸುವ ಸುಪ್ರೀಂಕೋರ್ಟ್ ಆದೇಶದ ವಿರುದ್ಧ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಹೊರಡಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಡಿಸೆಂಬರ್ 14 ರಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬೆಳಗಾವಿಯಲ್ಲಿ ಒಂದು ಲಕ್ಷ ಜನರ ಸಮಾವೇಶ ನಡೆಸಲಾಗುವುದು ಎಂದು ಸಮಿತಿಯ ಜಿಲ್ಲಾ ಸಂಚಾಲಕ ಹಣಮಂತಪ್ಪ ಕಾಕರಗಲ್ ಹೇಳಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನೌಕರರ ಮುಂಬಡ್ತಿ ಕಾಯ್ದೆಗಳ ವಿರುದ್ಧ ಸುಪ್ರೀಂಕೋರ್ಟ್ ನೀಡಿದ ಆದೇಶ ನೀಡಿದೆ. ದಲಿತರಿಗೆ ನ್ಯಾಯ ಕೊಡಿಸಬೇಕೆನ್ನುವ ಮಹದಾಸೆಯಿಂದ ಡಾ.ಬಿ.ಆರ್. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಮೂಲ ಅಶಯವನ್ನು ಸಂವಿಧಾನದಲ್ಲಿ ಅಳವಡಿಸಲು ಸಫಲರಾದರು. ಆದರೆ ಸಂವಿಧಾನದ ಆಶಯ ರಕ್ಷಿಸಬೇಕಿದ್ದ ಸುಪ್ರೀಂಕೋರ್ಟ್ ವ್ಯತಿರೀಕ್ತ ತೀರ್ಪು ನೀಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಭೂ ಮಂಜೂರಾತಿ ಕಾಯ್ದೆಯ ಪ್ರಕಾರ ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಶೇ 50 ರಷ್ಟು ಭೂಮಿ ಹಂಚಿಕೆ ಮಾಡಬೇಕು. ಬಗರ್ ಹುಕುಂ ಸಕ್ರಮೀಕರಣದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಅರ್ಜಿಗಳ ವಜಾಗೊಂಡಿರುವ ಮರು ಪರಿಶೀಲನೆ ಮಾಡಬೇಕು ಎಂದು ಒತ್ತಾಯಿಸಿದರು.
ಚಿತ್ರದುರ್ಗದ ಮುರಘಾರಾಜೇಂದ್ರ ಸ್ವಾಮಿಗಳು ಸಮಾವೇಶದ ಸಾನಿಧ್ಯ ವಹಿಸುವರು. ಶಾಸಕ ಸತೀಶ ಜಾರಕಿಹೊಳಿ ಉದ್ಘಾಟನೆ ಮಾಡುವರು. ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ ಖರ್ಗೆ, ಆರ್.ಬಿ ತಿಮ್ಮಾಪುರ ಹಾಗೂ ಸಮಾಜಿಕ ನ್ಯಾಯದ ಪರವಾಗಿರುವ ನಾಯಕರು, ಪ್ರಗತಿಪರ ಚಿಂತರು ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ತಿಳಿಸಿದರು.
ರಾಯಚೂರು ಜಿಲ್ಲೆಯಿಂದ ಎರಡು ಸಾವಿರ ಜನರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ 100 ವಾಹನಗಳ ವ್ಯವಸ್ಥೆಯಾಗಿದೆ ಎಂದು ಹೇಳಿದರು.
ಸಮಿತಿಯ ಪದಾಧಿಕಾರಿಗಳಾದ ಚಿನ್ನಪ್ಪ ಪಟ್ಟದಕಲ್, ದಲಿತ ನೌಕರರ ಒಕ್ಕೂಟದ ಮುಖಂಡ ಹನುಮಂತಪ್ಪ ಮಲ್ಕಾಪುರ, ಹನುಮಂತಪ್ಪ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.