ADVERTISEMENT

ಗೌರಿ ಗಣೇಶನ ಹಬ್ಬ: ಶಾಂತಿಯುತವಾಗಿ ಹಬ್ಬ ಆಚರಿಸಿ- ಜಿಲ್ಲಾಧಿಕಾರಿ ನಿತೀಶ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2025, 7:25 IST
Last Updated 17 ಆಗಸ್ಟ್ 2025, 7:25 IST
ರಾಯಚೂರಿನ ಹೊಸ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಮಾತನಾಡಿದರು. ಹರೀಶ್, ಜುಬಿನ್‌ ಮೊಹಾಪಾತ್ರ ಹಾಗೂ ಕುಮಾರಸ್ವಾಮಿ ಉಪಸ್ಥಿತರಿದ್ದರು
ರಾಯಚೂರಿನ ಹೊಸ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ನಡೆದ ಶಾಂತಿ ಪಾಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಮಾತನಾಡಿದರು. ಹರೀಶ್, ಜುಬಿನ್‌ ಮೊಹಾಪಾತ್ರ ಹಾಗೂ ಕುಮಾರಸ್ವಾಮಿ ಉಪಸ್ಥಿತರಿದ್ದರು   

ರಾಯಚೂರು: ‘ಜಿಲ್ಲೆಯಲ್ಲಿ ಗೌರಿ–ಗಣೇಶ ಹಬ್ಬವನ್ನು ಶಾಂತಿ, ಸೌಹಾರ್ದವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರೂ ನೆರವಾಗಬೇಕು’ ಎಂದು ಜಿಲ್ಲಾಧಿಕಾರಿ ನಿತೀಶ್ ಕೆ. ಹೇಳಿದರು.

ಇಲ್ಲಿಯ ನೂತನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣೇಶ ಹಬ್ಬದ ಪ್ರಯುಕ್ತ ಶನಿವಾರ ನಡೆದ ಶಾಂತಿ ಪಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಸ್ಥಾಪನೆ ಮಾಡಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಪಾಲಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ರಾಯಚೂರು ಭಾವೈಕ್ಯತೆಗೆ ಹೆಸರು ಪಡೆದಿದೆ. ಎಲ್ಲ ಸಮಾಜದವರು ಭಾವೈಕ್ಯದಿಂದ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬಳಸಬೇಕು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು’ ಎಂದು ಮನವಿ ಮಾಡಿದರು.

‘ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ರಸ್ತೆ ಮಧ್ಯೆ ಗಣೇಶನ ಪ್ರತಿಷ್ಠಾಪನೆ ಮಾಡಿದರೆ ಸುಗಮ ಸಂಚಾರಕ್ಕೆ ತೊಂದರೆಯಾಗಲಿದೆ. ಹೀಗಾಗಿ ರಸ್ತೆ ನಡುವೆ ಗಣೇಶನನ್ನು ಕೂಡಿಸುವುದು ಬೇಡ. ಗಣೇಶನ ಪ್ರತಿಷ್ಠಾಪನೆಗೆ ಪೂರ್ವ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ’ ಎಂದು ಹೇಳಿದರು.

‘ಗಣೇಶ ವಿಸರ್ಜನೆಯ ದಿನಗಳಂದು ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಕ್ರಮ ವಹಿಸಬೇಕು. ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಗಣೇಶ ವಿಸರ್ಜನೆಯ ದಿನ ಸಂಚಾರಕ್ಕೆ ಅಡೆತಡೆಯಾಗದಂತೆ ಮೊದಲೇ ಸಂಚಾರ ಮಾರ್ಗ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಮುನ್ಸೂಚನೆ ನೀಡಬೇಕು’ ಎಂದರು.

‘ಪೊಲೀಸ್‌ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಆಯಕಟ್ಟಿನ ಪ್ರದೇಶಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು’ ಎಂದು ಸೂಚನೆ ನೀಡಿದರು.

‘ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳು ಜಂಟಿ ತಪಾಸಣೆ ಮಾಡಿ ನಿಯಮಾನುಸಾರ ಪರವಾನಗಿ ನೀಡಲು ಕ್ರಮ ವಹಿಸಬೇಕು. ರಾತ್ರಿ 10.30ರೊಳಗಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು’ ಎಂದು ಸೂಚಿಸಿದರು.

ಮಹಾನಗರ ಪಾಲಿಕೆ ಆಯುಕ್ತ ಜುಬಿನ್ ಮೊಹಾಪಾತ್ರ ಮಾತನಾಡಿ, ‘ಪರಿಸರಕ್ಕೆ ಹಾನಿಯಾಗದಂತೆ ಗಣೇಶೋತ್ಸವ ಆಚರಣೆ ಮಾಡಬೇಕು. ಎಲ್ಲ ಜಿಲ್ಲೆಗಳಲ್ಲೂ ಪಿಒಪಿ ಗಣೇಶ ಮೂರ್ತಿ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ರಾಯಚೂರು ನಗರದ ಜನತೆ ಸಹಕಾರ ನೀಡಬೇಕು’ ಎಂದು ಕೋರಿದರು.

ಎರಡನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಮಾಜದ ಮುಖಂಡರು, ಗಜಾನನ ಮಂಡಳಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಿಗಿ ಪೊಲೀಸ್‌ ಬಂದೋಬಸ್ತ್

‘ಗಣೇಶೋತ್ಸವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಒದಗಿಸಲಾಗುವುದು’ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹರೀಶ ಜಿ. ತಿಳಿಸಿದರು. ‘ಸೆಪ್ಟೆಂಬರ್ 4ರಂದು ಒಂಬತ್ತನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆಯಾಗಲಿದೆ. ಮರುದಿನ ಸೆ.5ಕ್ಕೆ ಈದ್ ಮಿಲಾದ್ ಇರುವ ಕಾರಣ ಪೊಲೀಸ್ ಬಂದೋಬಸ್ತ್‌ಗೆ ಒತ್ತಡ ಬೀಳಲಿದೆ. ಒಂಬತ್ತನೇ ದಿನದ ಗಣೇಶ ಮೂರ್ತಿಗಳನ್ನು ಬೇಗ ವಿಸರ್ಜನೆ ಮಾಡಬೇಕು’ ಎಂದು ಹೇಳಿದರು. ಮುಖಂಡರಾದ ಶ್ರೀನಿವಾಸ ಪತಂಗೆ ಮಾತನಾಡಿ ‘ಗಣೇಶ ಪ್ರತಿಷ್ಠಾಪನಾ ಸಮಿತಿಗಳು ಇಲಾಖೆಗಳೊಂದಿಗೆ ಸಹಕರಿಸಲಿವೆ’ ಎಂದು ತಿಳಿಸಿದರು. ಮುಖಂಡ ರವೀಂದ್ರ ಜಲ್ದಾರ್ ಮಾತನಾಡಿ ‘ಆರು ತಿಂಗಳ ಮೊದಲೇ ವ್ಯಾಪಾರಸ್ಥರು ಹಾಗೂ ಮೂರ್ತಿಕಾರರಿಗೆ ಪಿಒಪಿ ಗಣೇಶನ ಮೂರ್ತಿಗಳನ್ನು ನಿಷೇಧಿಸಿರುವ ಮಾಹಿತಿ ಕೊಡಬೇಕು. ಈಗ ಮೂರ್ತಿಗಳನ್ನು ವಶಕ್ಕೆ ತೆಗೆದುಕೊಂಡು ವ್ಯಾಪಾರಸ್ಥರಿಗೆ ಹಾನಿ ಉಂಟು ಮಾಡಲಾಗಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.