ರಾಯಚೂರು:ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿ (ಕೆಕೆಆರ್ಡಿಬಿ)ಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಕೆಕೆಆರ್ಡಿಬಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಾಸ್ತವದಲ್ಲಿ ಹಲವು ಕಾಮಗಾರಿಗಳು ಪೂರ್ಣಗೊಂಡು ಭೌತಿಕವಾಗಿ ಸಾಧನೆ ಮಾಡಲಾಗಿದೆ. ಆದರೆ ಆರ್ಥಿಕ ಪ್ರಗತಿ ಕೂಡ ಅಷ್ಟೇ ಮುಖ್ಯ, ಭೌತಿಕ ಹಾಗೂ ಆರ್ಥಿಕ ಪ್ರಗತಿಗಳೆರೆಡನ್ನೂ ಪೂರ್ಣಗೊಳಿಸುವುದು ಸಂಬಂಧಿಸಿದ ಅಧಿಕಾರಿಗಳ ಕರ್ತವ್ಯ. ಬಿಲ್ ಪಾವತಿಯಲ್ಲಿ ಸಮಸ್ಯೆ ಎದುರಾದರೇ ಅದನ್ನು ಮಂಡಳಿಯೊಂದಿಗೆ ಚರ್ಚಿಸಿ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಕೆಕೆಆರ್ಡಿಬಿಯಿಂದ ಕೈಗೊಂಡ ಕಾಮಗಾರಿಗಳು ಪೂರ್ಣಗೊಂಡ ನಂತರ ಅವುಗಳ ಭೌತಿಕ ಹಾಗೂ ಆರ್ಥಿಕ ವಿವರವನ್ನು ವೆಬ್ಸೈಟ್ನಲ್ಲಿ ಅಪ್ಡೆಟ್ ಮಾಡಬೇಕು. ಇಲ್ಲದಿದ್ದಲ್ಲೀ ಕಾಮಗಾರಿಗಳು ಪೂರ್ಣಗೊಂಡಿಲ್ಲ ಎಂಬ ಮಾಹಿತಿ ರವಾನೆಯಾಗುತ್ತದೆ. 2014-15ನೇ ಸಾಲಿನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಳ್ಳಲಾದ ಎರಡು ಕಾಮಗಾರಿಗಳು ಇನ್ನೂ ಬಾಕಿ ಉಳಿದಿವೆ ಎಂದು ಮಾಹಿತಿ ಇದೆ. ಕೆಕೆಆರ್ಡಿಬಿಯ ಮೈಕ್ರೋ ಯೋಜನೆಯಡಿ ಜಿಲ್ಲಾ ಮುಖ್ಯ ರಸ್ತೆ ನಿರ್ಮಾಣದಡಿ ಮಲ್ಲಟಕ್ರಾಸ್ನಿಂದ ಅಮರಾಪುರ ಕ್ರಾಸ್ ವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಇನ್ನೂ ಬಾಕಿ ಉಳಿದಿರುವುದು ದಾಖಲಾತಿಗಳಲ್ಲಿ ಇದೆ ಎಂದು ಹೇಳಿದರು.
ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಾತನಾಡಿ, ಕಾಮಗಾರಿ ಪೂರ್ಣಗೊಂಡಿದೆ. ಆದರೆ ಆರ್ಥಿಕ ಪ್ರಗತಿಯನ್ನು ಮಂಡಳಿಯ ವೆಬ್ಸೈಟ್ನಲ್ಲಿ ಅಳವಡಿಸಿಲ್ಲ ಎಂದರು.
ಆರ್ಥಿಕ ಪ್ರಗತಿಯ ವಿವರವನ್ನು ದಾಖಲಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಕೆಕೆಆರ್ಡಿಬಿಯಿಂದ ವಿವಿಧ ಇಲಾಖೆಗಳ ಸಹಯೋಗದಡಿ ಕೈಗೊಳ್ಳಲಾದ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ, ಅದರ ಭೌತಿಕ ಹಾಗೂ ಆರ್ಥಿಕ ಪ್ರಗತಿಯನ್ನು ಕೂಡಲೇ ವೆಬ್ಸೈಟ್ನಲ್ಲಿ ಅಳವಡಿಸುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ತಾಕೀತು ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.