ADVERTISEMENT

‘17 ರಂದು ಉಸ್ತುವಾರಿ ಸಚಿವರಿಗೆ ಘೇರಾವ್’

​ಪ್ರಜಾವಾಣಿ ವಾರ್ತೆ
Published 14 ಸೆಪ್ಟೆಂಬರ್ 2020, 7:48 IST
Last Updated 14 ಸೆಪ್ಟೆಂಬರ್ 2020, 7:48 IST

ರಾಯಚೂರು: ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಬಾಕಿ ವೇತನ, ಭತ್ಯೆಗೆ ಒತ್ತಾಯಿಸಿ ಸೆಪ್ಟಂಬರ್ 17ರಂದು ನಡೆಯುವ ಕಲ್ಯಾಣ ಕರ್ನಾಟಕ ದಿನಾಚರಣೆ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರಿಗೆ ನಗರದ ಅಂಬೇಡ್ಕರ್, ಬಸವೇಶ್ವರ ಹಾಗೂ ಟಿಪ್ಪು ಸುಲ್ತಾನ್ ವೃತ್ತದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸಲಾಗುವುದು ಎಂದು ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ಸಂಘಟನೆಯ ರಾಜ್ಯಾಧ್ಯಕ್ಷ ಆರ್.ಮಾನಸಯ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕಾರ್ಮಿಕರು ಕೆಲಸವಿಲ್ಲದೆ ಸಂಕಷ್ಟಕ್ಕೀಡಾಗಿದ್ದಾರೆ. ಜಿಲ್ಲೆಯ ವಸತಿ ನಿಲಯ ಹಾಗೂ ವಸತಿ ಶಾಲೆಗಳ ಕಾರ್ಮಿಕರ, ತುಂಗಭದ್ರಾ ಹಂಗಾಮಿ ಕಾರ್ಮಿಕರ 14 ತಿಂಗಳ ಬಾಕಿ ವೇತನ ಪಾವತಿಸಬೇಕು. ಹಟ್ಟಿ ಚಿನ್ನದ ಗಣಿ ಯು ಕಾರ್ಮಿಕರ ಅಡುಗೆ ಅನಿಲ ಹಾಗೂ ಟಿವಿ ಭತ್ಯೆ ಕಡಿತ ಮಾಡುವ ನಿರ್ಧಾರ ಕೈಗೊಂಡಿದೆ ಎಂದು ಆರೋಪಿಸಿದರು.

ಆರ್‌ಟಿಪಿಎಸ್‌ನಲ್ಲಿ ಸಾವಿರಕ್ಕೂ ಅಧಿಕ ಕಾರ್ಮಿಕರನ್ನು ಕಾರಣವಿಲ್ಲದೇ ಕೆಲಸದಿಂದ ತೆಗೆದು ಹಾಕಿದ್ದು, ಪುನಃ ಕೆಲಸಕ್ಕೆ ನೇಮಿಸಿಕೊಳ್ಳಬೇಕು ಎಂದು ಒತ್ತಾಯಿಸಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಘೇರಾವ್ ಹಾಕಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಜಿ.ಅಮರೇಶ, ಮುಖಂಡ ಅಮೀರ ಅಲಿ, ಜಿ.ಅಡವಿರಾವ್, ಶಿವಯ್ಯ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.