ADVERTISEMENT

‘ಸರ್ಕಾರದ ಯೋಜನೆ ಸದುಪಯೋಗ ಮಾಡಿಕೊಳ್ಳಿ’

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2020, 10:18 IST
Last Updated 23 ಫೆಬ್ರುವರಿ 2020, 10:18 IST
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ಅವರು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿದರು
ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ ಅವರು ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಿಸಿದರು   

ರಾಯಚೂರು: ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರವು ಹೆಚ್ಚಿನ ಆದ್ಯತೆ ನೀಡುತ್ತಿದೆ. ಇದಕ್ಕಾಗಿ ಕಟ್ಟಡ ಹಾಗೂ ಮೂಲಸೌಲಭ್ಯ ಒದಗಿಸುವುದರ ಜೊತೆಗೆ ವಿದ್ಯಾರ್ಥಿಗಳ ಕೌಶಲ ವೃದ್ಧಿಗಾಗಿ ಲ್ಯಾಪ್‌ಟಾಪ್‌ ವಿತರಿಸುತ್ತಿದೆ. ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಶಾಸಕ ಡಾ.ಶಿವರಾಜ ಪಾಟೀಲ ಸಲಹೆ ನೀಡಿದರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಏರ್ಪಡಿಸಿದ್ದ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶೈಕ್ಷಣಿಕ ಪ್ರಗತಿಗಾಗಿ ಸರ್ಕಾರ ಪ್ರತಿವರ್ಷ ಕೋಟ್ಯಂತರ ಅನುದಾನ ಬಿಡುಗಡೆ ಮಾಡುತ್ತಿದೆ. ಇಂದಿನ ದಿನಗಳಲ್ಲಿಸ್ಪರ್ಧೆ ಹೆಚ್ಚಿದೆ. ವಿದ್ಯಾರ್ಥಿಗಳು ಸರ್ಕಾರ ನೀಡಿರುವ ಲ್ಯಾಪ್‌ಟಾಪ್'ಅನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಬಳಸಿಕೊಳ್ಳಬೇಕು. ಸರ್ಕಾರಿ ಅಥವಾ ಖಾಸಗಿಯ ಪ್ರತಿಷ್ಠಿತ ಸಂಸ್ಥೆಗಳಲ್ಲಿ ನೌಕರಿ ಹಿಡಿಯುವಂತಾಗಬೇಕು. ಆಗ ಮಾತ್ರ ಸರ್ಕಾರದ ಯೋಜನೆಗಳ ಜಾರಿ ಮಾಡಿದ್ದಕ್ಕೆ ಸಾರ್ಥಕವಾಗುತ್ತದೆ ಎಂದು ಹೇಳಿದರು.

ADVERTISEMENT

ಕಾಲೇಜಿನ ಪ್ರಾಧ್ಯಾಪಕ ಡಾ.ಜೆ.ಎಲ್.ಈರಣ್ಣ ಮಾತನಾಡಿ, ಅತಿಹೆಚ್ಚು ಪಡೆದ ವಿದ್ಯಾರ್ಥಿಗಳಿರುವ ರಾಜ್ಯದ ಕೆಲವೇ ಕೆಲವು ಸರ್ಕಾರಿ ಪದವಿ ಕಾಲೇಜುಗಳಲ್ಲಿ ರಾಯಚೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜೂ ಒಂದು‌. ನುರಿತ ಸಿಬ್ಬಂದಿ ಹಾಗೂ ಗುಣಮಟ್ಟದ ಶಿಕ್ಷಣ ಇರುವ ಕಾರಣ ಹೆಚ್ಚಿನ ಸಂಖ್ಯೆಯಲ್ಲಿ ಪ್ರವೇಶ ಪಡೆಯುತ್ತಿದ್ದಾರೆ. ಅಲ್ಲದೇ, ಶೈಕ್ಷಣಿಕ ಸ್ಪರ್ಧೆಗಳು, ವಿಚಾರ ಸಂಕಿರಣಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.

ಪ್ರಭಾರಿ ಪ್ರಾಂಶುಪಾಲ ಆರ್.ಮಲ್ಲನಗೌಡ ಮಾತನಾಡಿ, ವಿದ್ಯಾರ್ಥಿನಿಯರು ಕೇವಲ ಪದವಿಗಳಿಗೆ ಮಾತ್ರ ಸೀಮಿತಗೊಳ್ಳದೇ, ಶಿಕ್ಷಣದಿಂದ ಸಮಾಜದ ಮುಖ್ಯವಾಹಿನಿಗೆ ಬಂದು ತಮ್ಮದೇ ಆದ ಕೊಡುಗೆಗಳನ್ನು ನೀಡಿ ಸಮಾಜದ ಅಭಿವೃದ್ಧಿಗೆ ಕಾರಣವಾಗಬೇಕು ಎಂದು ಹೇಳಿದರು.

ನಗರಸಭೆ ಸದಸ್ಯ ಶರಣಬಸವ ಬಲ್ಲಟಗಿ, ಇಟಗಿ ಭೀಮಣ್ಣ, ಪ್ರಾಚಾರ್ಯ ಡಾ. ಎಂ.ಶಿವರಾಜಪ್ಪ, ಮಹಂತೇಶ್ ಅಂಗಡಿ, ಮಹಾದೇವಪ್ಪ, ಡಾ.ಶಿವಯ್ಯ ಹಿರೇಮಠ, ಡಾ. ಮಹೆಬೂಬ್ ಅಲಿ, ಸೈಯದ್ ಮಿನಾಜ್, ರವಿ, ಪುಶ್ಪ, ಸಪ್ನಾ, ವಿಜಯ್ ಸರೋದೆ, ಚಂದ್ರು ಗಬ್ಬೂರು ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.