ರಾಯಚೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಹಲವಾರು ಸೌಲಭ್ಯ ಹಾಗೂ ಯೋಜನೆಯನ್ನು ಸಿಗುವಂತೆ ಕೆಲಸ ಮಾಡುತ್ತಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಕೋವಿಡ್ ಸಂದರ್ಭದಲ್ಲಿ ಸರ್ಕಾರ ಹಾಗೂ ಶೈಕ್ಷಣಿಕ ಸಂಸ್ಥೆಗಳು ಆನ್ಲೈನ್ ಶಿಕ್ಷಣಕ್ಕೆ ಒತ್ತು ನೀಡಿದ್ದು ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಹಾಗೂ ಟ್ಯಾಬ್ ವಿತರಣೆ ಕಾರ್ಯ ಶ್ಲಾಘನೀಯ ಎಂದು ಬಿಜೆಪಿ ಎಸ್ಟಿ ಮೋರ್ಚಾದ ರಾಜ್ಯಾಧ್ಯಕ್ಷ ತಿಪ್ಪರಾಜು ಹವಾಲ್ದಾರ್ ಹೇಳಿದರು.
ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ತಾಲ್ಲೂಕು ಘಟಕದ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ರಾಯಚೂರು ತಾಲ್ಲೂಕಿನ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಜ್ಞಾನತಾಣ ಕಾರ್ಯಕ್ರಮದಡಿ ಟ್ಯಾಬ್ ಹಾಗೂ ಲ್ಯಾಪ್ಟಾಪ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆಯಂತೆ ಹಲವಾರು ಸಾಮಾಜಿ ಕಾರ್ಯಕ್ರಮ ನಿರ್ವಹಿಸುತ್ತಿರುವ ಧರ್ಮಸ್ಥಳ ಸಂಸ್ಥೆ ಪ್ರಸ್ತುತ ರಾಜ್ಯದಾದ್ಯಂತ ಸಂಘದ ಸದಸ್ಯರ ಮಕ್ಕಳಿಗೆ ಲ್ಯಾಪ್ ಟಾಪ್ ನೀಡುವ ಕಾರ್ಯ ಶ್ಲಾಘನೀಯವಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಆನ್ ಲೈನ್ ಶಿಕ್ಷಣ ವ್ಯವಸ್ಥೆಯಲ್ಲಿ ಬಡ ಮಕ್ಕಳು ಶಿಕ್ಷಣ ವಂಚಿತರಾಗದಂತೆ ಯೋಜನೆ ರೂಪಿಸಿದ್ದು ಮಾದರಿಯಾಗಿದೆ ಎಂದರು.
ತಾಲ್ಲೂಕು ಯೋಜನಾಧಿಕಾರಿ ರಘುಪತಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಗ್ರಾಮೀಣಾಭಿವೃದ್ಧಿ ಸಂಸ್ಥೆಯಿಂದ ಮದ್ಯವರ್ಜನಾ ಶಿಬಿರ, ವಿಕಲಾಂಗರಿಗೆ ವ್ಹೀಲ್ ಚೇರ್, ವಾಕರ್ ವಿತರಣೆ, ಶೌಚಾಲಯ ನಿರ್ಮಾಣ, ಗ್ರಾಮೀಣ ನೈರ್ಮಲ್ಯ ಹಾಗೂ ಹಲವಾರು ಸಾಮಾಜಿಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜ್ಞಾನ ತಾಣ ಎಂಬ ಅಭಿಯಾನದಡಿ ಆಧುನಿಕ ಶಿಕ್ಷಣ ವ್ಯವಸ್ಥೆಯ ಮೂಲಕ ಬಡ ಮಕ್ಕಳ ಜ್ಞಾನಾರ್ಜನೆಗೆ ಶ್ರಮಿಸುತ್ತಿದೆ ಎಂದು ಹೇಳಿದರು.
ಐಡಿಬಿಐ ಬ್ಯಾಂಕ್ನ ವ್ಯವಸ್ಥಾಪಕ ನಿತಿನ್ ಮಾತನಾಡಿದರು. ಜಿಲ್ಲಾ ಯೋಜನಾಧಿಕಾರಿ ಉಮೇಶ, ಮೇಲ್ವಿಚಾರಕರಾದ ಪ್ರವೀಣಕುಮಾರ, ಸರಸ್ವತಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ವೆಂಕಟಮಾಲಾ ಹಾಗೂ ಮತ್ತಿತರರು ಇದ್ದರು. ನಾಗೇಂದ್ರ ಸ್ವಾಮಿ ನಿರೂಪಿಸಿದರು. ನಾಗರಾಜ ವಂದಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.